ಬೆಂಗಳೂರಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳ; ಅಭ್ಯರ್ಥಿಗಳ ವಿದ್ಯಾರ್ಹತೆ
ಬೆಂಗಳೂರು, ಫೆಬ್ರವರಿ 20; ಬೆಂಗಳೂರು ನಗರದಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಫೆಬ್ರವರಿ 26 ಮತ್ತು 27 ರಂದು ಆಯೋಜನೆ ಮಾಡಲಾಗಿದೆ. ಈ ಕುರಿತು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿಯೂ ಪ್ರಚಾರವನ್ನು ನಡೆಸಲಾಗುತ್ತಿದೆ. ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿದೆ. ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರ ನೋಂದಣಿ ನಡೆಯುತ್ತಿದೆ.

ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ, ಬೃಹತ್ ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಜಿಲ್ಲೆಗಳಲ್ಲಿ ಸಭೆಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯ ಅಭ್ಯರ್ಥಿಗಳು ಸಹ ನೋಂದಣಿ ಮಾಡಿಕೊಳ್ಳುವಂತೆ ಕರೆ ನೀಡಲಾಗುತ್ತಿದೆ. ವ್ಯಾಪಕ ಪ್ರಚಾರವನ್ನು ಕೈಗೊಳ್ಳಲಾಗಿದೆ.
ವಿದ್ಯಾರ್ಹತೆಯ ವಿವರ; ಬೃಹತ್ ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಲಾಗಿದೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಸೇರಿದಂತೆ ಎಲ್ಲಾ ವಿದ್ಯಾರ್ಹತೆ ಹೊಂದಿರುವವರು ಮೇಳದಲ್ಲಿ ಪಾಲ್ಗೊಳ್ಳಬಹುದು.
ಕರಪತ್ರ ಮೂಲಕ ಮಾಹಿತಿ ನೀಡುವುದು, ನಗರ ಸ್ಥಳೀಯ ಸಂಸ್ಥೆ ಮೂಲಕ ಮಾಹಿತಿ ನೀಡುವುದು, ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಸಹಕಾರ ಪಡೆದು ಹೆಚ್ಚಿನ ಮಾಹಿತಿ ನೀಡುವುದು, ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಕಚೇರಿ, ತಾಲ್ಲೂಕು ಪಂಚಾಯಿತಿ, ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿ, ಅಂಗನವಾಡಿ ಕಾರ್ಯಕರ್ತರು, ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮೂಲಕ ಬೃಹತ್ ಉದ್ಯೋಗ ಮೇಳದ ಕುರಿತು ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ.
ಈ ರಾಜ್ಯ ಮಟ್ಟದ ಉದ್ಯೋಗ ಮೇಳದಲ್ಲಿ 50 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಹಾಗೂ ರಾಜ್ಯದ ಎಲ್ಲಾ ವಲಯಗಳಿಂದ ಪ್ರತಿಷ್ಠಿತ ಬೃಹತ್, ಮಧ್ಯಮ ಮತ್ತು ಸಣ್ಣ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸಲಿವೆ. ಯುವ ಜನತೆಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಕೈಗೊಂಡ ಪ್ರಮುಖ ಕಾರ್ಯಕ್ರಮ ಇದಾಗಿದೆ.
ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಬಯಸುವ ಅಭ್ಯರ್ಥಿಗಳು ನೋಂದಣಿಗಾಗಿ https://skillconnect.kaushalkar.com ವೆಬ್ಸೈಟ್ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 18005999918.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯೋಜನೆ 'ಯುವನಿಧಿ'ಗೆ ಚಾಲನೆ ನೀಡುವಾಗಲೇ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಬೆಂಗಳೂರನಲ್ಲಿ ಆಯೋಜನೆ ಮಾಡಲಾಗುತ್ತದೆ ಎಂದು ಹೇಳಿದ್ದರು. ಈಗ ದಿನಾಂಕವನ್ನು ನಿಗದಿ ಮಾಡಿ, ನೋಂದಣಿ ಆರಂಭಿಸಲಾಗಿದೆ.












Click it and Unblock the Notifications