‘ಉತ್ತರ ಕರ್ನಾಟಕದಲ್ಲಿ ಹೈಕೋರ್ಟ್ ಪೀಠ ಅಗತ್ಯ’
ಬೆಂಗಳೂರು : ಪ್ರಾದೇಶಿಕ ಅಸಮತೋಲನ ನಿವಾರಿಸಲು ಉತ್ತರ ಕರ್ನಾಟಕದಲ್ಲಿ ಹೈಕೋರ್ಟ್ ಪೀಠ ಮತ್ತು ನೈರುತ್ಯ ರೈಲ್ವೇ ವಲಯ ಸ್ಥಾಪಿಸುವುದು ಅಗತ್ಯ ಎಂದು ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ತನ್ನ ಮಧ್ಯಂತರ ವರದಿಯಲ್ಲಿ ಸರಕಾರಕ್ಕೆ ಶಿಫಾರಸು ಮಾಡಿದೆ.
ಸಮಿತಿಯ ಅಧ್ಯಕ್ಷ ಡಾ. ಡಿ. ನಂಜುಡಪ್ಪ ಅವರು ಬುಧವಾರ ತಮ್ಮ ಅಧ್ಯಯನ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಸ್ಥಾಪಿಸಿರುವ ಮಂಡಳಿಗಳೂ ಕೂಡ ಬೆಂಗಳೂರಿನಲ್ಲಿಯೇ ಕಾರ್ಯನಿರ್ವಹಿಸುತ್ತಿವೆ. ಇವುಗಳನ್ನೂ ಉತ್ತರ ಕರ್ನಾಟಕಕ್ಕೆ ವರ್ಗಾಯಿಸಬೇಕು ಎಂದು ವರದಿಯಲ್ಲಿ ಹೇಳಲಾಗಿದೆ.
ಅಲ್ಲದೆ ಉತ್ತರ ಕರ್ನಾಟಕದಲ್ಲಿ ಆರೋಗ್ಯ, ಶಿಕ್ಷಣ ಮತ್ತು ರಸ್ತೆ ಸುಧಾರಣೆಯತ್ತ ಸರಕಾರ ಗಮನ ಹರಿಸಬೇಕು. ಇದರ ಜೊತೆಗೇ ಉತ್ತರ ಕರ್ನಾಟಕ ಜಿಲ್ಲೆಗಳಿಗಿಂತಲೂ ಹಿಂದುಳಿದ ಜಿಲ್ಲೆ ಕೋಲಾರವಾಗಿದ್ದು, ಅಲ್ಲಿಯೂ ಅಭಿವೃದ್ಧಿ ಕಾರ್ಯಗಳನ್ನು ಸರಕಾರ ಹಮ್ಮಿಕೊಳ್ಳಬೇಕು ಎಂದು ವರದಿಯಲ್ಲಿ ಸರಕಾರಕ್ಕೆ ಸೂಚಿಸಲಾಗಿದೆ.
ವರದಿಯನ್ನು ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಪ್ರಾದೇಶಿಕ ಅಸಮತೋಲನ ನೀಗಿಸಲು ಸರಕಾರ ಎಲ್ಲ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತದೆ ಎಂದರು.
(ಇನ್ಫೋ ವಾರ್ತೆ)