ತುಮಕೂರು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆ ಜನವರಿಯಲ್ಲಿ
ಬೆಂಗಳೂರು : 1.5 ಕೋಟಿ ರುಪಾಯಿಗಳ ವೆಚ್ಚದಲ್ಲಿ 69ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ತುಮಕೂರಿನಲ್ಲಿ ಅದ್ಧೂರಿಯಿಂದ ಜರುಗಲಿದೆ. ಈ ಸಮ್ಮೇಳನದ ಅಧ್ಯಕ್ಷರ ಆಯ್ಕೆ 2002ರ ಜನವರಿ ಮೊದಲ ವಾರದಲ್ಲೇ ನಡೆಯಲಿದೆ. ಈ ವಿಷಯವನ್ನು ಸ್ವಾಗತ ಸಮಿತಿ ಅಧ್ಯಕ್ಷ ಟಿ.ಬಿ. ಜಯಚಂದ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹರಿಕೃಷ್ಣ ಪುನರೂರು ತಿಳಿಸಿದ್ದಾರೆ.
ಫೆಬ್ರವರಿ 1,2 ಮತ್ತು ಮೂರರಂದು ತುಮಕೂರಿನಲ್ಲಿ ನಡೆಯಲಿರುವ ಈ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳೂ ಭರದಿಂದ ಸಾಗಿವೆ ಎಂದು ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜನವರಿ ಮೊದಲ ವಾರದಲ್ಲಿ ನಡೆಯುವ ಪರಿಷತ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಪುನರೂರು ಹೇಳಿದರು.
ಇದಲ್ಲದೆ, ಸಮ್ಮೇಳನದಲ್ಲಿ ಕೈಗೊಳ್ಳಬೇಕಾದ ನಿರ್ಣಯಗಳ ಬಗ್ಗೆ ಕೂಡ ಚರ್ಚಿಸಲಾಗುವುದು ಎಂದರು. ತಾವು ಈಗಾಗಲೇ ಸಮ್ಮೇಳನದ ಸಿದ್ಧತಾ ಕಾರ್ಯ ಪರಿಶೀಲಿಸಿದ್ದು, ಸಮ್ಮೇಳನವು ನಿಗದಿಯಾದ ದಿನಾಂಕಗಳಂದೇ ನಡೆಯಲಿದೆ. ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು, ಸಮ್ಮೇಳನ ಉದ್ಘಾಟಿಸುವರು ಎಂದು ಸಚಿವ ಜಯಚಂದ್ರ ಸ್ಪಷ್ಟಪಡಿಸಿದರು.
ಕನ್ನಡ ಭವನ: ಇದೇ ಸಂದರ್ಭದಲ್ಲಿ ಸಮ್ಮೇಳನದ ನೆನಪಿಗಾಗಿ 50 ಲಕ್ಷ ರುಪಾಯಿ ವೆಚ್ಚದಲ್ಲಿ ನಿರ್ಮಿಸಲುದ್ದೇಶಿರುವ ಕನ್ನಡ ಭವನಕ್ಕೂ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸುವರು ಎಂದು ಜಯಚಂದ್ರ ಹೇಳಿದರು.
ಸಮ್ಮೇಳನ ಖರ್ಚು ಮತ್ತು ಕನ್ನಡ ಭವನ ನಿರ್ಮಾಣಕ್ಕಾಗಿ 2 ಕೋಟಿ ರುಪಾಯಿಗಳನ್ನು ಸಂಗ್ರಹಿಸಲು ಸ್ವಾಗತ ಸಮಿತಿ ನಿರ್ಧರಿಸಿದೆ. ಜಿಲ್ಲೆಯ ವರ್ತಕರು, ದಾನಿಗಳಿಂದ ಹಣ ಸಂಗ್ರಹಿಸುವ ಉದ್ದೇಶ ಸ್ವಾಗತ ಸಮಿತಿ ಹೊಂದಿದೆ ಎಂದು ಅವರು ತಿಳಿಸಿದರು.
ಸಮಿತಿಗಳು : ಸಿದ್ಧಗಂಗಾ ಮಹಾಸಂಸ್ಥಾನದ ಡಾ. ಶಿವಕುಮಾರ ಸ್ವಾಮಿಗಳು ಹಾಗೂ ಆದಿಚುಂಚನಗಿರಿ ಸಂಸ್ಥಾನದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು ಸ್ವಾಗತಸಮಿತಿಯ ಮಹಾ ಪೋಷಕರಾಗಿದ್ದಾರೆ. ಸಮ್ಮೇಳನದ ಉಸ್ತುವಾರಿಗಾಗಿ ಈಗಾಗಲೇ 18 ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದು ಅವರು ವಿವರಿಸಿದರು.
20 ಸಾವಿರ ಪ್ರತಿನಿಧಿಗಳು ಕುಳಿತುಕೊಳ್ಳಬಹುದಾದ ಬೃಹತ್ ವೇದಿಕೆಯನ್ನು ನಿರ್ಮಿಸಲಾಗುವುದು, ಅದ್ಧೂರಿಯಿಂದ ಸಮ್ಮೇಶನಾಧ್ಯಕ್ಷರನ್ನು ಮೆರವಣಿಗೆಯಲ್ಲಿ ಕರೆತರಲಾಗುವುದು, ಮೆರವಣಿಗೆಯಲ್ಲಿ ಪಾಲ್ಗೊಳ್ಳಲು 30ಕ್ಕೂ ಹೆಚ್ಚು ಜಾನಪದ ತಂಡಗಳಿಗೆ ಆಹ್ವಾನ ನೀಡಲಾಗಿದೆ ಎಂದು ಅವರು ವಿವರಿಸಿದರು.
(ಇನ್ಪೋ ವಾರ್ತೆ)
ಮುಖಪುಟ / ಸಾಹಿತ್ಯ ಸೊಗಡು












Click it and Unblock the Notifications