ನಂದಿ ಬೆಟ್ಟ ,ಕೆಆರ್ಎಸ್ ಚೆಂದಹೆಚ್ಚಿಸಲು ಹೊಸ ಯತ್ನ
ಬೆಂಗಳೂರು : ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ನಂದಿ ಬೆಟ್ಟ ಹಾಗೂ ಬೃಂದಾವನ ಉದ್ಯಾನದ ಉಸ್ತುವಾರಿಯನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಬೆಂಗಳೂರು ಹೊರವಲಯದಲ್ಲಿರುವ ನಂದಿ ಬೆಟ್ಟ ಹಾಗೂ ಮೈಸೂರಿನಲ್ಲಿರುವ ಬೃಂದಾವನ ಉದ್ಯಾನವನ್ನು ಅನುಕ್ರಮವಾಗಿ ತೋಟಗಾರಿಕೆ ಇಲಾಖೆ ಹಾಗೂ ನೀರಾವರಿ ಇಲಾಖೆ ನೋಡಿಕೊಳ್ಳುತ್ತಿದ್ದವು. ಇವುಗಳನ್ನು ಪೂರ್ಣಪ್ರಮಾಣದ ಪ್ರವಾಸಿ ತಾಣಗಳನ್ನಾಗಿ ಪರಿವರ್ತಿಸುವ ದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖೆಗೆ ವಹಿಸಿಕೊಡಲಾಗಿದೆ ಎಂದು ತಿಳಿಸಿದರು.
ಲಿಂಗನಮಕ್ಕಿ ಜಲಾಶಯವನ್ನು ಸಹ ಬೃಂದಾವನ ಉದ್ಯಾನದ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಆದ್ಯತೆ ನೀಡಲಾಗುವುದು. ಪ್ರವಾಸೋದ್ಯಮ ಮತ್ತು ಹೋಟೆಲ್ ನಿರ್ವಹಣೆಯಲ್ಲಿ ತರಬೇತಿ ನೀಡಲು ಕಾಲೇಜೊಂದನ್ನು ಆರಂಭಿಸಲಾಗುವುದು ಎಂದು ಅವರು ವಿವರಿಸಿದರು.
(ದಟ್ಸ್ ಕನ್ನಡ ವಾರ್ತೆ)