ದುರ್ಬಲ ಮುಂಗಾರು, ಕೆಲವೆಡೆ ಒಣಹವೆ
ಬೆಂಗಳೂರು : ರಾಜ್ಯದ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿದೆ. ಆದಾಗ್ಯೂ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಬಿದ್ದಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಕರ್ನಾಟಕದಲ್ಲಿ ಸಹ ಚದುರಿದಂತೆ ಮಳೆ ಆಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಕಾರ್ಕಳದಲ್ಲಿ 2 ಸೆಂಟಿ ಮೀಟರ್, ಬಂಟ್ವಾಳ, ಮಂಕಿ, ಮೂಲ್ಕಿ, ಮಂಗಳೂರು ವಿಮಾನ ನಿಲ್ದಾಣ, ಆಗುಂಬೆಯಲ್ಲಿ ತಲಾ 1 ಸೆಂಟಿ ಮೀಟರ್ ಮಳೆ ಬಿದ್ದಿದೆ. ದಕ್ಷಿಣ ಒಳನಾಡಿನ ಕೆಲವೆಡೆ ತಾಪಮಾನ ಹೆಚ್ಚಿತ್ತು. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಕೂಡ ತಾಪಮಾನದಲ್ಲಿ ಬದಲಾವಣೆ ಕಂಡು ಬಂತು.
ಕರಾವಳಿ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ಗುಲ್ಬರ್ಗಾದಲ್ಲಿ ದಿನದ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಬೀದರ್ನಲ್ಲಿ ರಾತ್ರಿಯ ಕನಿಷ್ಠ ಉಷ್ಣಾಂಶ 18.4 ಡಿಗ್ರಿ ಸೆಲ್ಸಿಯಸ್ ಇತ್ತು.
ಗುರುವಾರದವರೆಗಿನ ಮುನ್ಸೂಚನೆಯಂತೆ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಸುರಿಮಳೆ ಬೀಳುವ ಸಾಧ್ಯತೆ ಇದೆ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದ್ದು, ಹಗುರದಿಂದ ಮಳೆ ಬೀಳುವ ಸಾಧ್ಯತೆ ಇದೆ. ದಿನದ ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ.