ಬೆಂಕಟವಳ್ಳಿ ಸಂಪ್ಗೆ ಮರದಲ್ಲಿ 'ಹೀಗೂ ಉಂಟೆ'?
ಸಂಪ್ಗೆ
ಹೂವ
ಮರದಿಂದ
ಜಾರಿಜಾರಿ
ಹೊರಬಂದ
ಕಾಮಿನಿಯೋ
ನಾಗಿನಿಯೋ
??
ಕಣ್ಣಾರೆ
ಕಂಡ
ಆದರೆ
ತರ್ಕಕ್ಕೆ
ನಿಲುಕದ
ಮಲೆನಾಡಿನ
ನಿಗೂಢ
ಕಥೆಗಳು
*
ಸುಶ್ರುತ
ದೊಡ್ಡೇರಿ
,
ಬೆಂಗಳೂರು.
ನೀವು ಸಾಗರದಿಂದ ಗುಬ್ಬಗೋಡಿಗೆ ಹೋಗುವ ಟಾರ್ ರಸ್ತೆಯಲ್ಲಿ ಸುಮಾರು ಏಳು ಕಿಲೋಮೀಟರ್ ಸಾಗಿಬಂದ ನಂತರ, ರಸ್ತೆಯ ಎಡಗಡೆಗೆ ಒಂದು ತ್ರಿಕೋಣಾಕೃತಿಯ ಕಟ್ಟೆಯೂ, ಆ ಕಟ್ಟೆಯ ಗೋಡೆಯ ಮೇಲೆ ಕಪ್ಪಕ್ಷರದಿಂದ ಬರೆದ ಬೆಂಕಟವಳ್ಳಿ ಎಂಬ ಬೋರ್ಡೂ ಕಾಣುತ್ತದೆ. ಅದೇ ನನ್ನ ಅಜ್ಜನ ಮನೆಯು. ಅದೇ ಎಂದರೆ ಆ ಕಟ್ಟೆಯಲ್ಲ; ಆ ಕಟ್ಟೆಯ ಪಕ್ಕದ, ತಿರುವುಮುರುವಿನ, ಸೀದಾ ಇಳುಕಲಿನ, ಒಂದು ಕಡೆ ಬೆಟ್ಟವೂ ಇನ್ನೊಂದು ಕಡೆ ಪ್ರಪಾತವೂ ಇರುವ ಮಣ್ಣಿನ ರಸ್ತೆಯಲ್ಲಿ ಇಳಿದು ಹೋದರೆ ಸಿಗುವುದು ನನ್ನ ಅಜ್ಜನ ಮನೆ.
ಅಜ್ಜನ ಮನೆಯ ಹಿಂದಿರುವ ಬೆಟ್ಟವನ್ನು ಈ ಕಡೆಯಿಂದ ಹತ್ತಿ ಆ ಕಡೆ ಇಳಿದರೆ ನೀವು ವರದಹಳ್ಳಿಯಲ್ಲಿರುತ್ತೀರಿ. ಹಿಂದೆಲ್ಲ ನನ್ನ ಅಮ್ಮ-ಮಾವಂದಿರೆಲ್ಲ ಪ್ರತಿ ಶನಿವಾರ-ಭಾನುವಾರ ಶ್ರೀಧರ ಸ್ವಾಮಿಗಳ ಪ್ರವಚನ ಕೇಳಲು ಇದೇ ಗುಡ್ಡ ಹತ್ತಿಳಿದು ವರದಹಳ್ಳಿಗೆ ಹೋಗುತ್ತಿದ್ದರಂತೆ. ಪ್ರವಚನ ಮುಗಿದ ನಂತರ ಶ್ರೀಧರ ಸ್ವಾಮಿಗಳು ಎಲ್ಲರಿಗೂ ಮಂತ್ರಾಕ್ಷತೆ ಕೊಡುತ್ತಿದ್ದರಂತೆ ಮತ್ತು ಅಮ್ಮ-ಮಾವರಂತಹ ಸಣ್ಣ ಮಕ್ಕಳಿಗೆ ತಮ್ಮ ಬಳಿಯಿದ್ದ ಹಣ್ಣು-ಹಂಪಲನ್ನೆಲ್ಲ ಕೊಡುತ್ತಿದ್ದರಂತೆ. "ಆವಾಗ ಪ್ರವಚನ ಎಲ್ಲಾ ನಮ್ಗೆ ಎಲ್ಲಿ ಅರ್ಥ ಆಗ್ತಿತ್ತು? ಹಣ್ಣು ಸಿಗ್ತಲಾ ಅಂತ ಗುಡ್ಡ ಹತ್ತಿಳ್ದು ವದ್ಧಳ್ಳಿಗೆ ಹೋಗ್ತಿದ್ಯ. ಈಗ ಹಣ್ಣು ಬಿಟ್ಟು ಏನು ಕೊಡ್ತಿ ಅಂದ್ರೂ ಗುಡ್ಡ ಹತ್ತಕ್ಕೆ ಹರಿಯದಿಲ್ಲೆ..!" ನೆನಪು ಮಾಡಿಕೊಳ್ಳುತ್ತಾ ಹೇಳುತ್ತಾಳೆ ಅಮ್ಮ.
