8ನೇ ಪರಿಚ್ಛೇದಕ್ಕೆ ತುಳು ಶೀಘ್ರ, ಮೊಯ್ಲಿ
ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ಮಾತನಾಡಿದ ಅವರು, ರಾಜ್ಯದಲ್ಲಿ ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಎಂಟನೇ ಪರಿಚ್ಛೇದಕ್ಕೆ ತುಳು ಭಾಷೆ ಸೇರ್ಪಡೆಗೊಳಿಸಬೇಕೆಂದು ನಿರ್ಣಯ ಮಾಡಿ ಕೇಂದ್ರಕ್ಕೆ ವಿವರವಾದ ವರದಿ ಸಲ್ಲಿಸಿದ್ದರು. ಕೇಂದ್ರ ಸರಕಾರವು ತುಳು, ಕೊಡವ ಸೇರಿದಂತೆ 12 ಭಾಷೆಗಳನ್ನು ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲು ತಜ್ಞರ ಸಮಿತಿ ನೇಮಕ ಮಾಡಿದ್ದು, ಆ ಸಮಿತಿ ಶಿಫಾರಸ್ಸು ಮಾಡಿತ್ತು. ಆಡಳಿತ ಸೇವಾ ಪರೀಕ್ಷೆಯಲ್ಲಿ ತುಳು ಲಿಪಿ ಸೇರ್ಪಡೆ ಕಷ್ಟ ಎಂಬ ತರ್ಕ ಮೂಡಿ ಸೇರ್ಪಡೆ ಪ್ರಕ್ರಿಯೆ ನಿಧಾನವಾಯಿತು ಎಂದು ಮೊಯ್ಲಿ ವಿವರಿಸಿದರು.
ಉತ್ತರಾಂಚಲದ ರಾಜ್ಯಪಾಲೆ ಮಾರ್ಗರೇಟ್ ಆಳ್ವ ಮಾತನಾಡಿ, ಕೊಂಕಣಿಗೂ ಲಿಪಿ ಇರಲಿಲ್ಲ. ಅದು ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಯಾಗಿದೆ. ತುಳು ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಯಾಗಲು ನಾವೆಲ್ಲರೂ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು. ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮಾತನಾಡಿ, ತುಳು ಭಾಷೆ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳ್ಳದಿರಲು ರಾಜಕೀಯ ಇಚ್ಚಾಶಕ್ತಿ ಕೊರತೆ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)