ಗ್ರಾಮ ಲೆಕ್ಕಿಗರ ನೇಮಕಾತಿಯಲ್ಲಿ ಬದಲಾವಣೆ, ಸ್ಪರ್ಧಾತ್ಮಕ ಪರೀಕ್ಷೆ?
ಬೆಂಗಳೂರು, ಅಕ್ಟೋಬರ್ 07; ಕಂದಾಯ ಇಲಾಖೆಯ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಬಗ್ಗೆ ಸಲಹೆ ನೀಡಲು ಸಲಹಾ ಸಮಿತಿ ರಚಿಸಲು ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಕಂದಾಯ ಇಲಾಖೆಯ ಗ್ರಾಮಲೆಕ್ಕಿಗರ ಹುದ್ದೆಯನ್ನು ಕರ್ನಾಟಕ ಜನರಲ್ ಸರ್ವೀಸಸ್ (Revenue Subordinate Branch) (Cadre & Recruitment)(ತಿದ್ದುಪಡಿ) ನಿಯಮಗಳು 2008 ಮತ್ತು 2009 ಹಾಗೂ ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ಪ್ರಕಾರ ನೇಮಕಾತಿ ಮಾಡಲಾಗುತ್ತಿತ್ತು.
ಅಭ್ಯರ್ಥಿಗಳನ್ನು ಅವರು ದ್ವೀತಿಯ ಪಿಯುಸಿ ಪರೀಕ್ಷೆ ಅಥವಾ CBSE ಅಥವಾ ICSE ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಕ ಅಂಕಗಳ (On merit)ಆಧಾರದ ಮೇಲೆ ಆಯಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುತ್ತಿದೆ ಮತ್ತು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೇ ಆಯ್ಕೆ/ ನೇಮಕಾತಿ ಪ್ರಾಧಿಕಾರವಾಗಿರುತ್ತಾರೆ.
ಕೋವಿಡ್ ಸಾಂಕ್ರಾಮಿಕ ರೋಗದ ತೀವ್ರತೆ ಹೆಚ್ಚಾಗುತ್ತಿದ್ದ ಹಿನ್ನಲೆಯಲ್ಲಿ ಹಾಗೂ ವಿದ್ಯಾರ್ಥಿಗಳ ಮತ್ತು ಅವರ ಪರಿಸರದಲ್ಲಿರುವ ಎಲ್ಲಾ ಜನರ ಆರೋಗ್ಯದ ಹಿತದೃಪ್ಪಿಯಿಂದ 2020-21ನೇ ಸಾಲಿನ ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರದ್ದುಗೊಳಿಸಿ, ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಪಡೆದ ಶೇಕಡ 50ರಷ್ಟು ಹಾಗೂ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಶೇಕಡ 50ರಷ್ಟು ಅಂಕಗಳನ್ನು ಪರಿಗಣಿಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಂಕಗಳನ್ನು ನೀಡಿ ಫಲಿತಾಂಶವನ್ನು ಪ್ರಕಟಿಸುವಂತೆ ಸರ್ಕಾರ ಆದೇಶ ಹೊರಡಿಸಿರುತ್ತದೆ.
ಈ ಆದೇಶದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆಯದೇ ಉತ್ತೀರ್ಣರಾದವರುಗಳಲ್ಲಿ ಪ್ರತಿಶತ ಶೇಕಡ 100ಕ್ಕೆ 100ರಷ್ಟು ಅಂಕಗಳನ್ನು ಪಡೆದವರಾಗಿದ್ದು ಅವರುಗಳೇ ಆಯ್ಕೆಯಾಗುವುದರಿಂದ 2019-20ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದು ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಗ್ರಾಮಲೆಕ್ಕಿಗರ ಹುದ್ದೆಗೆ 2020-21ನೇ ಸಾಲಿನಲ್ಲಿ ಕೋವಿಡ್ ಕಾರಣದಿಂದ ಲಿಖಿತ ಪರೀಕ್ಷೆ ಬರೆಯದವರನ್ನು ಪರಿಗಣಿಸಬಾರದೆಂದು ಹಲವಾರು ಜಿಲ್ಲೆಗಳಿಂದ ನೇಮಕಾತಿ ಬಯಸಿರುವ ಅಭ್ಯರ್ಥಿಗಳಿಂದ ಆಕ್ಷೇಪಣೆಗಳು ಬಂದಿರುತ್ತವೆ.

ಸಲಹಾ ಸಮಿತಿ ರಚನೆ
ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಗಳನ್ವಯ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುತ್ತಿದ್ದು, ಇದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಗ್ರಾಮಲೆಕ್ಕಿಗರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ, ಸಾಧಕ ಭಾದಕಗಳನ್ನು ಪರಿಶೀಲಿಸಿ, ತೀರ್ಮಾನ ಕೈಗೊಳ್ಳಬೇಕಾಗಿರುತ್ತದೆ. ಆದುದರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಗ್ರಾಮಲೆಕ್ಕಿಗರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಸಾಧಕ ಭಾದಕಗಳನ್ನು ಪರಿಶೀಲಿಸಿ ಸಲಹೆ/ ವರದಿ ನೀಡಲು ಹಾಗೂ ಗ್ರಾಮಲೆಕ್ಕಿಗರ ನೇಮಕಾತಿಗೆ ಸಂಬಂಧಿಸಿದಂತೆ ಪ್ರಸ್ತುತ ಚಾಲ್ತಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡುವ ಬಗ್ಗೆಯೂ ಸಹ ಸಲಹೆ ನೀಡಲು ಸಲಹಾ ಸಮಿತಿಯೊಂದನ್ನು ರಚಿಸಲಾಗುತ್ತಿದೆ.

ಸಲಹಾ ಸಮಿತಿಯಲ್ಲಿ ಯಾರಿದ್ದಾರೆ?
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಗ್ರಾಮಲೆಕ್ಕಿಗರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಸಲಹೆ ನೀಡಲು ಸಲಹಾ ಸಮಿತಿಯನ್ನು ರಚನೆ ಮಾಡಲು ಆದೇಶ ಹೊರಡಿಸಲಾಗಿದೆ.
ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಸದಸ್ಯರಾಗಿ ಆಯುಕ್ತರು, ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಇರುತ್ತಾರೆ.
ಬೆಂಗಳೂರು ಗ್ರಾಮಾಂತರ, ಮೈಸೂರು, ಬೆಳಗಾವಿ, ಯಾದಗಿರಿ ಜಿಲ್ಲಾಧಿಕಾರಿಗಳು ಸದಸ್ಯರಾಗಿರುತ್ತಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯದರ್ಶಿಗಳು ಸಮಿತಿಯ ವಿಶೇಷ ಆಹ್ವಾನಿತರಾಗಿದ್ದಾರೆ.

ಸಲಹಾ ಸಮಿತಿ ಪರಿಶೀಲಿಸುವ ಅಂಶಗಳು
ಈ ಸಮಿತಿಯು ಗ್ರಾಮ ಲೆಕ್ಕಿಗರ ಹುದ್ದೆಯ ನೇಮಕಾತಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ತೆಗೆದುಕೊಂಡ ಶೇಕಡವಾರು ಅಂಕಗಳ ಮೇಲೆ ನೇಮಕಾತಿಯನ್ನು ತೆಗೆದುಕೊಳ್ಳುವ ಬದಲಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಅನುಸಾರ ನೇಮಕಾತಿ ಮಾಡಿಕೊಳ್ಳುವ ಅಂಶಗಳ ಮೇಲೆ ಸಾಧಕ/ ಭಾದಕಗಳ ಕುರಿತು ಶಿಫಾರಸು ಮಾಡಲಿದೆ.
ಕೋವಿಡ್ ಕಾಲದಲ್ಲಿ ಪರೀಕ್ಷೆಯನ್ನು ನಡೆಸಲು ದ್ವಿತೀಯ ಪಿಯುಸಿ ಅಭ್ಯರ್ಥಿಗಳಿಗೆ ಶೇಕಡ 100ಕ್ಕೆ 100 ರಷ್ಟು ಅಂಕಗಳನ್ನು ನೀಡಿದ್ದು, ಇದು ಅಭ್ಯರ್ಥಿಗಳ ಶೈಕ್ಷಣಿಕ ವಲಯದಲ್ಲಿ ದುಷ್ಪರಿಣಾಮ ಉಂಟಾಗಿ ಜ್ಞಾನವುಳ್ಳ ಅಭ್ಯರ್ಥಿಗಳನ್ನು ನೇಮಕಾತಿಗೆ ಪರಿಗಣಿಸಲು ಸಾಧ್ಯವಾಗದೇ ಇರುವುದರಿಂದ ಪ್ರತಿಶತ 100ಕ್ಕೆ 100 ರಷ್ಟು ನೀಡಿದ ಅಂಕಗಳ ಬದಲಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅವರುಗಳ ಜ್ಞಾನವನ್ನು ಒರೆಗೆ ಹಚ್ಚಿ ನಂತರ ಅಂತಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ ಪರಿಶೀಲಿಸಲಿದೆ.

ವೃಂದ ಮತ್ತು ನೇಮಕಾತಿ ನಿಯಮಗಳು
ಈ ಸಮಿತಿಯು ಗ್ರಾಮಲೆಕ್ಕಿಗರ ನೇಮಕಾತಿಗೆ ಸಂಬಂಧಿಸಿದಂತೆ ಚಾಲ್ತಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅಗತ್ಯವಿದ್ದಲ್ಲಿ ಸೂಕ್ತ ತಿದ್ದುಪಡಿ ತರುವ ಬಗ್ಗೆ ಪರಿಶೀಲನೆ ನಡೆಸಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಿದಲ್ಲಿ ಅದರಿಂದಾಗುವ ಪರಿಣಾಮದ ಸಾಧಕ/ ಭಾದಕಗಳ ಬಗ್ಗೆ ಸಲಹಾ ಸಮಿತಿಯು ಕೂಲಂಕುಷವಾಗಿ ಚರ್ಚಿಸಿ 15 ದಿನದಲ್ಲಿ ವರದಿ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.












Click it and Unblock the Notifications