ನವೆಂಬರ್ನಲ್ಲಿ ಕೇರಳ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನ : ನಿರ್ಧಾರ
ಕಾಸರಗೋಡು : 2002ರ ನವೆಂಬರ್ ತಿಂಗಳಿನಲ್ಲಿ ಕೇರಳ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ನಿರ್ಧರಿಸಿದೆ. ಕಾಸರಗೋಡಿನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಕನ್ನಡ ಭಾಷೆಗೆ ಸಂಬಂಧಿಸಿದಂತೆ ವಿಚಾರಗೋಷ್ಠಿ, ಕವಿಗೋಷ್ಠಿ, ಮಹಿಳಾ ಗೋಷ್ಠಿ, ಚುಟುಕು ಕವಿಗೋಷ್ಠಿ, ಕಾಸರಗೋಡು ಜಿಲ್ಲಾ ದರ್ಶನ, ಗಡಿನಾಡ ಕನ್ನಡ - ಚಿಂತನಗೋಷ್ಠಿಯೇ ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ.
ಇದಲ್ಲದೆ ಸಮ್ಮೇಳನಾಧ್ಯಕ್ಷರರೊಂದಿಗೆ ಸಂವಾದ, ಕನ್ನಡ, ತುಳು, ಕೊಂಕಣಿ, ಕೊಡವ, ಮಲೆಯಾಳಂ, ಸಂಸ್ಕೃತ, ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಗಳನ್ನು ಒಳಗೊಂಡ ಅಂತರ ಭಾಷಾ ಕವಿಗೋಷ್ಠಿಯನ್ನು ಏರ್ಪಡಿಸಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ತಿಳಿಸಿದ್ದಾರೆ.
ಸಮ್ಮೇಳನದ ಅಂಗವಾಗಿ ವಿದ್ಯಾರ್ಥಿಗಳಿಗೆ ಕಾಸರಗೋಡು ಜಿಲ್ಲೆಯ ಸಮಗ್ರ ಸಾಹಿತ್ಯ ಮತ್ತು ಸಾಂಸ್ಕೃತಿಕ ಇತಿಹಾಸ ಕುರಿತು ಪ್ರಬಂಧ ಹಾಗೂ ಕವನ ಸ್ಪರ್ಧೆ ಏರ್ಪಡಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಕಾಸರಗೋಡಿನ ಸಾಂಸ್ಕೃತಿಕ ಮತ್ತು ಸಾಹಿತ್ಯದ ಪರಿಚಯ ಆಗಲಿದೆ ಎಂದೂ ಅವರು ಹೇಳಿದರು.
(ಇನ್ಫೋ ವಾರ್ತೆ)