ಅದಿರಲಿ, ನಾನಾಗ ಹೇಳಿದೆನಲ್ಲ, ಸಾಗರದಿಂದ ಏಳು ಕಿಲೋಮೀಟರ್ ಸಾಗಿಬಂದ ನಂತರ ಸಿಗುವ ಕಟ್ಟೆ, ಈ ಕಟ್ಟೆಯ ಬಾಜೂ, ಕಟ್ಟೆಗೆ ಸದಾ ನೆರಳಾಗಿ, ಒಂದು ಬೃಹತ್ ಸಂಪಿಗೆ ಮರವಿದೆ. ರಸ್ತೆಯ ಬಲಬದಿಗೆ ಲೋಕೋಪಯೋಗಿ ಇಲಾಖೆಯವರು ಕಟ್ಟಿಸಿದ ಬಸ್ಸ್ಟ್ಯಾಂಡ್ ಇದೆಯಾದರೂ ಯಾರೂ ಅದನ್ನು ಬಳಸುವುದಿಲ್ಲ. ಸದಾ ಅದರೊಳಗೆ ಹೇರಳ ಕಸ ಶೇಖರವಾಗಿರುತ್ತದೆ. ಬಿಂದಿಲು, ಬಲೆ ಕಟ್ಟಿಕೊಂಡಿರುತ್ತದೆ. ದನಕರುಗಳು ಅದನ್ನು ಕೊಟ್ಟಿಗೆ ಎಂದೇ ಭಾವಿಸಿ ಅಲ್ಲೇ ಮಲಗಿ ಮೆಲುಕು ಹಾಕುತ್ತಿರುವುದನ್ನೂ ಕಾಣಬಹುದು. ವರ್ಷ ಎರಡು ವರ್ಷಕ್ಕೊಮ್ಮೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಈ ಬಸ್ಸ್ಟಾಂಡನ್ನು ನವೀಕರಣಗೊಳಿಸುವ ನೆಪದಲ್ಲಿ ಪೇಯಿಂಟ್ ಮಾಡಿಸಿ, ಒಡೆದ ಹಂಚುಗಳನ್ನು ಬದಲಿಸಿ, ತಮ್ಮ ಜೇಬು ಭರ್ತಿ ಮಾಡಿಕೊಳ್ಳುತ್ತಾರೆ. ಬಸ್ಸಿಗೆ ಕಾಯುವ ಊರಿನ ಜನ ಯಾವಾಗಲೂ ನಿಲ್ಲುವುದು ಸಂಪಿಗೆ ಮರದ ಕೆಳಗೇ. ಬಸ್ ಬರುವುದು ತಡವಾಗಿ, ನಿಂತೂ ನಿಂತೂ ಸುಸ್ತಾದರೆ ಸಂಪಿಗೆ ಮರದ ಬುಡದಲ್ಲಿರುವ ತ್ರಿಕೋಣಾಕಾರದ ಕಟ್ಟೆಯ ಮೇಲೆ ಕೂರುತ್ತಾರೆ. ಕೆಲವರು ಮರದ ಬುಡದಲ್ಲೇ, ಮೇಲೆದ್ದು ಬಂದಿರುವ ಮರದ ಬೃಹತ್ ಬೇರುಗಳ ಮೇಲೇ ಅಂಡೂರುತ್ತಾರೆ. ಇನ್ನು ಕೆಲವರು ಟಾರ್ ರೋಡಿನ ಮೇಲೂ ಕೂರುವುದುಂಟು.
