ಬೆಳಗಾವಿ, ಬೀದರ್ ಸೇರಿದಂತೆ ಈ ವರ್ಷ 8 ಸಕ್ಕರೆ ಕಾರ್ಖಾನೆ
ಬೆಂಗಳೂರು : ರಾಜ್ಯದಲ್ಲಿ 25 ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭಿಸಲು ಬೇಡಿಕೆಯಿದ್ದು , ಅವುಗಳಲ್ಲಿ 8 ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ವರ್ಷದಲ್ಲೇ ಅಸ್ತಿತ್ವಕ್ಕೆ ಬರಲಿವೆ ಎಂದು ಸಕ್ಕರೆ ಸಚಿವ ಎ.ಕೃಷ್ಣಪ್ಪ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು, ಹೊಸ ಕಾರ್ಖಾನೆಗಳ ಸ್ಥಾಪನೆಯಲ್ಲಿ ಸರ್ಕಾರ ಮಾತ್ರವಲ್ಲದೆ ಖಾಸಗಿಯವರೂ ಭಾಗಿಯಾಗುತ್ತಾರೆ ಎಂದು ಹೇಳಿದರು. ಕಬ್ಬು ಹೆಚ್ಚಾಗಿ ಬೆಳೆಯುವ ಪ್ರದೇಶಗಳನ್ನು ಗುರ್ತಿಸಿ ಕಾರ್ಖಾನೆಗಳನ್ನು ಪ್ರಾರಂಭಿಸಲಾಗುವುದು. ಅದರೆ, ಬೆಳಗಾವಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಗರಿಷ್ಠ ಪ್ರಮಾಣದ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗಲಿವೆ ಎಂದರು.
ಬೆಳಗಾವಿಯಲ್ಲಿ ಉದ್ಘಾಟಿಸಲಾಗಿರುವ ಸಕ್ಕರೆ ನಿರ್ದೇಶನಾಲಯವನ್ನು ಬೆಂಗಳೂರಿಗೆ ವರ್ಗಾಯಿಸುವ ಕುರಿತು ಕೇಳಿಬರುತ್ತಿರುವ ಒತ್ತಾಯದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ಈವರೆಗೆ ಸ್ಥಳಾಂತರದ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದು ಹೇಳಿದರು. ಕಾರ್ಖಾನೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಗಟ್ಟಲು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಉದ್ದೇಶದಿಂದ ಸಹಕಾರಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು . ನೌಕರರ ನೇಮಕಾತಿ ಮತ್ತು ಇನ್ನಿತರೆ ವಿಷಯಗಳಲ್ಲಿ ಅಕ್ರಮಗಳು ನಡೆದಾಗ ಆಡಳಿತ ವರ್ಗವನ್ನು ಹೊಣೆಯಾಗಿಸಲು ಕಾಯ್ದೆಯಲ್ಲಿ ತಿದ್ದುಪಡಿ ತರಲು ಉದ್ದೇಶಿಸಲಾಗಿದೆ ಎಂದು ಕೃಷ್ಣಪ್ಪ ಹೇಳಿದರು.
(ಇನ್ಫೋ ವಾರ್ತೆ)