ಬಿಸಿಲಿನಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ?
ಬೇಸಿಗೆ ಬಂತೆಂದರೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಹತ್ತು ಹಲವು ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಹಜ. ಹೀಗಾಗಿ ಬೇಸಿಗೆಯಲ್ಲಿನ ಆರೋಗ್ಯದ ಸಮಸ್ಯೆಗಳನ್ನು ತಡೆಗಟ್ಟಬೇಕಾದರೆ ನಾವು ಬೇಸಿಗೆಯನ್ನು ಎದುರಿಸಲು ನಾವು ಕೂಡ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳುವುದು ಬಹುಮುಖ್ಯವಾಗಿದೆ.
ಬೇಸಿಗೆಯಲ್ಲಿ ಅತಿಯಾದ ಬೆವರು ಮುಜುಗರ ತರುತ್ತದೆ. ಮೂಗು, ಕಿವಿ, ಬಾಯಿ, ಚರ್ಮಗಳಿಗೆ ಸಂಬಂಧಿಸಿದಂತೆ ಕಾಯಿಲೆಗಳಿದ್ದರೆ ವೈದ್ಯರಿಗೆ ತೋರಿಸಿ ಅವರು ನೀಡುವ ಸಲಹೆಗಳನ್ನು ಅನುಸರಿಸಬೇಕು. ಹೆಚ್ಚಿನ ಜನರಿಗೆ ಕಂಕುಳಿನಿಂದಲೇ ದುರ್ವಾಸನೆ ಬರುತ್ತದೆ. ಕಾರಣ ಕಂಕುಳಲ್ಲಿ ಬೆಳೆಯುವ ಅನಗತ್ಯ ಕೂದಲುಗಳನ್ನು ತೆಗೆಯದಿರುವುದು. ಇದನ್ನು ಆಗಾಗ್ಗೆ ತೆಗೆದು ಸ್ವಚ್ಛಗೊಳಿಸುತ್ತಿರಬೇಕು.

ಪ್ರತಿದಿನ ಕನಿಷ್ಟ ಎರಡು ಲೀಟರ್ನಷ್ಟು ನೀರನ್ನು ಕುಡಿಯಬೇಕು. ತಲೆ ಕೂದಲು ಕೂಡ ವಾಸನೆ ಬೀರುತ್ತದೆ. ಆದ್ದರಿಂದ ಯುವಕರಾದರೆ ಚಿಕ್ಕದಾಗಿ ಕ್ಷೌರ ಮಾಡಿ ತಲೆಯಲ್ಲಿನ ಹೊಟ್ಟನ್ನು ನಿಯಂತ್ರಿಸಲು ಮುಂದಾಗಬೇಕು. ಸ್ನಾನ ಮಾಡುವಾಗ ಕಂಕುಳು, ಕಿವಿ, ಸೇರಿದಂತೆ ಇನ್ನಿತರ ಭಾಗಗಳನ್ನು ಚೆನ್ನಾಗಿ ಸೋಪು ಬಳಸಿ ತೊಳೆಯಬೇಕು. ವ್ಯಾಯಾಮ, ಮುಂಜಾನೆ ವಾಕಿಂಗ್ ಮಾಡುವ ಅಭ್ಯಾಸ ರೂಢಿಸಿಕೊಳ್ಳಬೇಕು.
ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಿ
ಬಿಗಿಯಾದ ಉಡುಪುಗಳನ್ನು ಧರಿಸದೆ, ಶರೀರಕ್ಕೆ ಗಾಳಿಯಾಡುವ ಹಾಗೂ ಹತ್ತಿಬಟ್ಟೆಗೆ ಆದ್ಯತೆ ನೀಡಬೇಕು. ಬೇರೆಯವರು ಬಳಸಿದ ಟವಲ್ ಬಳಸದೆ ಒಗೆದು ಒಣಗಿಸಿ ಬಳಸಬೇಕು. ಬೇರೆಯವರಿಗೆ ಅಸಹ್ಯ ಎನಿಸದ ಉತ್ತಮ ಸುವಾಸನೆ ಬೀರುವ ಸುಗಂಧ ದ್ರವ್ಯಗಳನ್ನು ಲೇಪಿಸಿಕೊಳ್ಳಬೇಕು. ಅವು ಶರೀರಕ್ಕೆ ಒಗ್ಗುವಂತಿದ್ದರೆ ಮಾತ್ರ ಬಳಸಬೇಕು. ವೈದ್ಯರ ಸಲಹೆಯೂ ಅಗತ್ಯವಾಗಿರುತ್ತದೆ.