ಈ ಮರ ಯಾವುದೇ ಸಾಧಾರಣ ಸಂಪಿಗೆ ಮರದಂತೆ ಕಂಡರೂ ಇದಕ್ಕೊಂದು ಮಹತ್ವವಿದೆ. ಬೆಂಕಟವಳ್ಳಿ ಊರಿನ ಜನ ತಮ್ಮೂರಿನ ಬಸ್ ಇಳಿದು ಹತ್ತುವ ಜಾಗವನ್ನು ಎಲ್ಲಾ ಊರಿನವರಂತೆ ಬಸ್ಸ್ಟ್ಯಾಂಡ್ ಎಂದು ಕರೆಯುವುದಿಲ್ಲ; ಸಂಪಿಗೆ ಮರ ಅಂತ ಕರೆಯುತ್ತಾರೆ. ನಾವಾದರೆ ಬಸ್ಸ್ಟ್ಯಾಂಡಲ್ ಕಾದೂ ಕಾದೂ ಸಾಕಾಯ್ತು ಮಾರಾಯಾ, ಕೃಷ್ಣಾ ಬಸ್ ಬರಲೇ ಇಲ್ಲ! ಎನ್ನುತ್ತೇವೆ. ಆದರೆ ಬೆಂಕಟವಳ್ಳಿಯ ಜನ ಬೇಗ್ ಬೇಗ ನಡೆ.. ಎರಡೂ ವರೆಗೆ ಕರೆಕ್ಟಾಗಿ ಬರತ್ತೆ ವರದಾ ಬಸ್ಸು ಸಂಪಿಗೆ ಮರದ ಹತ್ರ ಎನ್ನುತ್ತಾರೆ. ಇವರು ಬಸ್ಸ್ಟ್ಯಾಂಡ್ ಶಬ್ದವನ್ನು ಬಳಸುವುದೇ ಇಲ್ಲ. ಅದರ ಜಾಗದಲ್ಲಿ ಸದಾ ಸಂಪಿಗೆ ಮರ ತೂಗುತ್ತಿರುತ್ತದೆ.
