ದೇಶದ ಬರಪೀಡಿತ ಪ್ರದೇಶಗಳಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ
ಬೆಂಗಳೂರು : ಕೇಂದ್ರ ಸರ್ಕಾರದಿಂದ ಹೆಚ್ಚಿನ ಪ್ರಮಾಣದ ಆಹಾರ ಧಾನ್ಯ ಪಡೆದು ಬಡವರಿಗೆ ವಿತರಿಸುವ ಕ್ರಿಯಾ ಯೋಜನೆಯಾಂದನ್ನು ರಾಜ್ಯ ಸರ್ಕಾರ ಸಿದ್ಧಪಡಿಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಖಾತೆಯ ರಾಜ್ಯ ಸಚಿವ ಡಿ.ಬಿ.ಇನಾಂದಾರ್ ತಿಳಿಸಿದ್ದಾರೆ.
ರಾಜ್ಯದ ರೈತರು ಬೆಳೆಗಾಗಿ ಮಳೆಯನ್ನೇ ನಂಬಿಕೊಂಡಿದ್ದಾರೆ. ದೇಶದ ಬರಗಾಲ ಪೀಡಿತ ಪ್ರದೇಶಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಇನಾಂದಾರ್ ಹೇಳಿದರು. ರಾಜ್ಯದ 175 ತಾಲ್ಲೂಕುಗಳ ಪೈಕಿ 147 ತಾಲ್ಲೂಕುಗಳು ಬರಗಾಲಕ್ಕೆ ತುತ್ತಾಗಿದ್ದು , ಈ ಭಾಗದ ಜನತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದರು.
ಸಂಪೂರ್ಣ ಗ್ರಾಮೀಣ ರೋಜಗಾರ್ ಯೋಜನೆಯಡಿಯಲ್ಲಿ 10 ಸಾವಿರ ಕೋಟಿ ರುಪಾಯಿ ಮೌಲ್ಯದ ಆಹಾರ ಧಾನ್ಯಗಳನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು , ಇದರಲ್ಲಿ ಹೆಚ್ಚಿನ ಪಾಲನ್ನು ರಾಜ್ಯ ಸರ್ಕಾರ ಅಪೇಕ್ಷಿಸುತ್ತಿದೆ. ಕೇಂದ್ರ ಸರ್ಕಾರ ಈಗಾಗಲೇ ಒದಗಿಸಿದ್ದ 1 ಲಕ್ಷ ಟನ್ ಆಹಾರ ಧಾನ್ಯಗಳನ್ನು ಬರ ಪೀಡಿತ ಜನರಿಗೆ ವಿತರಿಸಲಾಗಿದೆ ಎಂದು ಇನಾಂದಾರ್ ಹೇಳಿದರು.
(ಪಿಟಿಐ)