ದಲಿತರ ಮೇಲಿನ ದೌರ್ಜನ್ಯ : ಕೊಳೆಯುತ್ತಿರುವ 2000 ಪ್ರಕರಣಗಳು
ಬೆಂಗಳೂರು : ದಲಿತರ ವಿರುದ್ಧ ನಡೆದ ದೌರ್ಜನ್ಯಗಳ ವಿಚಾರಣೆ ವಿಳಂಬವಾಗುತ್ತಿದ್ದು , ಬಾಕಿ ಇರುವ ಸುಮಾರು 2000 ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವಂತೆ ಸರ್ಕಾರ ಹೈಕೋರ್ಟನ್ನು ಕೋರಲಿದೆ ಎಂದು ಸಮಾಜ ಕಲ್ಯಾಣ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು, ದಲಿತರು ಮತ್ತು ಸವರ್ಣೀಯರ ನಡುವೆ ಈಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸಂಘರ್ಷಗಳ ಕುರಿತು ಆತಂಕ ವ್ಯಕ್ತಪಡಿಸಿದರು. ಡಿಸೆಂಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಸೇರುವ ದೌರ್ಜನ್ಯ ವಿರೋಧಿ ಸಮಿತಿಯು ವಿಶೇಷ ಕೋರ್ಟ್ ಸ್ಥಾಪಿಸುವಂತೆ ಹೈಕೋರ್ಟನ್ನು ಕೋರುವ ನಿರ್ಣಯವನ್ನು ಕೈಗೊಳ್ಳಲಿದೆ ಎಂದರು.
ದಲಿತರ ಮೇಲಿನ ದೌರ್ಜನ್ಯದ ಪ್ರಕರಣಗಳನ್ನು ಆದ್ಯತೆ ಮೇಲೆ ವಿಚಾರಣೆ ನಡೆಸಲು ಮೈಸೂರು, ಕೋಲಾರ, ಬೆಂಗಳೂರು, ಚಿತ್ರದುರ್ಗ, ಗುಲ್ಬರ್ಗಾ ಹಾಗೂ ದಾವಣಗೆರೆಗಳಲ್ಲಿ ನಿಯೋಜಿತ ನ್ಯಾಯಾಲಯಗಳನ್ನು ರಚಿಸಲಾಗಿದ್ದರೂ, ಪ್ರಕರಣಗಳ ಇತ್ಯರ್ಥ ವಿಳಂಬವಾಗುತ್ತಿದೆ ಎಂದು ಸಚಿವರು ಹೇಳಿದರು. ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಂಚಾರಿ ನ್ಯಾಯಲಯವನ್ನು ಸ್ಥಾಪಿಸಲು ಹೈಕೋರ್ಟಿಗೆ ಮನವಿ ಮಾಡಿದ್ದರೂ, ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದರು.
(ಇನ್ಫೋ ವಾರ್ತೆ)