‘ಬೆಂಗಳೂರಲ್ಲಿ ಹೊಸ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ಅನುಮತಿ ಇಲ್ಲ’
ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತ ಹೊಸ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ಅನುಮತಿ ನೀಡದಿರಲು ರಾಜ್ಯ ಸರಕಾರ ತೀರ್ಮಾನಿಸಿದೆ. ಈ ವಿಷಯವನ್ನು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಜಿ. ಪರಮೇಶ್ವರ್ ಗುರುವಾರ ತಿಳಿಸಿದರು.
ಕಳೆದ ವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಈ ನಿರ್ಧಾರ ತಳೆಯಲಾಗಿದ್ದು, ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ 15ಕ್ಕೂ ಹೆಚ್ಚು ಅರ್ಜಿಗಳನ್ನು ತಿರಸ್ಕರಿಸಲಾಯಿತು ಎಂದು ತಿಳಿಸಿದರು.
ಹೊಸ ಎಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪಿಸಲು 29 ಅರ್ಜಿಗಳು ಸರಕಾರಕ್ಕೆ ಬಂದಿವೆ. ಬೆಂಗಳೂರಿನಲ್ಲಿ ಈ ಹೊತ್ತು 56 ಎಂಜಿನಿಯರಿಂಗ್ ಕಾಲೇಜುಗಳಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮತ್ತಷ್ಟು ಹೊಸ ಎಂಐನಿಯರಿಂಗ್ ಕಾಲೇಜು ಸ್ಥಾಪನೆಗೆ ಅನುಮತಿ ನೀಡದಿರಲು ಸರಕಾರ ತೀರ್ಮಾನಿಸಿತು ಎಂದು ವಿವರಿಸಿದರು.
ಒಂದೊಮ್ಮೆ ಈ ಶಿಕ್ಷಣ ಸಂಸ್ಥೆಗಳು ಬೆಂಗಳೂರಿನ ಹೊರಗೆ ಅಂದರೆ ರಾಜ್ಯದ ಬೇರೆ ಊರುಗಳಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಲು ಉತ್ಸುಕವಾಗಿದ್ದರೆ, ಅಂತಹ ಸಂಸ್ಥೆಗಳಿಗೆ ಅನುಮತಿ ನೀಡಲಾಗುವುದು ಎಂದೂ ಪರಮೇಶ್ವರ್ ತಿಳಿಸಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...