ಕರ್ನಾಟಕವನ್ನು ಮಾದರಿ ರಾಜ್ಯ ಮಾಡಲು ಯಡ್ಡಿ ಪಣ
ಶಿಕಾರಿಪುರ, ಏ.24: ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತರಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ತಮ್ಮ ಸಾವಿರಾರು ಅಭಿಮಾನಿಗಳು ಮತ್ತು ಕಾರ್ಯಕರ್ತರೊಂದಿಗೆ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರವನ್ನು ಸಲ್ಲಿಸಿದರು.
ಯಡಿಯೂರಪ್ಪ ನಾಮಪತ್ರ ಸಲ್ಲಿಸುವ ಕಾರ್ಯಕ್ರಮ ಪೂರ್ವ ನಿಯೋಜಿತವಾಗಿದ್ದರಿಂದ ಸಾವಿರಾರು ಸಂಖ್ಯೆ ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದರು.ಇಂದು ಬೆಳಗ್ಗೆ ಶಿಕಾರಿಪುರಕ್ಕೆ ಆಗಮಿಸಿದ ಯಡಿಯೂರಪ್ಪ ಅವರಿಗೆ ಕಾರ್ಯಕರ್ತರಿಂದ ಭವ್ಯ ಸ್ವಾಗತ ದೊರೆಯಿತು.ಪಟ್ಟಣದ ಹುಚ್ಚುರಾಯ ಸ್ವಾಮಿ ದೇಗುