ಬರುವ ಶೈಕ್ಷಣಿಕ ವರ್ಷದಿಂದ ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಕಂಪ್ಯೂಟರ್ ಶಿಕ್ಷಣ
ಮೈಸೂರು : ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಕಂಪ್ಯೂಟರ್ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ್ ಸೋಮವಾರ ತಿಳಿಸಿದ್ದಾರೆ.
ಮೈಸೂರು ಮಹಾರಾಣಿ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡುತ್ತಿದ್ದರು. ಕೇವಲ ವಿಜ್ಞಾನ ಅಭ್ಯಸಿಸುವ ವಿದ್ಯಾರ್ಥಿಗಳಿಗಷ್ಟೇ ಕಂಪ್ಯೂಟರ್ ಶಿಕ್ಷಣ ಸೀಮಿತವಾಗದೆ ಕಲೆ, ವಾಣಿಜ್ಯ ಮತ್ತು ಕೃಷಿ ವಿಷಯಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಅದು ಲಭಿಸಬೇಕು ಎಂದು ಪರಮೇಶ್ವರ್ ಅಭಿಪ್ರಾಯಪಟ್ಟರು.
ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಮೀಸಲಾತಿ : ಒಂದರಿಂದ ಹತ್ತನೇ ಇಯತ್ತೆವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದಲ್ಲಿ ಸೀಟುಗಳನ್ನು ಮೀಸಲಿಡುವ ಬಗೆಗೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಂದಿನ ಸಚಿವ ಸಂಪುಟದಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಹೇಳಿದರು.
ಮಹಿಳೆಯರಿಗೆ ಆದ್ಯತೆ : ವೃತ್ತಿಪರ ಶಿಕ್ಷಣದಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲು ಹೊಸ ಶಿಕ್ಷಣ ನೀತಿ ರೂಪಿಸಲಾಗಿದ್ದು, ಇದರನ್ವಯ ಭವಿಷ್ಯದಲ್ಲಿ ಮಹಿಳೆಯರಿಗೆ ಉಪಯೋಗವಾಗುವ ಹೊಸ ಕೋರ್ಸುಗಳನ್ನು ಪ್ರಾರಂಭಿಸಲಾಗುವುದು. ಉನ್ನತ ಶಿಕ್ಷಣದಲ್ಲಿ ಈಗಿರುವ ಶೇ. 34ರಷ್ಟು ಮಹಿಳಾ ಮೀಸಲಾತಿಯನ್ನು ಇನ್ನಷ್ಟು ಹೆಚ್ಚಿಸುವ ಆಶಯವೂ ಎಸ್.ಎಂ. ಕೃಷ್ಣ ಸರ್ಕಾರಕ್ಕಿದೆ ಎಂದರು.
ಸಮಾರಂಭದಲ್ಲಿ ರಾಜ್ಯಪಾಲೆ ವಿ.ಎಸ್. ರಮಾದೇವಿ ಸಹ ಹಾಜರಿದ್ದರು.
(ಮೈಸೂರು ಪ್ರತಿನಿಧಿಯಿಂದ)