‘ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ 130 ಕೋಟಿ ರುಪಾಯಿ ಸಬ್ಸಿಡಿ’
ಹುಬ್ಬಳ್ಳಿ : ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗಾಗಿಯೇ ರಾಜ್ಯ ಸರಕಾರ 130 ಕೋಟಿ ರುಪಾಯಿಗಳ ಸಬ್ಸಿಡಿಯನ್ನು ಬಿಡುಗಡೆ ಮಾಡಲಿದೆ ಎಂದು ರಾಜ್ಯ ಸಣ್ಣ ಕೈಗಾರಿಕಾ ಸಚಿವ ಎಸ್. ಆರ್. ಕಾಶಪ್ಪನವರ್ ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಹುಬ್ಬಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಸಚಿವರು, ಹೊಸ ಕೈಗಾರಿಕಾ ನೀತಿಯ ಅಡಿಯಲ್ಲಿ ತಂತ್ರಜ್ಞಾನದ ಮೇಲ್ದರ್ಜೆಗೇರಿಸುವುದು, ಮೂಲಭೂತ ಸೌಕರ್ಯ ಒದಗಿಸುವುದು, ಹಾಗೂ ಮಾನವ ಸಂಪನ್ಮೂಲದ ಅಭಿವೃದ್ಧಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಅಧ್ಯಯನ ನಡೆಸಲು ಅಧಿಕಾರಿಗಳ ಮಟ್ಟದ ಸಮಿತಿ ರಚಿಸಲಾಗಿದೆ. ಸಮಿತಿಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಾಗತಿಕರಣ ಹಾಗೂ ಡಬ್ಲ್ಯುಟಿಓದೊಂದಿಗೆ ಮಾಡಿಕೊಂಡಿರುವ ಒಪ್ಪಂದದಿಂದ ಸಣ್ಣ ಕೈಗಾರಿಕೆಗಳ ಮೇಲೆ ಉಂಟಾಗಿರುವ ಪರಿಣಾಮ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಹುಬ್ಬಳ್ಳಿಯಲ್ಲಿ ಶುಕ್ರವಾರ ಕಾರ್ಯಾಗಾರವೊಂದನ್ನು ಸಹ ಏರ್ಪಡಿಸಲಾಗಿತ್ತು.
(ಪಿ.ಟಿ.ಐ/ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...