ಬೆಂಗಳೂರು - ಮೈಸೂರು ನಡುವೆ 4 ಪಥದ ರಸ್ತೆ ನಿರ್ಮಾಣ
ಮೈಸೂರು : ರಾಜ್ಯದ ರಾಜಧಾನಿ ಬೆಂಗಳೂರು ಹಾಗೂ ಸಾಂಸ್ಕೃತಿಕ ರಾಜಧಾನಿ ಮೈಸೂರಿನ ನಡುವೆ ನಾಲ್ಕು ಪಥಗಳ ರಸ್ತೆ ನಿರ್ಮಿಸಲಾಗುವುದು ಎಂದು ರಾಜ್ಯ ಲೋಕೋಪಯೋಗಿ ಸಚಿವ ಧರ್ಮಸಿಂಗ್ ಹೇಳಿದ್ದಾರೆ. 350 ಕೋಟಿ ರುಪಾಯಿಗಳ ವೆಚ್ಚದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮೈಸೂರಿನ ಬಿಲ್ಡರ್ಸ್ ಅಸೋಸಿಯೇಷನ್ ಶನಿವಾರ ಇಲ್ಲಿ ಹಮ್ಮಿಕೊಂಡಿದ್ದ ದಕ್ಷಿಣ ಪ್ರಾದೇಶಿಕ ಬಿಲ್ಡರ್ಸ್ ಸಮಾವೇಶದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ನಾಲ್ಕು ಪಥದ ರಸ್ತೆ ವಿಸ್ತರಣೆ ಯೋಜನೆಯನ್ನು ಸ್ವಾನ್ ಕನ್ಸಲ್ಟೆಂಟ್ ಸಂಸ್ಥೆಗೆ ವಹಿಸಲಾಗಿದೆ ಎಂದರು.
ಈ ಸಂಸ್ಥೆಯು ವಿಸ್ತರಣೆ ಯೋಜನೆಯ ಸಾಧಕ ಭಾದಕಗಳ ಹಾಗೂ ಸಾಧ್ಯಾಸಾಧ್ಯತೆಗಳ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಿದೆ. 2002ನೇ ಇಸವಿಯಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದರು. ಇದಲ್ಲದೆ ಎರಡೂ ನಗರಗಳ ಪಾರಂಪರಿಕ ಕಟ್ಟಡಗಳ ಹಾಗೂ ಸ್ಮಾರಕಗಳ ರಕ್ಷಣೆಗೆ ಸರಕಾರ ವಿಶೇಷ ಕ್ರಮ ಕೈಗೊಂಡಿದೆ ಎಂದೂ ಸಿಂಗ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...