ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಸಿದ್ಧ: ಕೃಷ್ಣ
ಮೈಸೂರು, ಏ.8: ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಣಾಳಿಕೆ ಸಿದ್ಧವಾಗಿದೆ. ಮುಂದಿನ ಮೂರು ದಿನಗಳಲ್ಲಿ ಬಿಡುಗಡೆ ಮಾಡುತ್ತಿರುವುದಾಗಿ ಕರ್ನಾಟಕ ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಎಸ್.ಎಂ.ಕೃಷ್ಣ ಮಂಗಳವಾರ ಚಾಮುಂಡಿ ಬೆಟ್ಟದಲ್ಲಿ ತಿಳಿಸಿದರು.
ಎಸ್.ಎಂ. ಕೃಷ್ಣ ಅವರು ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು. ಹೆಲಿಪ್ಯಾಡ್ನಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು,ಮೇ.10ರ ಮೊದಲ ಹಂತದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು 2800 ಅಭ್ಯರ್ಥಿಗಳು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ರಾಜ್ಯದ ಎಲ್ಲ 224 ವಿಧಾನಸಭೆ ಕ್ಷೇತ್ರಗಳಿಂದ ಕಾಂಗ್ರೆಸ್ ಪಕ್ಷ ಸ್ಪರ್ಧಿಸಲಿದೆ. ಪಕ್ಷದಲ್ಲಿ ಮಹಿಳೆಯರು ಮತ್ತು ಯುವಕರಿಗೆ ಆದ್ಯತೆ ನೀಡಲಾಗುತ್ತದೆ. ಕಾಂಗ್ರೆಸ್ ಪಕ್ಷದ ಚುನಾವಣೆ ಸಮಿತಿಯೊಂದಿಗೆ ಬುಧವಾರ ಬೆಂಗಳೂರಿನಲ್ಲಿ ಸಭೆ ಸೇರಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದೇವೆ ಎಂದು ತಿಳಿಸಿದರು.
ಮೂಲ ಕಾಂಗ್ರೆಸ್ ಮತ್ತು ವಲಸೆ ಕಾಂಗ್ರೆಸ್ ನಾಯಕರನ್ನು ಇಬ್ಭಾಗ ಮಾಡಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ತಾನು ರಾಜ್ಯದ ಯಾವುದೇ ವಿಧಾನಸಭೆ ಕ್ಷೇತ್ರದ ಸೀಟಿಗಾಗಿ ಅರ್ಜಿ ಸಲ್ಲಿಸಿಲ್ಲ ಎಂದ ಅವರು, ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೋ ಇಲ್ಲವೊ ಎಂಬ ಬಗ್ಗೆ ಕೃಷ್ಣ ಸ್ಪಷ್ಟಪಡಿಸಲಿಲ್ಲ.
(ದಟ್ಸ್ಕನ್ನಡ ವಾರ್ತೆ)