ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ ಮಾತುಕತೆ ಸಭೆ ಮುಂದಕ್ಕೆ
ಮುಂಬೈ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದವನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಭಾನುವಾರ ಕರೆಯಲಾಗಿದ್ದ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಮುಂದೂಡಲಾಗಿದೆ. ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಈ ಸಭೆ ಕರೆದಿದ್ದರು.
ಆದರೆ, ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ತಮಗೆ ಈ ಸಭೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ ಎಂದು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸಭೆಯನ್ನು ಮುಂದಕ್ಕೆ ಹಾಕಲಾಗಿದೆ. ಈ ವಿಷಯವನ್ನು ಮಹಾರಾಷ್ಟ್ರ ಸರಕಾರ ಹೊರಡಿಸಿರುವ ಅಧಿಕೃತ ಪ್ರಕಟಣೆ ತಿಳಿಸಿದೆ.
ರಾಜ್ಯ ಭೀಕರ ಬರ ಎದುರಿಸುತ್ತಿದ್ದು, ಅಭಾವ ಪರಿಸ್ಥಿತಿ ಎದುರಿಸಲು ತಾವು ಹಲವು ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಭಾನುವಾರದ ಸಭೆಯಲ್ಲಿ ಪಾಲ್ಗೊಳ್ಳಲಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಕೃಷ್ಣ ತಮ್ಮ ಮನವಿಯಲ್ಲಿ ತಿಳಿಸಿದ್ದರು. ದೆಹಲಿಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಸಭೆ ಸಂದರ್ಭದಲ್ಲಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸ್ರಾವ್ ದೇಶ್ಮುಖ್ ಅವರೊಂದಿಗೆ ಕೂಡ ಈ ಬಗ್ಗೆ ಚರ್ಚಿಸಿದ್ದರು.
ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ಮುಂದಿನ ಸಭೆಯ ದಿನಾಂಕವನ್ನು ತಾವು ಸರ್ವಪಕ್ಷ ನಾಯಕರೊಂದಿಗೆ ಚರ್ಚಿಸಿ ನಿರ್ಧರಿಸುವುದಾಗಿಯೂ ಕೃಷ್ಣ ತಿಳಿಸಿದ್ದಾರೆ.