ಕಣ್ಣೀರ ಹನಿಯಲೂ ಶಾಖವಾದ ಕಂಬಾರರ ಸಾಹಿತ್ಯ

ಬಣ್ಣ ಕಳಚಿತು. ಕಣ್ಣ್ತುಂಬಾ ನಿದ್ದೆಯೂ ಆಯ್ತು. ಮಾರನೆಯ ಸಂಜೆ ಖಾಲೀ ಖಾಲೀ. ನಾಟಕ ತಾಲೀಮು ಇಲ್ಲವಲ್ಲ?! ಆಗ ನನ್ನೊಳಗೆ ಆವಾಹನೆಯಾಗಿದ್ದು ಕಂಬಾರರ “ಅಕ್ಕಕ್ಕು ಹಾಡುಗಳೇ". “ಬರಗಾಲ ಬಂತೆಂದು ಬರವೇನೋ ಹಾಡಿಗೆ, ಮನಸಿಗೆ ನಿನ್ನ ಕನಸಿಗೆ; ಹರಿಯುವ ಹಾಡನ್ನ ಕತ್ತಲ್ಲಿ ಅಮುಕದೆ ಬಿಡಬೇಕೋ ತಮ್ಮ ಬಯಲಿಗೆ...." ಓಹ್, ಇದನ್ನು ಹಾಡಾಗಿಸಿದ ದೇವರಲ್ಲವೇ ನೆನ್ನೆ ನನ್ನೆದುರು ಇದ್ದದ್ದು? ತಡಾವಾಗಾದ ಜ್ಞಾನೋದಯಕ್ಕೆ ಮರುಕವೇ ಶಿಕ್ಷೆ. ಆಗ ಮನೆಯಲ್ಲಿ ವೆರಾಂಡದಿಂದ ಅಡುಗೆ ಕೋಣೆಯವರೆಗೂ ಪುಸ್ತಕವೇ ಆಸ್ತಿ ಆಗಿದ್ದರೂ ಎಲ್ಲೂ ಕಂಬಾರರ ಒಂದು ವಾಕ್ಯವೂ ಸಿಗದ್ದು. ಅಮ್ಮನಿಗೆ ದುಂಬಾಲು ಬಿದ್ದೆ. ಲೈಬ್ರರಿಯಿಂದ ಅದೇನೆನೋ ಲೇಖನಗಳು ಮನೆಗೆ ಬಂದವು. ಲ್ಯಾಂಡ್ಸ್ಡೌನ್ ಕಟ್ಟಡದ ಮಳಿಗೆಗಳನ್ನೂ ಸುತ್ತಿದ್ದಾಯ್ತು, ಪ್ರಸಾರಾಂಗವನ್ನೂ ಇಣುಕಿದ್ದಾಯ್ತು. ಆದರೂ ಸಮಾಧಾನವಿಲ್ಲ. “ಕ್ಷಿತಿಜದ ಕಣ್ಣಲ್ಲಿ ಬೆಳಕು ಹೊಳೆಯೋ ಹಾಂಗ ಹಾಡಬೇಕೋ ತಮ್ಮ ಹಾಡಬೇಕು; ಆಕಾಶದಂಗಳ ಬೆಳದಿಂಗಳೂ ಕೂಡಾ ಕಂಗಾಲಾಗುವ ಹಾಡು ಹಾಡಬೇಕೋ...." ಹೀಗೇ ನಿರಂತರವಾಗಿ ಹಾಡ್ಕೋತಾ ಹಾಡ್ಕೋತಾ ಕಂಬಾರರ ಪದಗಳೊಂದಿಗೆ ಪ್ರೀತಿಗೆ ಬಿದ್ದೆ. ಅವರ ಅಕ್ಷರದೆಡೆಗಿನ ನನ್ನ ಮೋಹ ಕಾಡುಕುದುರೆಯಂತೆ.
ಅದ್ಯಾವ ಲೋಕದಲ್ಲಿ ನನ್ನ ಪಯಣ? : “ಮುಗಿಲಿನಿಂದ ಜಾರಿಬಿದ್ದ ಉಲ್ಕೀ ಹಾಂಗ ಕಾಡಿನಿಂದ ಚಂಗನೆ ನೆಗೆದಿತ್ತ" ನನ್ನನ್ನು “ಏಳಕೊಳ್ಳ ತಿಳ್ಳೀ ಆಡಿ ಕಳ್ಳೆಮಳ್ಳೆ ಆಡಿಸಿ ಕೆಡವಿತ್ತ..." ಆಮೆಲೆ ಸಿಕ್ಕಿದ್ದು “ಮರೆತೇನಂದರ ಮರೆಯಲಿ ಹೆಂಗಾ ಮಾವೊತ್ಸೆ ತುಂಗಾ" ಅಂತಿದ್ದ ಕಂಬಾರರು. “ಸೊನ್ನಿಗೆ ಆಕಾರ ಬರೆದೇನಂದಿ, ಬಯಲಿಗೆ ಗೋಡೆ ಕಟ್ಟೇನಂದಿ......ಮರೆಯಲಿ ಹೆಂಗಾ ಮಾವೊತ್ಸೆ ತುಂಗಾ" ಸಾಲುಗಳು ನನ್ನೆಲ್ಲಾ ಅಂತಃಸತ್ತ್ವವನ್ನು ಪ್ರತಿಫಲಿಸುತ್ತಿತ್ತು ಆ ದಿನಗಳಲ್ಲಿ. ಮತ್ತೊಮ್ಮೆ ರಂಗದ ದಿನಗಳು. ಕಂಬಾರರ ಕರಿಮಾಯಿ ತಾಯೇ ಸಾಲುಗಳನ್ನು, ಬಿ.ಜಯಶ್ರೀ ಧ್ವನಿಪೆಟ್ಟಿಗೆಯ ಕಂಚು ಉಜ್ಜಿತೆಂದರೆ ಆಹಾ, ಅದ್ಯಾವ ಲೋಕದಲ್ಲಿ ನನ್ನ ಪಯಣ? “ಗುಂಡ ತೇಲಿಸಿದೆವ್ವ ಬೆಂಡ ಮುಳುಗಿಸಿದಿ; ಗಂಡಗಂಡರನೆಲ್ಲ ಹೆಂಡಿರ ಮಾಡಿ....ಸಾವಿರದ ಶರಣವ್ವ ಕರಿಮಾಯಿ ತಾಯೇ...." ಸಾಲುಗಳ ಮುತ್ತುದುರಿಸುತ್ತಾ ಭಾಷಣಗಳಲ್ಲಿ ಮೇಜುಗುದ್ದುತ್ತಿದ್ದ ದಿನಗಳವು. ಇವರ ಮತ್ತೊಂದು ಪದ್ಯ “ಗಿಣಿರಾಮ ಹೇಳಿತು" ಅದಕ್ಕೆ ಬಿ.ವಿ ಕಾರಂತರ ಸಂಗೀತ “ಗಿಣಿರಾಮ ಹೇಳಿದ ರೇಪಿನ ಕಥೆಯೊಂದ; ರಾಮಾ ಹರಿ ರಾಮಾ, ಮಾನಭಂಗಿತಳಾಗಿ ಕನಸೊಂದು ಬಿದ್ದಿದೆ; ರಾಮಾ ಹರಿ ರಾಮಾ" ಅಂತ ಕಾರಂತರು ಹಾಡ್ತಿದ್ದರೆ ಅದೆಲ್ಲಿರುತ್ತಿತ್ತೋ ನನ್ನ ಕಣ್ಣೀರು ಝುಳು ಝುಳು ಹರೀತಿತ್ತು.
