ಮಾಧ್ಯಮಗಳಲ್ಲಿ ಪ್ರಚೋದನಕಾರಿ ಸುದ್ದಿ : ನಾಳೆ ಚರ್ಚೆ
ಬೆಂಗಳೂರು, ನ.15 : ವಾರ್ತಾ ಇಲಾಖೆ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 16ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ. ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ "ಮಾಧ್ಯಮಗಳಲ್ಲಿ ಸುದ್ದಿ ಪ್ರಚೋದನಕಾರಿಯಾಗುತ್ತಿದೆಯೇ" ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ನಡೆಯಲಿದೆ.
ರಾಜ್ಯಪಾಲ ರಾಮೇಶ್ವರ ಠಾಕೂರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಪ್ರೊ. ಬಿ.ಕೆ. ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಟೈಂಸ್ ಆಫ್ ಇಂಡಿಯಾ ಪತ್ರಿಕೆಯ ಸ್ಥಾನಿಕ ಸಂಪಾದಕ ಹೆಚ್.ಎಸ್. ಬಲರಾಂ ಅವರು ವಿಷಯ ಪ್ರವೇಶ ಮಾಡಲಿದ್ದು, ಈ ಬಗ್ಗೆ ಹಿರಿಯ ಪತ್ರಕರ್ತರ ಚರ್ಚಾಗೋಷ್ಠಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದ್ದು, ಆಸಕ್ತರು ಮುಂಚಿತವಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಥವಾ ವಾರ್ತಾ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ಶಾಖೆಯಲ್ಲಿ ಆಹ್ವಾನಪತ್ರಿಕೆಗಳನ್ನು ಪಡೆದುಕೊಳ್ಳಲು ಕೋರಲಾಗಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications