ಹೆಚ್‌ಎಎಲ್‌ನಿಂದ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂನ್ 21; ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಸಚಿವರ ಜೊತೆ ನವದೆಹಲಿಗೆ ತೆರಳಿದ್ದಾರೆ. ರಾಷ್ಟ್ರಪತಿ, ವಿವಿಧ ಕೇಂದ್ರ ಸಚಿವರನ್ನು ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ. 'ಅನ್ನಭಾಗ್ಯ' ಅಕ್ಕಿ ವಿಚಾರದ ಜಟಾಪಟಿ ನಡುವೆಯೇ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ.

ಬುಧವಾರ ಬೆಳಗ್ಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಸಿದ್ದರಾಮಯ್ಯ ವಿಶೇಷ ವಿಮಾನದಲ್ಲಿ ನವದೆಹಲಿಗೆ ಪ್ರಯಾಣ ಬೆಳೆಸಿದರು. ಸಚಿವರಾದ ಜಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್‌ ಮುಂತಾದವರು ಮುಖ್ಯಮಂತ್ರಿಗಳ ಜೊತೆಗಿದ್ದರು.

Chief Minister Siddaramaiah New Delhi Tour On June 21

ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆ. ಎಚ್. ಮುನಿಯಪ್ಪ ಮಂಗಳವಾರ ರಾತ್ರಿಯೇ ದೆಹಲಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಸಂಪುಟದ ಇನ್ನೂ ಕೆಲವು ಸಚಿವರು ಸಹ ಮುಖ್ಯಮಂತ್ರಿಗಳ ಜೊತೆ ನವದೆಹಲಿ ಪ್ರವಾಸ ಕೈಗೊಂಡಿದ್ದಾರೆ.

ಅಮಿತ್ ಶಾ ಭೇಟಿ; ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಲಿದ್ದಾರೆ. ಸಿದ್ದರಾಮಯ್ಯ 2ನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಈ ಭೇಟಿ ನಡೆಯುತ್ತಿದೆ.

'ಅನ್ನಭಾಗ್ಯ' ಯೋಜನೆಗೆ ಅಕ್ಕಿ ಪೂರೈಕೆ ಮಾಡುವುದು ಸೇರಿದಂತೆ ಕರ್ನಾಟಕದ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಸಿದ್ದರಾಮಯ್ಯ ನೇತೃತ್ವದ ಸಚಿವರ ನಿಯೋಗ ವಿವಿಧ ಕೇಂದ್ರ ಸಚಿವರನ್ನು ಭೇಟಿ ಮಾಡಲಿದೆ.

ಬುಧವಾರ ಸಂಜೆ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಮತ್ತು ಪಕ್ಷದ ಇತರ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಸಂಜೆ ಕರ್ನಾಟಕದ ಸಚಿವರ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಪಾಲ್ಗೊಳ್ಳಲಿದ್ದಾರೆ. ಸಿದ್ದರಾಮಯ್ಯ 10 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿತ್ತು. ಆದರೆ ಅವರ ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲಾಗಿರುವುದರಿಂದ, ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದರು.

ಅನ್ನಭಾಗ್ಯ ಅಕ್ಕಿ ಪೂರೈಕೆ; ಕರ್ನಾಟಕ ಕಾಂಗ್ರೆಸ್ ಘೋಷಣೆ ಮಾಡಿರುವ 5 ಗ್ಯಾರಂಟಿ ಯೋಜನೆಗಳಲ್ಲಿ 'ಅನ್ನಭಾಗ್ಯ' ಯೋಜನೆಯಡಿ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್‌ ಹೊಂದಿರುವ ಕುಟುಂಬ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ವಿತರಣೆ ಮಾಡುವುದು ಸಹ ಸೇರಿದೆ.

ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಜುಲೈ 1ರಿಂದ ಅಕ್ಕಿ ಪೂರೈಕೆ ಮಾಡಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಆದರೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಕ್ಕಿ ಪೂರೈಕೆ ಸ್ಥಗಿತಗೊಳಿಸಿರುವ ಕಾರಣ 'ಅನ್ನಭಾಗ್ಯ' ಯೋಜನೆ ಜುಲೈ 1ರಿಂದ ಜಾರಿಗೆ ಬರುವ ಕುರಿತು ಪ್ರಶ್ನೆಗಳು ಎದ್ದಿವೆ.

ಕರ್ನಾಟಕದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆ. ಎಚ್. ಮುನಿಯಪ್ಪ ಕೇಂದ್ರ ಆಹಾರ ಸಚಿವರನ್ನು ಭೇಟಿಯಾಗಲಿದ್ದು, 'ಅನ್ನಭಾಗ್ಯ' ಯೋಜನೆಯಡಿ ಪೂರೈಕೆ ಮಾಡಲು ಮಾರುಕಟ್ಟೆ ದರದಲ್ಲಿ ಅಕ್ಕಿ ಪೂರೈಕೆ ಮಾಡಲು ಮನವಿ ಮಾಡಲಿದ್ದಾರೆ. ಸಿದ್ದರಾಮಯ್ಯ ಸಹ ಸಚಿವರನ್ನು ಭೇಟಿಯಾಗುವ ನಿರೀಕ್ಷೆ ಇದೆ.

'ಅನ್ನಭಾಗ್ಯ' ಯೋಜನೆ ಜಾರಿಗೆ ಅಕ್ಕಿ ಪೂರೈಕೆ ಮಾಡಲು ಕೇಂದ್ರ ಸರ್ಕಾರ ನಿರಾಕರಿಸುತ್ತಿದೆ, ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಸಿದ್ದರಾಮಯ್ಯ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡಿ ಗ್ಯಾರಂಟಿ ಯೋಜನೆಯಂತೆ ಹಂಚಲು ಸಹ ಪ್ರಯತ್ನ ನಡೆಸಿದ್ದಾರೆ.

ಕೇಂದ್ರ ಸರ್ಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆಜಿ ಅಕ್ಕಿ ನೀಡುತ್ತದೆ. ರಾಜ್ಯ ಸರ್ಕಾರ ತನ್ನ ಪಾಲಿನ 5 ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ ಎಂದು ಹೇಳಿದೆ. ಆದರೆ ಅಕ್ಕಿಯ ಪೂರೈಕೆಗೆ ಕೇಂದ್ರ ನಿರಾಕರಿಸಿದೆ ಎಂಬುದು ರಾಜ್ಯ ಸರ್ಕಾರದ ಆರೋಪವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+