‘1037 ಕೋಟಿ ರುಪಾಯಿ ವೆಚ್ಚದಲ್ಲಿ ರಾಜ್ಯದ ರಸ್ತೆಗಳ ಅಭಿವೃದ್ಧಿ’
ಗುಲ್ಬರ್ಗಾ: ರಾಜ್ಯದ ರಸ್ತೆಗಳ ಅಭಿವೃದ್ಧಿಯ ಮೊದಲ ಹಂತದ ಕಾಮಗಾರಿ ಈಗಾಗಲೇ ಆರಂಭಗೊಂಡಿದೆ. ರಸ್ತೆ ಅಭಿವೃದ್ಧಿಗೆ ವಿಶ್ವಬ್ಯಾಂಕ್ ನೆರವು ನೀಡಿದ್ದು, 1037 ಕೋಟಿ ರುಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ ಎಂದು ರಾಜ್ಯ ಲೋಕೋಪಯೋಗಿ ಸಚಿವ ಧರ್ಮಸಿಂಗ್ ಹೇಳಿದ್ದಾರೆ.
ಶನಿವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ರಸ್ತೆ ಕಾಮಗಾರಿಗಳನ್ನು ಚುರುಕುಗೊಳಿಸಲು ಕ್ರಮಕೈಗೊಳ್ಳಲಾಗುವುದು. ತ್ವರಿತಗತಿಯ ಕಾಮಗಾರಿಗೆ ದೂರವಾಣಿ, ವಿದ್ಯುತ್ ಕೇಬಲ್ಗಳು ಅಡ್ಡಿಯುಂಟು ಮಾಡುತ್ತಿದ್ದು, ಇವುಗಳನ್ನು ಸ್ಥಳಾಂತರಿಸಲು ಸೂಚಿಸಲಾಗಿದೆ. ಈ ಕಾರ್ಯಕ್ಕಾಗಿ ಸಂಬಂಧಿಸಿದ ಇಲಾಖೆಗಳಿಗೆ ಪಾವತಿಸಲು 30 ಕೋಟಿ ರುಪಾಯಿಗಳನ್ನು ಮೀಸಲಿಡಲಾಗಿದೆ ಎಂದೂ ಅವರು ಹೇಳಿದರು.
140 ಕೋಟಿ ರುಪಾಯಿ ವೆಚ್ಚದಲ್ಲಿ ಬೀದರ್ - ಹತ್ತಿಗುಡೂರು ನಡುವಿನ 189 ಕಿ.ಮೀ ರಸ್ತೆ, 72 ಕೋಟಿ ರುಪಾಯಿ ವೆಚ್ಚದಲ್ಲಿ ಸಿಂಧನೂರು - ಗುಡಗುಂಟ ಮಧ್ಯದ 78 ಕಿ.ಮೀ. ರಸ್ತೆ, 67 ಕೋಟಿ ರುಪಾಯಿ ವೆಚ್ಚದಲ್ಲಿ 76 ಕಿ.ಮೀಟರ್ಗಳ ಕಲ್ಮಲಾ- ಸಿಂಧನೂರು ನಡುವಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಸ್ಪರ್ಧಾತ್ಮಕ ಬಿಡ್ ಅನ್ನು ಸಹ ಅಂತಿಮಗೊಳಿಸಲಾಗಿದೆ ಎಂದರು.
ಇದಲ್ಲದೆ 244 ಕೋಟಿ ರುಪಾಯಿ ವೆಚ್ಚದಲ್ಲಿ 9 ಸೇತುವೆಗಳ ನಿರ್ಮಾಣಕ್ಕೆ ಬಿಡ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಈ ಎಲ್ಲ ಕಾಮಗಾರಿಗಳನ್ನೂ ಕಾಲಬದ್ಧ ಯೋಜನೆಯಡಿ ನಿಗದಿತ ಸಮಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಧರ್ಮಸಿಂಗ್ ವಿವರಿಸಿದರು.
ಕುಡಿಯುವ ನೀರು : 215 ಕೋಟಿ ರುಪಾಯಿಗಳ ವೆಚ್ಚದಲ್ಲಿ ರಾಜೀವಗಾಂಧೀ ಪ್ರಾದೇಶಿಕ ನೀರು ಪೂರೈಕೆ ಯೋಜನೆಯಡಿ ಜೇವರ್ಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಿಂಗ್ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...