ರಾಜ್ಯದ ಅಭಿವೃದ್ಧಿಗಾಗಿ ಕೃಷಿ ಕ್ಷೇತ್ರಕ್ಕೆ ಹೈಟೆಕ್ ಲೇಪ : ಎಸ್.ಎಂ. ಕೃಷ್ಣ
ಪಿರಿಯಾಪಟ್ಟಣ : ಕೃಷಿಯನ್ನು ಹೈಟೆಕ್ ಮಟ್ಟಕ್ಕೆ ಏರಿಸಿ ವೈಜ್ಞಾನಿಕವಾಗಿ ಅಭಿವೃದ್ಧಿ ಪಡಿಸಲು ಸರ್ಕಾರ ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಮಹಾಸ್ವಾಮಿಗಳ ಜಯಂತಿಯ ಅಂಗವಾಗಿ ಬುಧವಾರ ಏರ್ಪಡಿಸಿದ್ದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಪ್ರಗತಿಪರ ರೈತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ತಮ್ಮ ಅಧಿಕಾರಾವಧಿ ಪೂರ್ಣಗೊಳ್ಳುವ ಒಳಗೆ ಕೃಷ್ಣ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ಘೋಷಿಸಿದ ಅವರು, ರಾಜ್ಯದಲ್ಲಿ ಅಪೂರ್ಣಗೊಂಡಿರುವ ಎಲ್ಲಾ ಏತ ನೀರಾವರಿ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದರು.
ಯಾವುದೇ ರಾಷ್ಟ್ರದ ಪ್ರಗತಿ ಕೃಷಿ ಕ್ಷೇತ್ರವನ್ನು ಹೊರತು ಪಡಿಸಿ ಸಾಧ್ಯವಿಲ್ಲ . ಆದ್ದರಿಂದ ಕೃಷಿ ಕ್ಷೇತ್ರಕ್ಕೆ ವೈಜ್ಞಾನಿಕ ಹೊದಿಕೆ ಹೊದಿಸಿ ಅಭಿವೃದ್ಧಿ ಪಡಿಸಲಾಗುವುದು. ಈ ನಿಟ್ಟಿನಲ್ಲಿ ಕೃಷಿ ಪದವೀಧರರನ್ನು ಬಳಸಿಕೊಳ್ಳಲಾಗುವುದು ಎಂದು ಹೇಳಿದ ಕೃಷ್ಣ , ಕೃಷಿ ಕ್ಷೇತ್ರದ ವಿಮೆಗೆ ರಾಜ್ಯ ಸರ್ಕಾರ 100 ಕೋಟಿ ರುಪಾಯಿ ಒದಗಿಸಿದೆ ಎಂದರು.
ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗೆ ತಮ್ಮ ಸರ್ಕಾರ ಸಂಪೂರ್ಣ ಬೆಂಬಲ ನೀಡುವುದು ಎಂದು ಮುಖ್ಯಮಂತ್ರಿ ಹೇಳಿದರು.
ಸುತ್ತೂರು ಮಠದ ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ, ಬೇಲಿಮಠದ ಶ್ರೀ ಚನ್ನಬಸವ ಸ್ವಾಮೀಜಿಗಳು ಉಪಸ್ಥಿತರಿದ್ದ ಸಮಾವೇಶದ ಅಧ್ಯಕ್ಷತೆಯನ್ನು ಕೃಷಿ ಸಚಿವ ಟಿ.ಬಿ. ಜಯಚಂದ್ರ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ಹಾಗೂ ಅನೇಕ ಶಾಸಕರು ಸಮಾವೇಶದಲ್ಲಿ ಭಾಗವಹಿಸಿದ್ದರು.
(ಇನ್ಪೊ ವಾರ್ತೆ)