ಬೆಂಗಳೂರು ವಿ.ವಿ.ಯಿಂದ 3 ದಿನಗಳಸಾಹಿತ್ಯ-ಸಂಸ್ಕೃತಿ ಉತ್ಸವ
ಬೆಂಗಳೂರು : ವಿದ್ಯಾರ್ಥಿಗಳಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಗೌರವ ಮೂಡಿಸುವ ಉದ್ದೇಶದಿಂದ ಬೆಂಗಳೂರು ವಿ.ವಿ. ನವೆಂಬರ್29ರಿಂದ ಡಿ.1ರವರೆಗೆ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಉತ್ಸವ ಹಮ್ಮಿಕೊಂಡಿದೆ. ಕನ್ನಡ ರಾಜ್ಯೋತ್ಸವವನ್ನು ಇನ್ನೂ ಹೆಚ್ಚು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಈ ಉತ್ಸವ ನಡೆಯುತ್ತಿದೆ.
ಕನ್ನಡ ಸಾಹಿತ್ಯ ಪರಿಷತ್, ಜಾನಪದ ಮತ್ತು ಯಕ್ಷಗಾನ ಅಕಾಡಮಿ, ನಾಟಕ ಅಕಾಡಮಿಗಳ ಸಹಯೋಗದೊಂದಿಗೆ ಈ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ. ಸಿದ್ದಪ್ಪ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಜ್ಞಾನಭಾರತಿಯಲ್ಲಿರುವ ಸಭಾಂಗಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಈ ಉತ್ಸವದಲ್ಲಿ ಪ್ರಾದೇಶಿಕ ಭಾಷೆ- ಸಾಹಿತ್ಯ, ಧರ್ಮ-ರಾಜಕೀಯ-ಸಾಹಿತ್ಯ ಮೊದಲಾದ ವಿಷಯಗಳ ಬಗ್ಗೆ ಚಿಂತನ -ಮಂಥನ ಕಾರ್ಯಕ್ರಮವೂ ನಡೆಯಲಿದೆ.
ರಾಜ್ಯದ ಅರಣ್ಯ ಸಚಿವ ಕೆ.ಎಚ್. ರಂಗನಾಥ್ ಉತ್ಸವ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹರಿಕೃಷ್ಣ ಪುನರೂರು, ಯಕ್ಷಗಾನ ಅಕಾಡಮಿಯ ಡಾ.ಹಿ.ಶಿ. ರಾಮಚಂದ್ರೇಗೌಡ, ನಾಟಕ ಅಕಾಡಮಿಯ ನಾಗೇಶ್ ಮತ್ತು ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ ಎಂದೂ ಸಿದ್ದಪ್ಪ ತಿಳಿಸಿದರು.
ಉತ್ಸವದ ಅಂಗವಾಗಿ ಖ್ಯಾತ ಕವಿಗಳಿಂದ ಕವಿಗೋಷ್ಠಿಯನ್ನು ಸಹ ಏರ್ಪಡಸಿಲಾಗಿದ್ದು, ಅದು ಡಿಸೆಂಬರ್ 1ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದೂ ಅವರು ಹೇಳಿದರು. ಡಾ. ಸಿ. ವೀರಣ್ಣ ಹಾಗೂ ಡಾ. ಸಿದ್ದಲಿಂಗಯ್ಯ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...