ಜನಪರ ಸರ್ಕಾರ, ಇ-ಆಡಳಿತ ಹತ್ತಿರ : ಅಧಿವೇಶನದಲ್ಲಿ ರಮಾದೇವಿ
ಬೆಂಗಳೂರು: ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳನ್ನು ಕಲ್ಪಿಸುವ ಮಸೂದೆಯನ್ನು ಪ್ರಸಕ್ತ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ರಾಜ್ಯಪಾಲೆ ವಿ.ಎಸ್.ರಮಾದೇವಿ ಪ್ರಕಟಿಸಿದ್ದಾರೆ.
ರಾಜ್ಯದ ಪ್ರಗತಿಗೆ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನೇತೃತ್ವದ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸದ್ಯದಲ್ಲಿಯೇ ರಾಜ್ಯ ಸರ್ಕಾರ ತನ್ನ ವಿದ್ಯುನ್ಮಾನ ಆಡಳಿತ (ಇ-ಗವರ್ನೆನ್ಸ್) ನೀತಿಯನ್ನು ಪ್ರಕಟಿಸುವುದು ಎಂದು ರಮಾದೇವಿ ಹೇಳಿದರು. ಸೋಮವಾರ (ಜ.21) ಪ್ರಾರಂಭವಾದ ಉಭಯ ಸದನಗಳನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳ ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳ ವಿವಿಧ ಕಾಮಗಾರಿಗಳನ್ನು ಮುಂಬರುವ ವರ್ಷದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಉದ್ದೇಶಿಸಿದೆ. 907 ಕಾಮಗಾರಿಗಳನ್ನು ಹೊಂದಿರುವ ಪಶ್ಚಿಮ ವಾಹಿನಿ ಯೋಜನೆಯು 24 ಸಾವಿರ ಹೆಕ್ಟೇರ್ಭೂಮಿಗೆ ಉಪಯೋಗವಾಗಲಿದೆ. ಈ ಯೋಜನೆಯಡಿ ಹಲವಾರು ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳು ಕುಡಿಯುವ ನೀರು ಪಡೆಯಲಿವೆ ಎಂದು ರಮಾದೇವಿ ಹೇಳಿದರು.
ವಿದ್ಯುತ್, ಶಿಕ್ಷಣ, ನೀರಾವರಿ, ವಸತಿ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ರಾಜ್ಯಪಾಲರು ಸ್ಪಷ್ಟಪಡಿಸಿದರು.
(ಪಿಟಿಐ)
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