ಚುಂಚದ ಹಕ್ಕಿ ಗಕ್ಕನೆ ಹಾರಿ ಬಂತು : ಹೀಗೆ ಒಂದೊಂದು ಕಣ್ಣೀರಿನ ಹನಿಯಲ್ಲೂ ಕಂಬಾರರ ಸಾಹಿತ್ಯ, ಭಾಷೆ ಎಲ್ಲವೂ ನನ್ನೊಳಗೇ ಶಾಖವಾಗ್ತಾ ಹೋಯ್ತು. “ಸ್ವಂತಚಿತ್ರ ಬರೆಯೋದು ಕಷ್ಟವಲ್ಲ ಮಿತ್ರ", "ಇಬ್ಬರ ತಕರಾರಿಗೆ ಹುಟ್ಟಿ ಹಲವರ ತಕರಾರಲ್ಲಿ ಬೆಳೆದವರು ನಾವು ತಕರಾರಿನವರು" ಎನ್ನುತ್ತಾ ಕಥೆಗೆ ಶುರುವಿಟ್ಟ ಕಂಬಾರರು, “ನನ್ನ ಮನದಾಗರೆ ಇದು ಏನ ಬೆಳೆದೈತಿ? ತುಂಬ ಮಲ್ಲೀಗಿ ಹೂಬಳ್ಳಿ; ಉದುರೀಸಿ ನಿನ್ನ ಪಾತಾಳ ತುಳುಕಲಿ" ಎಂದೆನ್ನುವ ಅರಗೊಡ್ಡಿಯ ಪ್ರೇಮಗೀತೆಯಾಗಿಸತೊಡಗಿದರು ನನ್ನನ್ನು. ಋಷ್ಯಶೃಂಗನ ನಾಟಕೀಯತೆಯಲ್ಲಿ “ಅಪ್ಪ ಸೂತ್ರಧಾರ ಕೇಳೋ ಕನಸ ಕಂಡಿನೆ, ಸುಖದ ನೋವ ಸದ್ದ ಮಾಡಿ ಹೆಂಗ ಹೇಳಲೆ" ಎಂದು ಉನ್ಮಾದಕ್ಕೆ ತಳ್ಳುತ್ತಾ, ಕಲೆಗಾರಣ್ಣನ ಲಾವಣಿಯಲ್ಲಿ “ಇಷ್ಟೆ ಕಣ್ಣಿನ ಇಷ್ಟಿಷ್ಟೆ ಚುಂಚದ ಹಕ್ಕಿ ಗಕ್ಕನೆ ಹಾರಿ ಬಂತು ಮೇಲಕ್ಕೆ ಕೆಳಕ್ಕೆ ರೆಂಬೆ ರೆಂಬೆಗೆ, ಕೊಂಬೆ ಕೊಂಬೆಗೆ ಸೋಂಕಿನ ಸೊಗಸ ಬೀರುತ, ಕಲೆಗಾರನ ಕಲ್ಪನೆಗೆ ಶರಣೆನ್ನಿರಿ" ಎಂದು ಕುಣಿಸುತ್ತಾ, “ವ್ಯರ್ಥಗಳ ಸಮರ್ಥಿಸಿಕೊಳ್ಳುತ್ತಾ, ಅಪಾರ್ಥದಲ್ಲಿ ಅರ್ಥಗಳ ಸೃಷ್ಟಿಸುತ್ತಾ, ಇಲ್ಲಾ ರಾಮಾಯಣದ ಮಹಿಮೆ ಜಪಿಸುತ್ತಾ" ಗೋದೂ ತಾಯಾಗಿಸಿ ನನ್ನೊಡನೆ ನನ್ನನ್ನು ಇಬ್ಬರಾಗಿಸಿ “ರೆಕ್ಕೆಯೊಳಗಿನ ಹಕ್ಕಿಯ ಥರ ನಮ್ಮ ನೆರಳುಗಳನ್ನೇ ಮೈಗೂ ಮನಸ್ಸಿಗೂ ಸುತ್ತಿಕೊಂಡು ಉರಿವ ಬೆಂಕಿಯ ಬಳಿ ಕೂತೆವು" ಎಂದೆಂದುಕೊಳ್ಳುವಂತೆ ಮಾಡಿಟ್ಟರು. ನಾನು ಒಳಗೇ ಹೇಳುತ್ತಾ ಹೋದೆ ಅವರದೇ ನುಡಿಯಾಗಿ “ಒಂದಾನೊಂದು ಕಾಲದಲ್ಲಿ ಏಸೊಂದ ಮುದವಿತ್ತಾ, ಮುದಕೊಂದು ಹದವಿತ್ತಾ, ಹದಕ ಹಂಗಾಮಿತ್ತಾ, ಅದಕೊಂದ ಶಿವನ ಲಗಾಮಿತ್ತಾ" “ನಾನೀಗ ನನ್ನ ಖಾಸಗಿಯನ್ನು ಕಾಣಬೇಕು. ಮಾತಾಡಬೇಕು ಅದರೊಂದಿಗೆ ನಿಜ ನೋಡಬೇಕು, ಶಬ್ದವೇ ಶಬ್ದವೆ ತೋರು ನಿಜವನ್ನ,ನನ್ನಳತೆಯ ಮನುಷ್ಯನಳತೆಯ ಸತ್ಯವನ್ನ."
