ಸರ್ಕಾರಿ ಶಾಲೆ ದತ್ತು ಪಡೆಯಲು ಹೊರನಾಡ ಕನ್ನಡಿಗರಿಗೆ ಕೃಷ್ಣ ಕರೆ
ಮದ್ದೂರು : ಕರ್ನಾಟಕದಿಂದ ವಿದೇಶಗಳಿಗೆ ಹೋಗಿ ನೆಲೆಸಿರುವ ಅನಿವಾಸಿ ಕನ್ನಡಿಗರು, ಕರ್ನಾಟಕ ರಾಜ್ಯದ ಸರಕಾರಿ ಶಾಲೆಗಳನ್ನು ದತ್ತು ಪಡೆದು, ಅವುಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಕರೆ ನೀಡಿದ್ದಾರೆ.
ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಜಿಲ್ಲಾ ಪಂಚಾಯ್ತಿ , ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಅಮೆರಿಕಾ ಇಂಡಿಯಾ ಫೌಂಡೇಷನ್ ಸಂಯುಕ್ತಾಶ್ರಯದಲ್ಲಿ ಆರಂಭಿಸಲಾಗಿರುವ ಕಂಪ್ಯೂಟರ್ ಕಲಿಕಾ ಕೇಂದ್ರ ಉದ್ಘಾಟಿಸಿ ಅವರು, ಮಾತನಾಡುತ್ತಿದ್ದರು.
ವೈಜ್ಞಾನಿಕ ತಿಳಿವಳಿಕೆಯಿಂದ ಮಾತ್ರ ಗ್ರಾಮೀಣಾಭಿವೃದ್ಧಿ ಸಾಧ್ಯ. ಗ್ರಾಮೀಣ ಮಕ್ಕಳಲ್ಲಿ ವೈಜ್ಞಾನಿಕ ಹಾಗೂ ತಾಂತ್ರಿಕ ಅರಿವು ಮೂಡಿಸುವುದು ಇಂದಿನ ಅಗತ್ಯ. ಹೀಗಾದಾಗ ಮಾತ್ರ ಗ್ರಾಮೀಣ ವಿದ್ಯಾರ್ಥಿಗಳು ನಗರ - ಪಟ್ಟಣದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧೆಗೆ ನಿಲ್ಲಲು ಸಾಧ್ಯ ಎಂದು ಕೃಷ್ಣ ಅಭಿಪ್ರಾಯಪಟ್ಟರು.
ಈ ನಿಟ್ಟಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ಸುಧಾರಿಸುವುದು ತೀರಾ ಅಗತ್ಯ. ಇದಕ್ಕೆ ಅನಿವಾಸಿ ಭಾರತೀಯರು, ಹೊರನಾಡ ಕನ್ನಡಿಗರು ಮುಂದಾಗಬೇಕು. ಶಾಲೆಗಳನ್ನು ದತ್ತು ಪಡೆದು ಗ್ರಾಮೀಣಾಭಿವೃದ್ಧಿಗೆ ನೆರವಾಗಬೇಕು ಎಂದರು.
ರಾಜ್ಯದ 2600 ಸರಕಾರಿ ಕಾಲೇಜುಗಳ ಪೈಕಿ 1600 ಕಾಲೇಜುಗಳಲ್ಲಿ ಕಂಪ್ಯೂಟರ್ ಅಳವಡಿಸಲಾಗಿದೆ ಎಂದೂ ಕೃಷ್ಣ ತಿಳಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಪ್ರೌಢ ಶಿಕ್ಷಣ ಸಚಿವ ಎಚ್. ವಿಶ್ವನಾಥ್, ಜಿಲ್ಲಾ ಉಸ್ತುವಾರಿ ಸಚಿವ ಶಿವಣ್ಣ, ಶಾಸಕರಾದ ಆತ್ಮಾನಂದ, ರಾಜ್ಯ ಶಿಕ್ಷಣ ಇಲಾಖೆ ಆಯುಕ್ತರಾದ ಟಿ.ಎಂ. ವಿಜಯಭಾಸ್ಕರ್ ಮೊದಲಾದವರು ಪಾಲ್ಗೊಂಡಿದ್ದರು.
(ಇನ್ಫೋ ವಾರ್ತೆ)
ವಾರ್ತಾ
ಸಂಚಯ
ಮುಖಪುಟ
/
ಕೃಷ್ಣಗಾರುಡಿಯ
ಕನ್ನಡಿ