ಕಾನೂನು ಪಾತಕಿಗಳಿಗೆ ಸರ್ಕಾರದ ವಜ್ರಮುಷ್ಠಿ ಪ್ರಹಾರ-ಖರ್ಗೆ
ಬೆಂಗಳೂರು : ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಯಾಗುವ ಸಮಾಜಘಾತಕ ಶಕ್ತಿಗಳನ್ನು ನಿರ್ದಾಕ್ಷಿಣ್ಯವಾಗಿ ಹತ್ತಿಕ್ಕಲಾಗುವುದು. ಹಾಗೂ ಅಂಥ ಶಕ್ತಿಗಳ ವಿರುದ್ಧ ಸರ್ಕಾರ ವಜ್ರ ಮುಷ್ಠಿ ಪ್ರಹಾರ ನಡೆಸುವುದೆಂದು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಸಮಾಜ ಘಾತಕ ಶಕ್ತಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಕಳೆದ ಎರಡು ಮೂರು ದಿನಗಳಿಂದ ಕುದಿ ಮೌನದ ಪರಿಸ್ಥಿತಿಯಲ್ಲಿ ಬೇಯುತ್ತಿದ್ದ ಕೊಡಗು ಜಿಲ್ಲೆಯಲ್ಲೀಗ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು , ಹೆಚ್ಚುವರಿ ಪೊಲೀಸ್ ಪಡೆಗಳನ್ನು ಕೊಡಗಿನಲ್ಲಿ ನಿಯೋಜಿಸಲಾಗಿದೆ ಎಂದು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ ಹೇಳಿದರು. ಪೂಜಾಸ್ಥಳದ ಮೇಲೆ ಕೆಲವು ದುಷ್ಕರ್ಮಿಗಳು ನಡೆಸಿದ ದಾಳಿಯಿಂದಾಗಿ ಕೊಡಗಿನಲ್ಲಿ ಸೋಮವಾರ ಉದ್ವಿಗ್ನ ಸ್ಥಿತಿ ಉಂಟಾಗಿತ್ತು .
ಸಿಮಿ ಮಾದರಿಯಲ್ಲಿ ಭಜರಂಗದಳವನ್ನು ನಿಷೇಧಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆಯೇ ಎನ್ನುವ ಪ್ರಶ್ನೆಗೆ ಸ್ಪಷ್ಟವಾಗಿ ಉತ್ತರಿಸದ ಖರ್ಗೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಕಠಿಣ ಕ್ರಮಗಳನ್ನು ಸರ್ಕಾರ ಕೈಗೊಳ್ಳುವುದು ಎಂದರು.
ಕೋಮು ಸೌಹಾರ್ದತೆ ಕಾಪಾಡಲು ಹಾಗೂ ಕಾನೂನನ್ನು ಕೈಗೆ ತೆಗೆದುಕೊಳ್ಳುವ ಜನರನ್ನು ವಿರೋಧಿಸುವಂತೆ ಖರ್ಗೆ ಜನತೆಗೆ ಕರೆ ನೀಡಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...