ಹಾವೇರಿಯಲ್ಲಿ 81ನೇ ಕನ್ನಡ ಸಾಹಿತ್ಯ ಸಮ್ಮೇಳನ

80ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಡೆಯುತ್ತಿರುವ ಮಡಿಕೇರಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನವನ್ನು ಎಲ್ಲಿ ನಡೆಸಬೇಕು ಎಂದು ಬುಧವಾರ ಚರ್ಚೆ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕಗಳ ಸಭೆಯಲ್ಲಿ 81ನೇ ಸಾಹಿತ್ಯ ಸಮ್ಮೇಳನವನ್ನು ಸರ್ವಜ್ಞನ ನಾಡು ಹಾವೇರಿಯಲ್ಲಿ ನಡೆಯಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. [ಸಮ್ಮೇಳನಾಧ್ಯಕ್ಷ ಡಿಸೋಜ ಭಾಷಣ]
ಗುಲ್ಬರ್ಗ, ಬಳ್ಳಾರಿ, ಮೈಸೂರು ಮತ್ತು ಚಾಮರಾಜನಗರಗಳು ಮುಂದಿನ ಸಮ್ಮೇಳನದ ಆತಿಥ್ಯ ವಹಿಸಿಕೊಳ್ಳಲು ಆಸಕ್ತಿ ಹೊಂದಿದ್ದವು. ಮುಂದಿನ ಸಾಹಿತ್ಯ ಸಮ್ಮೇಳನದ ಗುಲ್ಬರ್ಗದಲ್ಲಿ ನಡೆಯಬೇಕು ಎಂದು ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಸಹ ಕೆಲವು ದಿನಗಳ ಹಿಂದೆ ಅಭಿಪ್ರಾಯಪಟ್ಟಿದ್ದರು.
ಆದರೆ, ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕಗಳ ಸಭೆಯಲ್ಲಿ ಸಮ್ಮೇಳನದ ಆತಿಥ್ಯವನ್ನು ಹಾವೇರಿಗೆ ನೀಡಲಾಗಿದೆ. ಅಂದಹಾಗೆ ಹಾವೇರಿಯಲ್ಲಿ ಅಖಿಲ ಭಾರತ ಮಟ್ಟದ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಇದೇ ಮೊದಲು. ಡಿಸೆಂಬರ್ ಅಂತ್ಯ ಅಥವ ಜನವರಿ ತಿಂಗಳಿನಲ್ಲಿ ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಹಾವೇರಿಗೆ ಸಾಹಿತ್ಯ ಸಮ್ಮೇಳನ ನಡೆಸುವ ಅವಕಾಶ ದೊರಕಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗುರುಪಾದಪ್ಪ ಮಾಸಂಗಿ, ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶ್ವಸ್ವಿಯಾಗಿ ನಡೆಸಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಶ್ರಮಿಸಲಿದೆ ಎಂದು ಹೇಳಿದರು.












Click it and Unblock the Notifications