ವಸಂತ ಮಾಸದಲ್ಲಿ ನೀವೇನಾದರೂ ಇಲ್ಲಿಗೆ ಬಂದರೆ ಈ ಮರದ ಗೆಲ್ಲ ಮೇಲೆ ಕೋಗಿಲೆ ಕೂತು ಹಾಡುವುದನ್ನು ಕೇಳಬಹುದು. ಸಂಪಿಗೆಯೆಲ್ಲೋ ಕೋಗಿಲೆಯೆಲ್ಲೋ? ಎಂಬ ಉದ್ಘಾರ ನಿಮ್ಮಿಂದ ಹೊರಬೀಳುವುದಂತೂ ಖಚಿತ. ಆದರೆ ಹಾಗೆ ಹಾಡು ಕೇಳಬೇಕೆಂದರೆ ನೀವು ಈ ಮರದಿಂದ ತುಸು ದೂರದಲ್ಲಿ, ಮರೆಯಲ್ಲಿ ನಿಂತಿರಬೇಕಾಗುತ್ತದೆ. ಮರದ ಕೆಳಗೇ ಇದ್ದರೆ ಕೋಗಿಲೆಗೆ ಸಂಕೋಚವಾಗಿ ಹಾಡುವುದಿಲ್ಲ. ಭಯಗೊಂಡು ಹಾರಿಹೋದರೂ ಹೋಗಬಹುದು. ನೀವು ದೂರದಲ್ಲಿ, ಅಗೋ, ಆ ಟ್ರಾನ್ಸ್ಫಾರ್ಮರ್ ಕಂಬದ ಬಳಿ ಒಂದು ಸಣ್ಣ ಗುಡ್ಡ ಇದೆಯಲ್ಲ, ಅದರ ಮೇಲೆ ಕುಳಿತುಕೊಳ್ಳಬೇಕು. ಆಗ ಈ ಕೋಗಿಲೆ, ವಧುವನ್ನು ನೋಡಲು ವರನ ಮನೆಯವರು ಹೋದಾಗ ತಲೆ ತಗ್ಗಿಸಿಕೊಂಡು ನಾಚುತ್ತಾ ಹಾಡುವ ಹುಡುಗಿಯಂತೆ, ಸುಮಧುರವಾಗಿ ಹಾಡುತ್ತದೆ. ಆ ಕೋಗಿಲೆ ಹಾಡು, ಪಕ್ಕದ ಗಹ್ವರದಲ್ಲಿಳಿದು, ಗಿರಿಗೆ ಬಡಿದು, ದೊಡ್ಡ ಮರಗಳ ಕಂಕುಳಲ್ಲಿ ಕಚಗುಳಿಯಾಗುವಂತೆ ಹಾದು ಪ್ರತಿಧ್ವನಿಸುವಾಗ ನಿಮಗದು ಹತ್ತಿರದಲ್ಲೆಲ್ಲೋ ಮತ್ತೊಂದು ಕೋಗಿಲೆ ಇದೆಯೇನೋ ಎಂಬ ಭ್ರಮೆ ತರಿಸುತ್ತದೆ. ಎರಡು ಕೋಗಿಲೆಗಳ ಜುಗಲ್ಬಂದಿಯಂತೆ ಭಾಸವಾಗುತ್ತದೆ.
ಸಂಪಿಗೆ ಮರ ವರ್ಷಕ್ಕೊಮ್ಮೆ ಹೂ ಬಿಡುತ್ತದೆ. ಆಗ ಈ ಮರದ ಸುತ್ತೆಲ್ಲ ಸಂಪಿಗೆಕಂಪು ಪೂಸಿಕೊಂಡಿರೊತ್ತೆ. ಬಸ್ಸಿಗೆ ಹೋಗಲೆಂದು ಬೆಂಕಟವಳ್ಳಿಯ ಮಣ್ಣು ರಸ್ತೆಯ ಏರು ಹತ್ತುತ್ತಿರುವವರು ಕೊನೆಯ ತಿರುವಿನಲ್ಲಿರುವಾಗಲೇ ಇದರ ಘಮ ಮೂಗಿಗಡರಿ ಅವರ ಏದುಸಿರೂ ಆಪ್ಯಾಯಮಾನವಾಗುತ್ತದೆ. ತಮ್ಮ ತಮ್ಮ ವಾಹನಗಳಲ್ಲಿ ಟಾರು ರಸ್ತೆಯಲ್ಲಿ ಗುಬ್ಬಗೋಡಿನ ಕಡೆ ಹೊರಟವರು, ಗುಬ್ಬಗೋಡಿನಿಂದ ಸಾಗರಕ್ಕೆ ಹೊರಟವರು ಸಂಪಿಗೆ ಮರ ಹೂ ಬಿಡುವ ಕಾಲದಲ್ಲಿ ಇಲ್ಲಿ ಐದು ನಿಮಿಷ ನಿಲ್ಲಿಸಿ, ಬಡಿಗೆಯಿಂದ ಬಡಿದು, ಒಂದೆರಡಾದರೂ ಹೂವುದುರಿಸಿಕೊಂಡು, ಅದರ ಪರಿಮಳ ಹೀರುತ್ತಾ ಮುಂದೆ ಸಾಗುತ್ತಾರೆ.
ನನ್ನ ಅಜ್ಜನ ಮನೆ ಊರಿನಲ್ಲಿ ಸಾಗರದ ಕಾಲೇಜಿಗೆ ಹೋಗುವ ಅತಿ ಚಂದದ ಹುಡುಗಿಯರು ಇದ್ದಾರೆ ಎಂದು ನಾನು ಹೇಳಿದರೆ ನೀವದನ್ನು ಆತ್ಮಪ್ರಶಂಸೆ ಎಂದು ಭಾವಿಸಬಾರದು. ಏಕೆಂದರೆ, ಹಾಗೆ ಹೇಳಿಕೊಳ್ಳುವುದರಿಂದ ನನಗೇನೂ ಲಾಭವಿಲ್ಲ. ಲಾಭವೇನಿದ್ದರೂ ಇರುವುದು ಬೆಂಕಟವಳ್ಳಿ ಮತ್ತು ಅಕ್ಕಪಕ್ಕದ ಊರಿನ ಹುಡುಗರಿಗೆ! ಬಸ್ಸು ಬರುವುದಕ್ಕೂ ಕನಿಷ್ಟ ಅರ್ಧ ಗಂಟೆ ಮುಂಚಿತವಾಗಿಯೇ ಇಲ್ಲಿಗೆ ಬಂದು ಸೇರುವ ಹುಡುಗರು, ಹುಡುಗಿಯರಿಗಾಗಿ ಕಾಯತೊಡಗುತ್ತಾರೆ. ಬೆಂಕಟವಳ್ಳಿಯ ಹಿಂದು ಮುಂದಿನ ಊರಿನ ಹುಡುಗರೂ ಸಹ ಇಲ್ಲಿಗೇ ಬಂದು ಬಸ್ಸು ಹತ್ತುತ್ತಾರೆಂದರೆ ಅದರ ಹಿಂದೊಂದು ಗುಟ್ಟಿರಬೇಕಲ್ಲವೇ? ಅದು ಮತ್ತೇನೂ ಅಲ್ಲ: ಬಿಳಿ ಚೂಡಿದಾರು, ಮುಖಕ್ಕೆ ಕ್ರೀಮು ಪೌಡರು, ಚಂದ ಬಾಚಿದ ಕೂದಲು, ಮ್ಯಾಚಿಂಗ್ ಕಲರ್ ಸ್ಲಿಪ್ಪರು ಧರಿಸಿ ಚಂದದ ಬೊಂಬೆಗಳಂತೆ ತಯಾರಾಗಿ ಕಾಲೇಜಿಗೆ ಹೊರಟಿರುವ ಈ ಹುಡುಗಿಯರಿಗೆ ಸಂಪಿಗೆಯ ಪರಿಮಳ ಕೇಳಿ ಅದನ್ನು ಮುಡಿಯಬೇಕೆಂಬ ಆಸೆಯಾಗುತ್ತದಾದರೂ, ಬಡಿಗೆ ಹುಡುಕಿ, ಎತ್ತಿ ಎಸೆದು, ಹೂವು ಬೀಳಿಸಿ ಮುಡಿದುಕೊಳ್ಳಲಿಕ್ಕೆ ತಮ್ಮ ಅಲಂಕಾರವೆಲ್ಲಾ ಎಲ್ಲಿ ಹಾಳಾಗುತ್ತದೋ ಎಂಬ ಹಿಂಜರಿಕೆ.
ಇದನ್ನರಿತಿರುವ ಚಾಣಾಕ್ಷಮತಿ ಹುಡುಗರು, ಮುಂಚೆಯೇ ಇಲ್ಲಿಗೆ ಬಂದು ಹೂವನ್ನೆಲ್ಲಾ ಹುಡುಕಿ ಬಡಿದು ಕೆಡವಿ ಗುಡ್ಡೆ ಮಾಡಿ, ಹುಡುಗಿಯರು ಬರುವಷ್ಟರಲ್ಲಿ ಬೊಗಸೆ ತುಂಬ ಹೂ ಹಿಡಿದು ನಿಂತಿರುತ್ತಾರೆ. ಹೀಗಾಗಿ, ಸಂಪಿಗೆ ಹೂ ಬಿಡುವ ಕಾಲದಲ್ಲಿ ನೀವು ಈ ಕಡೆ ಬಂದರೆ, ಇನ್ನೂ ಮಂಜು ಮುಸುಕಿದ ಮುಂಜಾವಿನಲ್ಲಿ, ಮೊದಲ ಬಸ್ಸಿನ್ನೂ ಬರುವುದಕ್ಕೆ ಸಮಯವಿರಲು, ಬೆಂಕಟವಳ್ಳಿಯ ಸಂಪಿಗೆ ಮರದ ಕೆಳಗೆ ಹುಡುಗರು ಹುಡುಗಿಯರಿಗೆ ಹೂ ಕೊಟ್ಟು ಪ್ರತಿದಿನವೂ ಪ್ರಪೋಸ್ ಮಾಡುವ ಅಮೋಘ ಸಿನಿಮಾ ದೃಶ್ಯವನ್ನು ಕಾಣಬಹುದು!
ಹಾಂ, ಸಿನಿಮಾ ಎಂದಾಕ್ಷಣ ನೆನಪಾಯಿತು. ಪುಟ್ಟಣ್ಣ ಕಣಗಾಲರ ಅಮೃತ ಘಳಿಗೆ ಸಿನಿಮಾ ಇದೆಯಲ್ಲಾ, ಆ ಸಿನಿಮಾ ಚಿತ್ರೀಕರಿಸಲ್ಪಟ್ಟಿರುವುದು ಇದೇ ಸಂಪಿಗೆ ಮರದ ಸುತ್ತಲಿನ ಪ್ರದೇಶದಲ್ಲಿ. ಈ ಸಂಪಿಗೆ ಮರವೂ ಆ ಚಿತ್ರದಲ್ಲಿ ಹಸಿರು ಸೀರೆ ಉಟ್ಟು ಚಂದ ಪೋಸ್ ಕೊಟ್ಟಿರುವುದನ್ನು ನೋಡಿದರೆ ಇದಕ್ಕೆ ಅಭಿನಯದಲ್ಲಿ ಆಸಕ್ತಿಯಿತ್ತೇ ಎಂಬ ಅನುಮಾನ ಬರುತ್ತದೆ. ಈ ಸಂಪಿಗೆ ಮರದಿಂದ ಸುಮಾರು ಒಂದೂ ವರೆ ಮೈಲಿ ದೂರದಲ್ಲಿರುವ ತುಂಬೆ ಎಂಬ ಊರಿನಲ್ಲಿ ಒಬ್ಬ ಭಾರೀ ಶ್ರೀಮಂತರ ಮನೆಯಿದೆ. ತುಂಬೆ ಹೆಗ್ಡೇರು ಅಂತಲೇ ಅವರು ಜನಜನಿತರು. ಅವರ ಮನೆಯಲ್ಲೇ ನಡೆದದ್ದು ಅಮೃತ ಘಳಿಗೆಯ ಮುಕ್ಕಾಲು ಪಾಲು ಚಿತ್ರೀಕರಣ. ಅದು ನಡೆಯುವಾಗ ಅಮ್ಮ ತನ್ನ ಗೆಳತಿಯರೊಡಗೂಡಿ ಅಲ್ಲಿಗೆ ಹೋದದ್ದು, ಅಲ್ಲಿ ಶ್ರೀಧರ್, ರಾಮಕೃಷ್ಣ, ಪುಟ್ಟಣ್ಣ -ಮುಂತಾದವರನ್ನು ನೋಡಿದ್ದನ್ನು ನೆನಪಿಟ್ಟುಕೊಂಡಿದ್ದಾಳೆ. ಅಮೃತ ಘಳಿಗೆ ಸಿನಿಮಾ ನಮ್ಮೂರ ಡಾ| ವೆಂಕಟಗಿರಿ ರಾವ್ ಅವರ ಅವಧಾನ ಕಾದಂಬರಿಯನ್ನು ಆಧರಿಸಿದ್ದು ಎಂದೆಲ್ಲ ಹೇಳಿದರೆ ನಾನು ಸಂಪಿಗೆ ಮರ ಬಿಟ್ಟು ಎಲ್ಲೆಲ್ಲಿಗೋ ಹೋಗುತ್ತಿದ್ದೇನೆ ಎಂದು ನೀವು ಆಪಾದಿಸಬಾರದು. ಏನು ಮಾಡಲಿ? ಸಂಪಿಗೆ ಮರ ಎಂದಾಕ್ಷಣ ನನಗೆ ಅವೆಲ್ಲ ನೆನಪಾಗುತ್ತದೆ.
