ಅಪಘಾತ: ಮಾಸ್ಟರ್ ಹಿರಣ್ಣಯ್ಯ ಪ್ರಾಣಾಪಾಯದಿಂದ ಪಾರು
ಶಿವಮೊಗ್ಗ : ಇಲ್ಲಿನ ಸಹ್ಯಾದ್ರಿ ಕಾಲೇಜ್ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಖ್ಯಾತ ರಂಗಭೂಮಿ ಕಲಾವಿದ, ನಟರತ್ನಾಕರ ಮಾಸ್ಟರ್ ಹಿರಣ್ಣಯ್ಯ ಹಾಗೂ ಅವರ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು - ಹೊನ್ನಾವರ ರಸ್ತೆಯಲ್ಲಿ ಬರುತ್ತಿದ್ದ ಹಿರಣ್ಣಯ್ಯ ಅವರ ಕಾರಿಗೆ ಎದುರಿನಿಂದ ಬಂದ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿತು.
ಹಿಂಬದಿಯ ಸೀಟಿನಲ್ಲಿ ಕುಳಿತಿದ್ದ ಮಾಸ್ಟರ್ ಹಿರಣ್ಣಯ್ಯನವರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ, ಅವರ ಪುತ್ರ ಬಾಬು ಹಿರಣ್ಣಯ್ಯ ಅವರ ತಲೆಗೆ ಪೆಟ್ಟಾಗಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದರು. ಕಾರು ಸಂಪೂರ್ಣ ಜಖಂ ಗೊಂಡಿದೆ.
ಇಲ್ಲಿನ ವಲ್ಲಭಭಾಯಿ ಪಟೇಲ್ ಸ್ಮಾರಕ ಸಾಂಸ್ಕೃತಿಕ ಕೇಂದ್ರ ಏರ್ಪಡಿಸಿದ್ದ ಸಮಾರಂಭದಲ್ಲಿ ಹಿರಣ್ಣಯ್ಯ ಅವರನ್ನು ಸನ್ಮಾನಿಸುವ ಕಾರ್ಯಕ್ರಮ ಇತ್ತು. ಲಂಚಾವತಾರ ನಾಟಕ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಹಿರಣ್ಣಯ್ಯನವರ ಕಾರು ಅಪಘಾತಕ್ಕೀಡಾಯಿತು.
ಅಪಘಾತದ ಹಿನ್ನೆಲೆಯಲ್ಲಿ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ, ಸನ್ಮಾನ ಸಮಾರಂಭ ಹಾಗೂ ನಾಟಕ ಪ್ರದರ್ಶನವನ್ನು ರದ್ದು ಪಡಿಸಲಾಯಿತು.