ರಾಜ್ಯದ ಹಣಕಾಸು ಪರಿಸ್ಥಿತಿ ಉತ್ತಮವಾಗಿದೆ :ಎಸ್.ಎಂ. ಕೃಷ್ಣ
ಬಾದಾಮಿ : ಭಾರತದ ಇನ್ನಿತರ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕ ರಾಜ್ಯದ ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿದೆ ಎಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಹೇಳಿದ್ದಾರೆ. 1001 ಜೋಡಿ ಸಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.
ರಾಜ್ಯದ ಮಾಜಿ ವಿತ್ತ ಸಚಿವ ಸಿದ್ಧರಾಮಯ್ಯ ಅವರು, ರಾಜ್ಯದ ಹಣಕಾಸಿನ ಪರಿಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಒತ್ತಾಯಿಸುತ್ತಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ಈಗಾಗಲೇ ಯೋಜನಾ ಇಲಾಖೆ ಮತ್ತು ರಾಜ್ಯ ಅರ್ಥ ಸಚಿವಾಲಯ ನೀಡಿರುವ ವರದಿಯೇ ಇದನ್ನು ಸ್ಪಷ್ಟಪಡಿಸಿದೆ. ವಸ್ತುಸ್ಥಿತಿ ಹೀಗಿರುವಾಗ ಶ್ವೇತಪತ್ರ ಹೊರಡಿಸುವ ಅಗತ್ಯ ಇಲ್ಲ ಎಂದರು.
ರಾಜ್ಯ ಸರಕಾರವು, ಸರಕಾರಿ ನೌಕರರ ಸಂಬಳ ಹೊರತುಪಡಿಸಿ ಮತ್ತಾವುದೇ ಬಿಲ್ಗಳ ಚೆಕ್ ಪಾವತಿ ಮಾಡಿಲ್ಲ ಎಂಬ ಆರೋಪದ ಬಗ್ಗೆ ವಿವರಣೆ ನೀಡಿದ ಮುಖ್ಯಮಂತ್ರಿಗಳು, ಯಾವಾಗಲೂ ಆದ್ಯತೆಯ ಮೇಲೆ ಹಣ ಬಿಡುಗಡೆ ಮಾಡಲಾಗುತ್ತದೆ. ಇದು ಮಾಜಿ ಅರ್ಥ ಸಚಿವರಿಗೆ ತಿಳಿದ ವಿಚಾರವೇ ಆಗಿದೆ ಎಂದರು.
ಸರಕಾರ ಕೃಷ್ಣ ಮೇಲ್ದಂಡೆ ಯೋಜನೆಗೆ 3000 ಕೋಟಿ ರುಪಾಯಿ ಹಾಗೂ ರಸ್ತೆ ನಿರ್ಮಾಣ ಮತ್ತು ಅಭಿವೃದ್ಧಿಗಾಗಿ 400 ಕೋಟಿ ರುಪಾಯಿ ವೆಚ್ಚ ಮಾಡುತ್ತಿದೆ. ಬರದ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿವೆ. ರಾಜ್ಯದ ಬೇಡಿಕೆಗೆ ತಕ್ಕಂತೆ ವಿದ್ಯುತ್ ಉತ್ಪಾದನೆ ಆಗಿಲ್ಲ. ಹೀಗಾಗಿ ಹೊರರಾಜ್ಯದಿಂದ ವಿದ್ಯುತ್ ಖರೀದಿಸಲಾಗುತ್ತಿದೆ. ಇದಕ್ಕೆ ಹೆಚ್ಚುವರಿಯಾಗಿ ಹಣ ವೆಚ್ಚವಾಗುತ್ತದೆ ಎಂದೂ ಅವರು ವಿವರಿಸಿದರು.
ಉತ್ತರ ಕರ್ನಾಟಕ ಅಭಿವೃದ್ಧಿಗೆ ಆದ್ಯತೆ: ಪ್ರಾದೇಶಿಕ ಅಸಮತೋಲನ ನಿವಾರಿಸಲು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಪ್ರತ್ಯೇಕ ಪ್ರಾಥಮಿಕ ಶಿಕ್ಷಣ ನಿರ್ದೇಶನಾಲಯ ಸ್ಥಾಪಿಸಿದಂತೆ, ಇಲ್ಲ ಇಲಾಖೆಗಳೂ ನಿರ್ದೇಶನಾಲಯ ಸ್ಥಾಪಿಸಲು ಕ್ರಮಕೈಗೊಳ್ಳಬೇಕಾಗಿದೆ ಎಂದು ಅವರು ಹೇಳಿದರು.
ಪ್ರಾದೇಶಿಕ ಅಸಮತೋಲನ ಅಧ್ಯಯನ ಸಮಿತಿ ನೀಡುವ ವರದಿಯ ಮೇಲೆ ವಿಶೇಷ ಕಾರ್ಯಯೋಜನೆ ರೂಪಿಸಲಾಗುವುದು. ಕೃಷ್ಣ ಮೇಲ್ದಂಡೆ ಯೋಜನೆಯಿಂದ ಮುಳುಗಡೆಯಾಗುತ್ತಿರುವ ಬಾಗಲಕೋಟೆ ಜನರಿಗೆ ಪರಿಹಾರ ನೀಡುವ ಬಗ್ಗೆ ಶೀಘ್ರವೇ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೃಷ್ಣ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ












Click it and Unblock the Notifications