ರಾಜ್ಯದಲ್ಲಿ ಬರಪರಿಸ್ಥಿತಿ ವಿಷಾದನೀಯ : ಕೇಂದ್ರ ತಂಡ
ಬೆಂಗಳೂರು : ರಾಜ್ಯದಲ್ಲಿ ಬರಪರಿಸ್ಥಿತಿ ಕಷ್ಟಕರವಾಗಿದೆ ಎಂದು ಕೇಂದ್ರ ಅಧ್ಯಯನ ತಂಡ ಅಭಿಪ್ರಾಯಪಟ್ಟಿದ್ದು, ಈ ಕುರಿತು ಅದು ಮಾಸಾಂತ್ಯ ವರದಿ ಒಪ್ಪಿಸಲಿದೆ.
ಅಧ್ಯಯನ ತಂಡದ ಮುಖ್ಯಸ್ಥ ಹಾಗೂ ಕೇಂದ್ರ ಕೃಷಿ ಮತ್ತು ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಬಹುಗುಣ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿ, ಈ ಸಂಬಂಧ ಚರ್ಚಿಸಿದರು.
ಆನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಹುಗುಣ, ರಾಜ್ಯದ ಹಲವೆಡೆ ಬರ ಪರಿಸ್ಥಿತಿ ಬಹಳ ಕಷ್ಟಕರವಾಗಿದೆ. ಬರುವ ವಾರಾಂತ್ಯದಲ್ಲಿ ಈ ಕುರಿತ ವರದಿಯನ್ನು ಕೇಂದ್ರಕ್ಕೆ ಒಪ್ಪಿಸಲಾಗುವುದು ಎಂದು ತಿಳಿಸಿದರು.
ಕೇಂದ್ರ ಎಷ್ಟು ಹಣ ಬಿಡುಗಡೆ ಮಾಡಲಿದೆ ಎಂದು ತೂರಿಬಂದ ಪ್ರಶ್ನೆಗೆ ಉತ್ತರಿಸಿದ ಅವರು, ತಂಡ ವರದಿ ಸಲ್ಲಿಸಲಿದೆ. ಎಷ್ಟು ಹಣ ಬಿಡುಗಡೆ ಮಾಡಬೇಕೆಂಬುದು ಕೇಂದ್ರಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ರಾಜ್ಯದ ಬರಪರಿಸ್ಥಿತಿಯನ್ನು ತಂಡ ಸೂಕ್ತವಾಗಿ ಅಧ್ಯಯನ ನಡೆಸಿದೆ ಎಂಬ ವಿಶ್ವಾಸವಿದೆ. ಇನ್ನೂ ಎಂಟು ಜಿಲ್ಲೆಗಳ ಅಧ್ಯಯನ ನಡೆಯಲಿದೆ. ರಾಜ್ಯಕ್ಕೆ ಹೆಚ್ಚಿನ ನೆರವು ನೀಡುವಂತೆ ಕೇಂದ್ರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.
(ಏಜನ್ಸೀಸ್)