ವೀರಪ್ಪನ್ ಶಿಕಾರಿ ಮುಗಿಯುವ ತನಕ ಎಂಎಂ ಹಿಲ್ಸ್ನಲ್ಲಿ ಗಣಿಗಾರಿಕೆ ಇಲ್ಲ
ಬೆಂಗಳೂರು : ಕರ್ನಾಟಕ ಹಾಗೂ ತಮಿಳುನಾಡು ಸರಕಾರಗಳಿಗೆ ದಶಕಗಳಿಂದಲೂ ತಲೆನೋವಾಗಿ ಪರಿಣಮಿಸಿರುವ ಕಾಡುಗಳ್ಳ - ನರಹಂತಕ ವೀರಪ್ಪನ್ ವಿರುದ್ಧದ ಕಾರ್ಯಾಚರಣೆ ಪೂರ್ಣವಾಗುವ ತನಕ ಮಲೆ ಮಹದೇಶ್ವರ ಬೆಟ್ಟ ಶ್ರೇಣಿಯಲ್ಲಿ ಗಣಿಗಾರಿಕೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಗಣಿ ಹಾಗೂ ಭೂ ವಿಜ್ಞಾನ ಸಚಿವ ಮುನಿಯಪ್ಪ ತಿಳಿಸಿದ್ದಾರೆ.
ಕನ್ನಡದ ವರನಟ ರಾಜ್ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸುವ ಮುನ್ನ 5 ಸಾವಿರಕ್ಕೂ ಹೆಚ್ಚು ಕಾರ್ಮಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಮಲೆ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಅನುಮತಿ ನೀಡಲಾಗಿತ್ತು. ಆದರೆ, ಬದಲಾದ ಪರಿಸ್ಥಿತಿಯಲ್ಲಿ ಈ ನಿರ್ಧಾರವನ್ನು ಪುನರ್ಪರಿಶೀಲಿಸುವ ಪ್ರಶ್ನೆಯೇ ಉದ್ಭವಿಸುತ್ತಿಲ್ಲ ಎಂದೂ ಅವರು ಹೇಳಿದ್ದಾರೆ.
ಈ ಪ್ರದೇಶದಲ್ಲಿ ಅನಧಿಕೃತವಾಗಿ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆಯೂ ಯಾವುದೇ ಮಾಹಿತಿ ದೊರಕಿಲ್ಲ ಎಂದೂ ಸಚಿವರು ಸ್ಪಷ್ಟಪಡಿಸಿದ್ದಾರೆ. ಯಾವುದೇ ವ್ಯಕ್ತಿ ಈ ಪ್ರದೇಶದಲ್ಲಿ ಅನಧಿಕೃತವಾಗಿ ಗಣಿಗಾರಿಕೆಯಲ್ಲಿ ತೊಡಗಿರುವುದು ಕಂಡು ಬಂದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ. ರಾಜ್ ಅಪಹರಣವಾದ ಕೂಡಲೇ ಈ ಪ್ರದೇಶದಲ್ಲಿ ಗಣಿಗಾರಿಕೆಯನ್ನು ಸರಕಾರ ನಿಷೇಧಿಸಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ವಾರ್ತಾ
ಸಂಚಯ
ಮುಖಪುಟ
/
ವೀರಪ್ಪನ್
ಶಿಕಾರಿ