ಬ್ಯಾಕ್ ಲಾಗ್ ಹುದ್ದೆಗಳ ನೇರ ನೇಮಕಾತಿಗೆ ತಡೆ ವಿಧಿಸಿದ ಸರ್ಕಾರ
ಬೆಂಗಳೂರು, ಜುಲೈ.06: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವುದಕ್ಕೆ ಸರ್ಕಾರವು ಹರಸಾಹಸ ಪಡುವಂತಾ ಸ್ಥಿತಿ ನಿರ್ಮಾಣವಾಗಿದೆ. 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಬ್ಯಾಕ್ ಲಾಗ್ ಹುದ್ದೆಗಳು ಸೇರಿದಂತೆ ಎಲ್ಲ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದೆ.
ರಾಜ್ಯದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಶಿಸ್ತುಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಹಿನ್ನೆಲೆ ಮುಂದಿನ ಆದೇಶದವರೆಗೂ ನೇರ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದೆ.
ಖಾಸಗಿ ಉದ್ಯೋಗದಲ್ಲಿ ಸ್ಥಳೀಯರಿಗೆ ಶೇ 75ರಷ್ಟು ಮೀಸಲಾತಿ
ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ಉದ್ದೇಶದಿಂದ ಸಂಪನ್ಮೂಲ ಕ್ರೂಢೀಕರಿಸುವುದು ಅಗತ್ಯವಾಗಿದೆ. ಹೀಗಾಗಿ ಸರ್ಕಾರದ ವೆಚ್ಚದ ಬಾಬ್ತಿನಲ್ಲಿ ಮಿತವ್ಯಯ ಪಾಲಿಸುವ ಅನಿವಾರ್ಯತೆಯು ಎದುರಾಗಿದೆ.
ರಾಜ್ಯದಲ್ಲಿ ಈಗಾಗಲೇ ಆರ್ಥಿಕ ಇಲಾಖೆ ಅನುಮತಿ ಪಡೆದು ನೇಮಕಾತಿಯ ವಿವಿಧ ಹಂತಗಳಲ್ಲಿರುವ ಹುದ್ದೆಗಳಿಗೂ ಸಹ ಈ ಆದೇಶವು ಅನ್ವಯವಾಗುತ್ತದೆ ಎಂದು ರಾಜ್ಯ ಆರ್ಥಿಕ ಇಲಾಖೆಯ ಅಪರ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್ ಅವರು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.