ಮಂಗಳೂರಿನಲ್ಲಿ 3 ಸೆಂ.ಮೀ. ಮಳೆ
ಬೆಂಗಳೂರು : ಶನಿವಾರ ಮತ್ತೆ ಬಂಗಾಳಕೊಲ್ಲಿಯನ್ನು ಅಪ್ಪಳಿಸಲಿರುವ ಚಂಡಮಾರುತದ ಭೀತಿಯ ಹಿನ್ನೆಲೆಯಲ್ಲಿ ಕೆಳದಂಡೆಯ ಪ್ರದೇಶಗಳ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುವ ಕಾರ್ಯವನ್ನು ಪಶ್ಚಿಮ ಬಂಗಾಳ ಸರಕಾರ ಕೈಗೊಂಡಿದೆ.
ಕರಾವಳಿ ಜಿಲ್ಲೆಗಳಾದ ಮಿಡ್ನಾಪುರ, ಉತ್ತರ ಹಾಗೂ ದಕ್ಷಿಣ 24 ಪರಗಣಗಳೇ ಅಲ್ಲದೆ ಹೌರಾ ಹಾಗೂ ಹೂಗ್ಲಿ ಪ್ರದೇಶಗಳಲ್ಲಿ ಎಚ್ಚರಿಕೆಯ ಗಂಟೆ ಮೊಳಗಿದೆ. ಈ ತುರ್ತುಸ್ಥಿತಿಯನ್ನು ಎದುರಿಸಲು ಸರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಇತ್ತ ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಶಾಂತನಾಗಿದ್ದ ಮಳೆರಾಯ ಶುಕ್ರವಾರ ಮತ್ತೆ ಕಾರ್ಯಪ್ರವೃತ್ತನಾಗಿದ್ದಾನೆ. ರಾಜ್ಯದ ಕರಾವಳಿಯ ಕೆಲವೆಡೆ ಮಳೆ ಬಿದ್ದಿದೆ. ಉಳಿದಂತೆ ರಾಜ್ಯಾದ್ಯಂತ ಒಣಹವೆ ಮುಂದುವರಿದಿದೆ. ಮಂಗಳೂರಿನಲ್ಲಿ 3 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ 2, ಪಣಂಬೂರಿನಲ್ಲಿ 1 ಸೆಂಟಿ ಮೀಟರ್ ಮಳೆ ಆಗಿದೆ. ದಿನದ ಗರಿಷ್ಠ ಉಷ್ಣಾಂಶ ರಾಜ್ಯದ ಬಹುತೇಕ ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ರಾಯಚೂರಿನಲ್ಲಿ ದಿನದ ಗರಿಷ್ಠ ಉಷ್ಣಾಂಶ 34ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ ಗುಲ್ಬರ್ಗಾದಲ್ಲಿ 14.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆಯಂತೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ರಾಜ್ಯದ ಕೆಲವೆಡೆ ಮಳೆ ಬೀಳುವ ಸಂಭವ ಇದೆ. ಸ್ಥಳೀಯ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಒಂದೆರಡು ಕಡೆ ಹಗುರದಿಂದ ಮಳೆ ಬೀಳುವ ಸಾಧ್ಯತೆ ಇದೆ. ದಿನದ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ 31ಡಿಗ್ರಿ ಸೆಲ್ಸಿಯಸ್ ಹಾಗೂ 18 ಡಿಗ್ರಿ ಸೆಲ್ಸಿಯಸ್ ಇರುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.