ಶಿವಮೊಗ್ಗ ಕೋರ್ಟ್ನಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ
ಶಿವಮೊಗ್ಗ, ಡಿಸೆಂಬರ್ 27; ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚು-ನಕಲುಗಾರರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಜನವರಿ 30, 2022 ಕೊನೆಯ ದಿನ.
ಒಟ್ಟು 4 ಬೆರಳಚ್ಚು-ನಕಲುಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದೆ. ಡಿಸೆಂಬರ್ 27 ರಿಂದ 2022ರ ಜನವರಿ 30ರ ರಾತ್ರಿ 11.59ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಯು ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆ ಉತ್ತೀರ್ಣಗೊಂಡಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅಭ್ಯರ್ಥಿಯು ಕನಿಷ್ಠ ವಯೋಮಿತಿ 18 ವರ್ಷ. ಸಾಮಾನ್ಯ ವರ್ಗಕ್ಕೆ 35 ವರ್ಷಗಳು, 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಟ ವಯೋಮಿತಿ ನಿಗದಿ ಮಾಡಲಾಗಿದೆ.
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 200 ರೂ., ಪ್ರವರ್ಗ- 2ಎ/ 2ಬಿ ಮತ್ತು 3ಎ/ 3ಬಿ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ, ಸೂಚನೆಗಳು, ಹುದ್ದೆ ವರ್ಗೀಕರಣ, ವಯೋಮಿತಿ ಸಡಿಲಿಕೆ, ಆಯ್ಕೆ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ನೋಡಬಹುದು.
ಮಹಿಳೆಯರಿಂದ ಅರ್ಜಿ ಆಹ್ವಾನ; ಪಶುಪಾಲನಾ ಮತ್ತು ಪಶು ವೈದ್ಯಸೇವಾ ಇಲಾಖೆಯಿಂದ ಪ್ರಸಕ್ತ 2021-22ನೇ ಸಾಲಿಗಾಗಿ ವಿಸ್ತರಣಾ ಘಟಕ ಬಲಪಡಿಸುವಿಕೆ ಕಾರ್ಯಕ್ರಮದಡಿ ಹಿತ್ತಲು ಕೋಳಿ ಸಾಕಾಣಿಕೆ ಕೈಗೊಳ್ಳಲು ಆಸಕ್ತ ರೈತ ಮಹಿಳೆಯರಿಂದ ಅರ್ಜಿ ಕರೆಯಲಾಗಿದೆ.
ಯೋಜನೆಯಡಿ 1 ಘಟಕಕ್ಕೆ 6 ವಾರಗಳ ವಯಸ್ಸಿನ 5 ಕೋಳಿ ಮರಿಗಳನ್ನು ವಿತರಣೆ ಮಾಡಲಾಗುತ್ತದೆ. 1 ಘಟಕ ವೆಚ್ಚ 550 ರೂ.. ಧಾರವಾಡ ಜಿಲ್ಲೆಗೆ ಒಟ್ಟು 352 ಘಟಕಗಳ ಗುರಿ ನಿಗದಿ ಮಾಡಲಾಗಿದೆ. ಸರ್ಕಾರದ ನಿಯಮಗಳ ಅನ್ವಯ ಫಲಾನುಭವಿಗಳ ಆಯ್ಕೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ದಿವ್ಯಾಂಗರಿಗೆ ಮೀಸಲಾತಿ ನೀಡಲಾಗುತ್ತದೆ.
ಅರ್ಜಿಗಳನ್ನು ಕಡ್ಡಾಯವಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಸಲ್ಲಿಸಬೇಕು. ಫಲಾನುಭವಿಗಳನ್ನು ಸರ್ಕಾರದ ನಿಯಮಗಳ ಅನ್ವಯ ಆಯ್ಕೆ ಮಾಡಿ ಜಿಲ್ಲಾ ಪಂಚಾಯಿತಿ ಅನುಮೋದನೆ ಪಡೆದು ಯೋಜನೆ ಅನುಷ್ಠಾನ ಮಾಡಲಾಗುತ್ತದೆ.
ಆಸಕ್ತರ ಮಹಿಳೆಯರು ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅರ್ಜಿಗಳಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜನವರಿ 10ರೊಳಗೆ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತಾತ್ಕಾಲಿಕ ಹುದ್ದೆಗೆ ಅರ್ಜಿ ಹಾಕಿ; ಧಾರವಾಡ ಕೃಷಿ ಮಹಾವಿದ್ಯಾಲಯದ ಜೀವ ರಸಾಯನಶಾಸ್ತ್ರ ವಿಭಾಗದಲ್ಲಿ ಪದವೀಧರ ಸಹಾಯಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಕರೆಯಲಾಗಿದೆ. 179 ದಿನಗಳ ಅವಧಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಎಸ್ಸಿ (ಅಗ್ರೀ) ಸಸ್ಯ ಜೀವರಸಾಯಶಾಸ್ತ್ರ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಹ, ಅನುಭವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ನಮೂನೆಗಳೊಂದಿಗೆ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳ ಎರಡು ಪ್ರತಿಗಳನ್ನು ನೇರ ಸಂದರ್ಶನಕ್ಕೆ ತರಬೇಕು.
ನೇರ ಸಂದರ್ಶನ ಜನವರಿ 3, 2022 ರಂದು ಬೆಳಗ್ಗೆ 11 ಗಂಟೆಗೆ ಧಾರವಾಡ ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ಕಛೇರಿಯಲ್ಲಿ ನಡೆಯಲಿದೆ.












Click it and Unblock the Notifications