ವಿಜ್ಞಾನ ಕಲಿಯಲು ಹಳ್ಳಿ ವಿದ್ಯಾರ್ಥಿಗಳಿಗೆ ‘ಸುವರ್ಣ’ ಅವಕಾಶ
ಬೆಂಗಳೂರು : ಸುವರ್ಣ ಕರ್ನಾಟಕ ಆಚರಣೆ ಅಂಗವಾಗಿ ರಾಜ್ಯದ 590 ಹೋಬಳಿಗಳ ಪದವಿಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ಬೋಧನೆ ಆರಂಭಿಸಲಾಗುವುದು ಎಂದು ರಾಜ್ಯ ಸರ್ಕಾರಿ ಮೂಲಗಳು ಹೇಳಿವೆ.
ಗ್ರಾಮಾಂತರ ಪ್ರದೇಶಗಳಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ವಿಜ್ಞಾನ ಕಾಲೇಜುಗಳಿವೆ. ಅಲ್ಲದೆ ವಿಜ್ಞಾನ ವಿಷಯ ಆಯ್ದುಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯೇ. ಹಾಗಾಗಿ ವಿಜ್ಞಾನ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹೆಗಾರ, ಖ್ಯಾತ ವಿಜ್ಞಾನಿ ಮತ್ತು ಕನ್ನಡಿಗ ಸಿಎನ್ಆರ್ ರಾವ್ ಮತ್ತು ಇತರ ತಜ್ಞರು ಮೂಲವಿಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.
ವಿಜ್ಞಾನದತ್ತ ವಿದ್ಯಾರ್ಥಿಗಳ ಸೆಳೆಯುವಂತೆ ಅವರು ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಈ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗ್ರಾಮೀಣ ಮಟ್ಟದಲ್ಲಿ ವಿಜ್ಞಾನ ವಿಷಯಗಳನ್ನು ಪರಿಚಯಿಸುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)