ಪ್ರತಿ ದಿನ ಉದ್ಯೋಗದ ನಿಮಿತ್ತ ವಿವಿಧ ಕಚೇರಿಗೆ ಹೋಗುವ ಮಹಿಳಾ ಉದ್ಯೋಗಿಗಳು ಕೆಲಸದ ಜತೆಗೆ ತಮ್ಮ ಸೌಂದರ್ಯವನ್ನೂ ಕಾಪಾಡಿಕೊಳ್ಳುವುದು ಅನಿವಾರ್ಯ. ಉರಿ ಬಿಸಿಲಿಗೆ ತಮ್ಮ ಮುಖ ಕಾಂತಿಹೀನವಾಗಿ ಬಿಡುತ್ತದೆ. ಆಗಾಗ್ಗೆ ಬ್ಯೂಟಿಪಾರ್ಲರ್ಗಳಿಗೆ ಹೋಗುವಂತೆಯೂ ಇಲ್ಲ. ಹೀಗಾಗಿ ಬಿಸಿಲಿನ ಬೇಗೆಯಿಂದ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ತುಳಸಿ, ಬೇವಿನ ಫೇಸ್ ಪ್ಯಾಕ್ ಬಳಸುವುದು ಸೂಕ್ತ.

ಹತ್ತಿ ಬಟ್ಟೆಗೆ ಹೆಚ್ಚಿನ ಆದ್ಯತೆ ನೀಡಿ
ತಣ್ಣೀರಿನಿಂದ ರೋಸ್ ವಾಟರ್ನಿಂದ ಮುಖ ತೊಳೆದುಕೊಂಡರೆ ಚರ್ಮದ ಕಾಂತಿ ಹೊಳೆಯುತ್ತಿರುತ್ತದೆ. ಇದು ಕೇವಲ ಚರ್ಮಕ್ಕೆ ಕಾಂತಿ ನೀಡುವುದಲ್ಲದೇ, ಮುಖದಲ್ಲಿ ರಕ್ತ ಸಂಚಾರಕ್ಕೂ ಸಹಾಯ ಮಾಡಲಿದೆ. ದಿನವಿಡೀ ತಮ್ಮ ತ್ವಚೆಯನ್ನು ಕಾಪಾಡಿಕೊಳ್ಳಲು ತಮ್ಮ ಹ್ಯಾಂಡ್ ಬ್ಯಾಗ್ಗಳಲ್ಲಿ ಕೆಲ ಸೌಂದರ್ಯ ವರ್ದಕಗಳನ್ನು ಇಟ್ಟುಕೊಳ್ಳುವುದು ಸೂಕ್ತ. ತಮಗೆ ಸೂಕ್ತವಾದ ಪೌಡರ್ನ್ನು ಆಗಾಗ್ಗೆ ಹಚ್ಚುತ್ತಿರಬೇಕು.
ಬಿಸಿಲಿನ ತಾಪಕ್ಕೆ ಸುಸ್ತು, ನೀರಡಿಕೆ, ತಲೆಸುತ್ತು ಮೊದಲಾದವುಗಳು ಬಾಧಿಸುವುದು ಸಾಮಾನ್ಯವಾಗಿದ್ದು, ತಲೆನೋವು ಕಾಡುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಬಿಸಿಲಿನ ಝಳಕ್ಕೆ ಸಿಕ್ಕಿ ಒದ್ದಾಡುವ ಪರಿಸ್ಥಿತಿ ಬಂದೊದಗಿದ್ದು, ಮನೆ ಒಳಗೆಯೂ ನೆಮ್ಮದಿಯಾಗಿ ಕುಳಿತುಕೊಳ್ಳದಂತಾಗಿದೆ. ಬಿಸಿಲಿನಿಂದಾಗುವ ಕೆಲವು ತೊಂದರೆಗಳನ್ನು ತಪ್ಪಿಸುವ ಸಲುವಾಗಿ ತೆಳು ಬಣ್ಣದ ಸಡಿಲವಾದ ಹತ್ತಿಯ ಬಟ್ಟೆ ಧರಿಸಬೇಕು.
ಹಣ್ಣು ತರಕಾರಿಗಳನ್ನು ಹೆಚ್ಚು ಸೇವಿಸಿ
ಕೈಗೆಟಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಬೇಕು. ಆಗಾಗ್ಗೆ ಧಾರಾಳವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರು, ಹಣ್ಣಿನ ರಸ ಪಾನಕ ಸೇವಿಸಬೇಕು. ಕಾಫಿ ಟೀ ಸೇವನೆ ಕಡಿಮೆ ಮಾಡಬೇಕು. ಕಾರ್ಬೋನೇಟೆಡ್ ಪಾನೀಯಗಳನ್ನು ತ್ಯಜಿಸಬೇಕು. ನೀರು, ಮಜ್ಜಿಗೆ, ಎಳನೀರು ಕುಡಿಯಬೇಕು. ಬೆಚ್ಚಗಿನ ಮಸಾಲೆರಹಿತ ಶುದ್ದ ಆಹಾರ ಸೇವಿಸಬೇಕು. ಗಾಳಿಯಾಡುವಂತಹ ಪಾದರಕ್ಷೆ ಧರಿಸಬೇಕು. ದೇಹವನ್ನು ತಂಪಾಗಿಡಲು ಹಣ್ಣು, ತರಕಾರಿಗಳು ಸಹಕಾರಿ. ಸೌತೆಕಾಯಿಯನ್ನು ಹೆಚ್ಚು ಸೇವಿಸಿದಷ್ಟು ಆರೋಗ್ಯಕಾರಿ.

ಇದರಲ್ಲಿ ನೀರಿನ ಅಂಶ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ದಾಹವನ್ನು ಕಡಿಮೆ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆಯನ್ನು ಅಡಗಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುವ ದೃಷ್ಠಿಯಿಂದ ನೈಸರ್ಗಿಕ ಪಾನೀಯ ಎಳನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದು ಉತ್ತಮ. ಕಲ್ಲಂಗಡಿಯ ರಸವನ್ನು ಸೇವಿಸುವುದರಿಂದಲೂ ಉತ್ತಮ ಪ್ರಯೋಜನವನ್ನು ಕಾಣಬಹುದು. ಈ ಹಣ್ಣಿನಲ್ಲಿ ಪೊಟಾಷಿಯಂ, ಸೋಡಿಯಂ, ಕ್ಯಾಲ್ಸಿಯಂ, ಮೆಗ್ನೀಷಿಯಂ, ಸೋಡಿಯಂ ಹೇರಳವಾಗಿ ಇರುವುದರಿಂದ ಆರೋಗ್ಯವನ್ನು ಕಾಪಾಡುತ್ತದೆ.
ಎಳನೀರು ಸೇವನೆ ಆರೋಗ್ಯಕಾರಿ
ಬಿಸಿಲಲ್ಲಿ ಓಡಾಡಿ ಬಂದವರು ನಿಂಬೆ ರಸವನ್ನು ಸೇವಿಸಿದರೆ ವಿಟಮಿನ್ 'ಸಿ' ಅಂಶ ಇರುವುದರಿಂದ ಡಿಹೈಡ್ರೇಷನ್ ಸಮಸ್ಯೆ ಉಂಟಾಗುವುದಿಲ್ಲ. ಪ್ರತಿದಿನ ಒಂದು ಬಟ್ಟಲು ಬೀಟ್ರೋಟಿನ ರಸವನ್ನು ಸೇವಿಸಿದರೆ ರಕ್ತದೊತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು ದೇಹದ ಉಷ್ಣಾಂಶವನ್ನು ತಂಪುಗೊಳಿಸಬೇಕಾದರೆ ಎಳನೀರು ಅತ್ಯಗತ್ಯ. ಎಳನೀರು ಕೇವಲ ಬಾಯಾರಿಕೆಯನ್ನು ಮಾತ್ರ ನೀಗಿಸದೆ, ಆರೋಗ್ಯದ ದೃಷ್ಟಿಯಿಂದಲೂ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದು ಬಂದಿದೆ.
ಬೇಸಿಗೆಯಲ್ಲಿ ನೀರು ಸೇವನೆಗಿಂತ ಎಳನೀರು ಸೇವನೆಯಿಂದ ಹೆಚ್ಚು ಖುಷಿ ಕೊಡಲಿದೆ. ಕೇವಲ ಖುಷಿಯಲ್ಲದೇ ದೇಹವನ್ನು ಲವಲವಿಕೆಯಿಂದಲೂ ಇಡಲಿದೆ. ಶಕ್ತಿ ನೀಡುವ ಗುಣ ಹೊಂದಿರುವ ಎಳನೀರನ್ನು ವ್ಯಾಯಾಮದ ನಂತರ ಸೇವನೆ ಮಾಡುವುದು ಸೂಕ್ತ, ಅತಿ ಹೆಚ್ಚು ವಿಟಮಿನ್ ಹೊಂದಿರುವ ಎಳನೀರು ಸೇವನೆ ದೇಹಕ್ಕೆ ಆರೋಗ್ಯಕರ ಎಂಬುದರಲ್ಲಿ ಎರಡು ಮಾತಿಲ್ಲ.












Click it and Unblock the Notifications