2500 ಕೋಟಿ ರು. ಗ್ರಾಮೀಣಾಭಿವೃದ್ಧಿ ಯೋಜನೆ 25ರಂದು ಜಾರಿ
ಬೆಂಗಳೂರು: ದೇಶದ ಹಳ್ಳಿ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸಿ, ಮಾರುಕಟ್ಟೆ ಸೌಲಭ್ಯ ಒದಗಿಸುವ ಉದ್ದೇಶದಿಂದ ಪ್ರಧಾನ ಮಂತ್ರಿಗಳ ಗ್ರಾಮೀಣಭಿವೃದ್ಧಿ ಯೋಜನೆಯಾಂದನ್ನು 2500 ಕೋಟಿ ರುಪಾಯಿ ವೆಚ್ಚದಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ದು ಭಾನುವಾರ ಇಲ್ಲಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ನಗರಾಭಿವೃದ್ಧಿಗಿಂತಲೂ ಗ್ರಾಮೀಣಾಭಿವೃದ್ಧಿಗೆ ಇಂದು ಹೆಚ್ಚಿನ ಗಮನ ಹರಿಸುವುದು ಅಗತ್ಯ ಎಂದರು. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು, ವಿದ್ಯುತ್, ಆರೋಗ್ಯ, ಶಿಕ್ಷಣ ಹಾಗೂ ಸ್ವಚ್ಛತೆಗೆ ಗಮನ ನೀಡಲೇ ಬೇಕು ಎಂದೂ ಅಭಿಪ್ರಾಯಪಟ್ಟರು.
ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿ ಹಾಗೂ ಸರ್ವಾಂಗೀಣ ಅಭಿವೃದ್ಧಿಗಾಗಿ 2500 ಕೋಟಿ ರುಪಾಯಿಗಳ ಯೋಜನೆಯನ್ನು ಜಾರಿಗೆ ತರುತ್ತಿದ್ದು, ಇದು ಡಿಸೆಂಬರ್25ರಿಂದ ಅನುಷ್ಠಾನಕ್ಕೆ ಬರಲಿದೆ ಎಂದೂ ತಿಳಿಸಿದರು. ಗ್ರಾಮ ಪಂಚಾಯಿತಿಗಳನ್ನು ಬಲಪಡಿಸುವ ನಿಟ್ಟಿನಲ್ಲಿ, ಗ್ರಾಮ ಪಂಚಾಯಿತಿಗಳ ಸಮಸ್ಯೆಯ ಬಗ್ಗೆ ಚರ್ಚಿಸಲು ಎಲ್ಲ ರಾಜ್ಯಗಳ ಗ್ರಾಮೀಣಾಭಿವೃದ್ಧಿ ಸಚಿವರುಗಳ ಸಭೆ ಕರೆದು ಚರ್ಚಿಸುವುದಾಗಿ ತಿಳಿಸಿದರು.
ಈ ಸಂಬಂಧ ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವರಾದ ಎಂ.ವೈ. ಘೋರ್ಪಡೆ ಅವರು ತಮ್ಮನ್ನು ಭೇಟಿ ಮಾಡಿ ಚರ್ಚಿಸಿದರು ಎಂದೂ ಅವರು ಹೇಳಿದರು. ಗ್ರಾಮೀಣ ರಸ್ತೆ ಕಾಮಗಾರಿಗೆ ಕೇಂದ್ರ ಸರಕಾರವು ಆದ್ಯತೆಯ ಮೇಲೆ ಹಣ ಬಿಡುಗಡೆ ಮಾಡಲಿದೆ ಎಂದೂ ತಿಳಿಸಿದರು. ಯೋಜನೆಗೆ ಅಗತ್ಯವಾದ ಹಣವನ್ನು ಡೀಸೆಲ್ ಮೇಲಿನ ಸೆಸ್ನಿಂದ ಸಂಗ್ರಹಿಸುವ ಗುರಿ ಇದೆ. ಈ ಯೋಜನೆಯಡಿ ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ ಹಣ ಸಂಪೂರ್ಣ ಬಳಕೆ ಆಗದಿದ್ದಲ್ಲಿ , ಎರಡನೇ ಹಂತದಲ್ಲಿ ಹಣ ಬಿಡುಗಡೆ ಮಾಡಲಾಗುವುದಿಲ್ಲ ಎಂದೂ ತಿಳಿಸಿದರು.
ಗ್ರಾಮೀಣ ಪ್ರದೇಶಗಳ ನಡುವೆ ಸಂಪರ್ಕ ಸಾಧ್ಯವಾಗದಿದ್ದರೆ, ಪ್ರಗತಿಯೇ ಇಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜತೆಗೂಡಿ ದುಡಿದರೆ, ಗ್ರಾಮೀಣ ಪ್ರದೇಶದ ಏಳಿಗೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.