ಬೆಂಕಟವಳ್ಳಿ ಬಸ್ಸ್ಟ್ಯಾಂಡ್ನ ಹತ್ತಿರದಲ್ಲಿ ಯಾವುದೇ ಮನೆಯಾಗಲೀ, ಅಂಗಡಿಯಾಗಲೀ ಇಲ್ಲವಾದ್ದರಿಂದ , ಅದೊಂದು ನಿರ್ಜನ ಪ್ರದೇಶವಾದ್ದರಿಂದ, ಅದರ ಸುತ್ತ ಕೆಲವೊಂದು ನಿಗೂಢ ಘಟನೆಗಳೂ ನಡೆದ ಸುದ್ಧಿಗಳಿವೆ. ಉದಾಹರಣೆಗೆ, ಸಂಪಿಗೆ ಮರದ ಕೆಳಗೆ ಬಸ್ಸಿಗೆ ಕಾಯುತ್ತಿದ್ದ ಸುಜಾತಕ್ಕನನ್ನು ಯಾರೋ ಬೆದರಿಸಿ ದುಡ್ಡು ಕಿತ್ತುಕೊಂಡರಂತೆ ಎಂಬುದು; ಬಸ್ಸ್ಟ್ಯಾಂಡ್ ಒಳಗೆ ಪ್ರಕಾಶಣ್ಣ ಒಂದು ಮೂಟೆ ಕಂಡನೆಂದೂ ಅದು ಕಳ್ಳಸಾಗಣೆದಾರರು ಬಚ್ಚಿಟ್ಟಿದ್ದ ಗಂಧವೆಂದೂ ಮರುದಿನ ನೋಡುವಷ್ಟರಲ್ಲಿ ಇರಲಿಲ್ಲವೆಂದೂ; ಬಸ್ಸ್ಟ್ಯಾಂಡ್ ಪಕ್ಕದಲ್ಲಿರುವ ಟ್ರಾನ್ಸ್ಫಾರ್ಮರ್ ಪದೇ ಪದೇ ಹೋಗುವುದಕ್ಕೆ ಕಾರಣ ಸಂಪಿಗೆ ಮರದಲ್ಲಿರುವ ಯಾವುದೋ ಕ್ಷುದ್ರಶಕ್ತಿಯೆಂದೂ -ಹೀಗೆ. ಮತ್ತೆ, ಇವೆಲ್ಲಕ್ಕಿಂತಲೂ ಆಸಕ್ತಿಕರವಾದ ಮತ್ತೊಂದು ಘಟನೆಗೆ ಕಣ್ಣು ಕಿವಿಯಾಗುವ ಅವಕಾಶ ನನಗೊದಗಿ ಬಂತು.
ಮುಂದೆ ಏನಾಯ್ತು ಅಂದ್ರೆ...ಸಂಪ್ಗೆಮರದಲ್ಲಿ ಮೋಹಿನಿ; ಭಾಗ ಎರಡು