“ಜೋಲಿ ತಪ್ಪಿದ ಪೋರಿ ಬಿದ್ದಾಳ ತೆಕ್ಕೀಗಿ, ಸಂದ ಉಳಿಯದ ಹಾಂಗ ಒಂದಾಗಿ ಮೈಮುರದಾ" ಅನ್ನೋ ಹಾಗೆ ನನ್ನನ್ನು ಜೀವನದೊಳಗೆ ಒಂದು ಮಾಡಿ “ಮಂದಾರ ಮರದಲ್ಲಿ ಪಾರ್ವತಿ ಹಣ್ಣು ತಿಂದದ್ದೇ ದೇವಲೋಕಕ್ಕೂ ಬಂತು ಹಸಿವಿನ ಬಾಧೆ" ಅದಕ್ಕೇ, “ಹಾವಲ್ಲ ಅದು ಹಗ್ಗ ಎನ್ನುವರು ಕೆಲಮಂದಿ ಹಗ್ಗದಲ್ಲೂ ಹರ್ಷ ಚಿಮ್ಮುವಾಕೆ ಈ ಮಾಯೆ" ಎನ್ನುವ ಅರಿವು ನನಗೆ ಮೂಡಿಸಿದ್ದು ಈ ಸೂರ್ಯ ಶಿಖರನ ಸಾಹಿತ್ಯ. “ಲೂಟಿ ಮಾಡಾಕ ಬಂದ ಮಾಟಗಾರೇನ ಸುಖದ ಶಿಖರದ ಮ್ಯಾಲ ಹತ್ತಿನಿಂತಾನ ಇಕ್ಕಟ್ಟೀನ ಬಿಕ್ಕಟ್ಟೆಲ್ಲಾ ಒಟ್ಟಿಗಿ ದೂರ ಮಾಡಿದ್ದ" “ಯಾರವ್ವ ಈ ಚೆಲುವ ತಂತಾನೆ ರಂಜಿಸುವ ಸೂರ್ಯನ ಥರ ಹೊಳೆಯುವ" ಅಂತ ಮನಸ್ಸಿನಲ್ಲೇ ನಾನು ಮುಲುಗುತ್ತಿರುವಾಗಲೇ ನಾಳಿನ ಸತ್ಯವನ್ನು ಇಂದೇ ಬಯಲಾಗಿಸಿಕೊಟ್ಟದ್ದು ಅವರ ಮಾತು ““ಅಜ್ಜ ಅಜ್ಜಿಗೆ ಬೇಜಾರು ನೆನಪೂ ಬೋರು, ಕುರುಡ ಮುದುಕ ಕೈಯಾಡಿಸಿ ಹುಡುಕುತ್ತಾನೆ ಎಲ್ಲಿದ್ದೀಯೆ ಮುದುಕಿ ಎಲ್ಲಿದ್ದೀಯೆ?"
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications