ಜಾತಿ ಲೆಕ್ಕಾಚಾರದಲ್ಲಿ ರಾಜ್ಯ ಕಾಂಗ್ರೆಸ್ ಸಮಿತಿ ಪುನಾರಚನೆ
ಬೆಂಗಳೂರು, ಅ.18 : ಮುಂದಿನ ಹತ್ತು ದಿನಗಳ ಒಳಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ಪುನಾರಚನೆ ಮಾಡಲು ಹೈಕಮಾಂಡ್ ನಿರ್ಧರಿಸಿದೆ.
ಈ ಪುನಾರಚನೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮಲ್ಲಿಕಾರ್ಜುನ ಖರ್ಗೆ ಅವರ ಕೈ ತಪ್ಪುವುದೇ ಎಂಬ ಪ್ರಶ್ನೆ ಕಾಂಗ್ರೆಸ್ ಕಾರ್ಯಕರ್ತರಲ್ಲಿದೆ. ಜಾತಿ ಆಧಾರದಲ್ಲಿಯೇ ಪುನಾರಚನೆ ನಡೆಯಲಿದೆ ಎನ್ನಲಾಗಿದ್ದು, ಲಿಂಗಾಯಿತರು ಮತ್ತು ಒಕ್ಕಲಿಗರಿಗೆ ಪ್ರಾತಿನಿಧ್ಯ ನೀಡಲು ರಾಷ್ಟ್ರೀಯ ಕಾಂಗ್ರೆಸ್ ನಾಯಕರು ಯೋಚಿಸುತ್ತಿದ್ದಾರೆ. ಬಿಜೆಪಿಗೆ ಲಿಂಗಾಯಿತರ ಬೆಂಬಲ, ಜೆಡಿಎಸ್ ಗೆ ಒಕ್ಕಲಿಗರ ಬೆಂಬಲ ವ್ಯಕ್ತವಾಗುತ್ತಿದೆ ಎನ್ನುವ ಮಾತು ಕಾಂಗ್ರೆಸ್ ಹೈಕಮಾಂಡ್ ಕಿವಿ ತಲುಪಿದೆ. ದೇವೇಗೌಡರು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ಮುಖಂಡನನ್ನು ನೇಮಕ ಮಾಡಿದ ಸಂಗತಿಗಳನ್ನು ಕಾಂಗ್ರೆಸ್ ಗಮನಿಸುತ್ತಿದೆ.
ಸಿದ್ದರಾಮಯ್ಯ ಮತ್ತು ಡಾ.ಜಿ.ಪರಮೇಶ್ವರ ಅವರಿಗೆ ಪುನಾರಚನೆ ಸಂದರ್ಭದಲ್ಲಿ ಸೂಕ್ತ ಸ್ಥಾನಗಳು ಸಿಗುವ ಸಾಧ್ಯತೆಗಳಿವೆ. ಸ್ಥಳೀಯ ಸಂಸ್ಥೆಗಳಲ್ಲು ಕಾಂಗ್ರೆಸ್ ಹಿನ್ನಡೆ ಅನುಭವಿಸಿದ್ದನ್ನು, ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ಮಧ್ಯಂತರ ಚುನಾವಣೆ ಮತ್ತು ಸದ್ಯದ ರಾಜಕಾರಣವನ್ನು ಗಮನದಲ್ಲಿಟ್ಟುಕೊಂಡು ಪುನಾರಚನೆ ಪ್ರಕ್ರಿಯೆಯತ್ತ ಕಾಂಗ್ರೆಸ್ ಹೆಜ್ಜೆ ಇಟ್ಟಿದೆ.
(ದಟ್ಸ್ ಕನ್ನಡ ವಾರ್ತೆ)