ಕಳ್ಳಭಟ್ಟಿ ತಯಾರಿಕಾ ಘಟಕಗಳ ನಾಶಕ್ಕೆ ಕಟ್ಟಪ್ಪಣೆ
ಬೆಂಗಳೂರು, ಡಿ. 19 : ಬೆಂಗಳೂರು ನಗರ ಜಿಲ್ಲೆಯಲ್ಲಿ ಅಸ್ತಿತ್ವದಲ್ಲಿರುವ ಕಳ್ಳಭಟ್ಟಿ ತಯಾರಿಕಾ ಘಟಕಗಳನ್ನು ಕೂಡಲೇ ನಾಶಪಡಿಸುವಂತೆ ಹಾಗೂ ಕಳ್ಳಭಟ್ಟಿಗೆ ಸಂಬಂಧಿಸಿದ ಯಾವುದೇ ಅಕ್ರಮ ಚಟುವಟಿಕೆಗಳು ಜಿಲ್ಲೆಯಲ್ಲಿ ನಡೆಯದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಎಂ. ಎ. ಸಾದಿಕ್ ಅವರು ಅಬಕಾರಿ ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ.
ರಾಜ್ಯದಲ್ಲಿ ಸಾರಾಯಿ ಮಾರಾಟ ನಿಷೇಧದ ಹಿನ್ನೆಲೆಯಲ್ಲಿ ಕಳ್ಳಭಟ್ಟಿ ತಯಾರಿಕಾ ಹಾಗೂ ಮಾರಾಟ ಜಾಲಗಳ ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತು ನಗರದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಕಳ್ಳಭಟ್ಟಿ ತಯಾರಿಕಾ ಹಾಗೂ ಮಾರಾಟ ಜಾಲಗಳನ್ನು ಸಂಪೂರ್ಣವಾಗಿ ತಡೆಗಟ್ಟಲು ವಿಶೇಷ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ಗಡಿ ಭಾಗಗಳಲ್ಲಿ ನಡೆಯುತ್ತಿರುವ ಕಳ್ಳಭಟ್ಟಿ ದಂಧೆಯನ್ನು ಕೊನೆಗೊಳಿಸಲು ನೆರೆಯ ತಮಿಳುನಾಡು ಸರ್ಕಾರದ ಅಧಿಕಾರಿಗಳ ಸಹಕಾರ ಅಗತ್ಯವಿದೆ. ಆದಕಾರಣ ಅವರ ಸಂಪೂರ್ಣ ಸಹಕಾರ ಪಡೆಯಲು ಅವರೊಂದಿಗೆ ಸಭೆ ನಡೆಸಿ, ಜಂಟಿ ಕಾರ್ಯಾಚರಣೆಯ ರೂಪು ರೇಷೆಗಳನ್ನು ಸಿದ್ಧಪಡಿಸುವತ್ತ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸಲಹೆ ಮಾಡಿದರು. ಅಂದಹಾಗೆ, ಸಾರಾಯಿ ನಿಷೇಧ ಪರ್ವಕಾಲದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಸನ್ನಿಹಿತವಾಗುತ್ತಿದೆ ಕರ್ನಾಟಕದಲ್ಲಿ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications