ದೇವೇಗೌಡ, ಶಿವಕುಮಾರ್, ಈಶ್ವರಪ್ಪ , ಸಿಂಧ್ಯಾ,ಅಂಬರೀಷ್ಗೆ ಹೆಚ್ಚಿನ ಭದ್ರತೆ
ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಸ್ಪರ್ಧೆಯಿಂದಾಗಿ ದೇಶದ ಗಮನ ಸೆಳೆದಿರುವ ಕನಕಪುರ ಲೋಕಸಭಾ ಕ್ಷೇತ್ರದ ಮರು ಚುನಾವಣೆಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಫೆಬ್ರವರಿ 21 ರಂದು ಚುನಾವಣೆ ನಡೆಯಲಿದೆ.
ಜಿದ್ದಾಜಿದ್ದಿನ ಸ್ಪರ್ಧಿಗಳಾದ ದೇವೇಗೌಡ, ಕಾಂಗ್ರೆಸ್ ಹುದ್ದರಿ, ಸಹಕಾರ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಬಿಜೆಪಿಯ ಕೆ.ಎಸ್.ಈಶ್ವರಪ್ಪ ಅವರಿಗೆ ವಿಶೇಷ ಭದ್ರತೆಯನ್ನು ಕಲ್ಪಿಸಲಾಗಿದೆ. ಅದೇರೀತಿ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ , ಸಂಯುಕ್ತ ಜನತಾದಳದ ಪಿ.ಜಿ.ಆರ್.ಸಿಂಧ್ಯಾ ಮತ್ತು ಕಾಂಗ್ರೆಸ್ ಸಂಸದ ಅಂಬರೀಷ್ ಅವರಿಗೂ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕ ವಿ.ವಿ. ಭಾಸ್ಕರ್ ಬುಧವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
21 ಎಸ್ಪಿ ಅಥವಾ ಡಿಸಿಪಿ ದರ್ಜೆಯ ಅಧಿಕಾರಿಗಳು, 48 ಡಿಎಸ್ಪಿಗಳು, 5824 ಪೊಲೀಸ್ ಪೇದೆಗಳು ಮತ್ತು 1764 ಹೋಂ-ಗಾರ್ಡ್ಗಳನ್ನು ಚುನಾವಣಾ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ. ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಯಲು ಪೊಲೀಸರು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವರು ಎಂದು ಭಾಸ್ಕರ್ ಹೇಳಿದರು.
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಗಳೂ ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಿದ್ದು , 312 ಸಂಚಾರಿ ಪೊಲೀಸ್ ಪಡೆಗಳನ್ನು ರಚಿಸಲಾಗಿದೆ. ದೇಶದ ಅತ್ಯಂತ ದೊಡ್ಡ ಲೋಕಸಭಾ ಕ್ಷೇತ್ರಗಳಲ್ಲಿ ಒಂದೆಂದು ಪರಿಗಣಿತವಾಗಿರುವ ಕನಕಪುರ ಲೋಕಸಭಾ ಕ್ಷೇತ್ರದಲ್ಲಿ 2960 ಮತಗಟ್ಟೆಗಳ ಪೈಕಿ 1146 ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಹಾಗೂ 1212 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳು ಎಂದು ಪರಿಗಣಿಸಲಾಗಿದೆ ಎಂದು ಭಾಸ್ಕರ್ ತಿಳಿಸಿದರು.
(ಪಿಟಿಐ)
ಮುಖಪುಟ / ಕನಕಪುರವೆಂಬ ಕುರುಕ್ಷೇತ್ರ