ಅಂತರರಾಷ್ಟ್ರೀಯ ಚಿತ್ರೋತ್ಸವ : ಜೂ.29 ರಂದು ಸುಷ್ಮಾ ಬೆಂಗಳೂರಿಗೆ
ಬೆಂಗಳೂರು : ನಗರದಲ್ಲಿ ನಡೆಯುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೂರ್ವ ಸಿದ್ಧತೆಗಳ ಬಗ್ಗೆ ಮಾತುಕತೆ ನಡೆಸುವ ಉದ್ದೇಶದಿಂದ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಜೂನ್ 29 ರಂದು ಬೆಂಗಳೂರಿಗೆ ಆಗಮಿಸುವರು ಎಂದು ವಾರ್ತಾ ಸಚಿವ ಬಿ.ಕೆ. ಚಂದ್ರಶೇಖರ್ ತಿಳಿಸಿದ್ದಾರೆ.
ಇನ್ನು ಮೂರ್ನಾಲ್ಕು ದಿನಗಳಲ್ಲಿ ಸ್ವಾಗತ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಚಂದ್ರಶೇಖರ್ ಹೇಳಿದರು. ಕನ್ನಡ ಚಿತ್ರೋದ್ಯಮದ ಪ್ರಸಕ್ತ ಸ್ಥಿತಿಗತಿಯ ಬಗ್ಗೆ ಮಾತನಾಡುತ್ತಿದ್ದ ಅವರು, ಕೀಳು ಮನರಂಜನೆ ಚಿತ್ರಗಳಿಗೆ ತೆರಿಗೆ ವಿನಾಯಿತಿ ರದ್ದು ಸಂಬಂಧ ಮುಂದಿನ ಅಧಿವೇಶನದಲ್ಲಿ ಚರ್ಚಿಸಿ, ಅಗತ್ಯ ಬಿದ್ದರೆ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದರು.
ಥಿಯೇಟರ್ಗಳಿಗೆ ಕಾಯಕಲ್ಪ : ಶುಚಿತ್ವ, ಹವಾ ನಿಯಂತ್ರಣ, ಕುಡಿಯುವ ನೀರು ಸೇರಿದಂತೆ ಚಿತ್ರ ಮಂದಿರಗಳಲ್ಲಿ ಪ್ರೇಕ್ಷಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕಾನೂನು ಜಾರಿ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಹಳೆಯ ಕನ್ನಡ ಚಿತ್ರಮಂದಿರಗಳ ಪ್ರದರ್ಶನಕ್ಕಾಗಿ ಆರು ಚಿತ್ರ ಮಂದಿರಗಳನ್ನು ಆಯ್ಕೆ ಮಾಡಲಾಗುವುದು ಹಾಗೂ ಚಲನಚಿತ್ರಗಳ ಗುಣಮಟ್ಟ ಕಾಯ್ದುಕೊಳ್ಳುವ ಸಂಬಂಧ ವಿಚಾರ ಸಂಕಿರಣಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು.
ಈ ಬಾರಿಯ ರಾಜ್ಯ ಪ್ರಶಸ್ತಿ ಕುರಿತು ಕೇಳಿ ಬರುತ್ತಿರುವ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಚಂದ್ರಶೇಖರ್- ಈ ವಿಚಾರದಲ್ಲಿ ನಾವು ಏನನ್ನೂ ಮಾಡುವಂತಿಲ್ಲ . ಆಸ್ಕರ್ ಪ್ರಶಸ್ತಿ ಆಯ್ಕೆಯಲ್ಲಿ ಕೂಡ ತೀರ್ಪುಗಾರರ ತೀರ್ಮಾನವೇ ಅಂತಿಮ ಎಂದರು.
(ಇನ್ಫೋ ವಾರ್ತೆ)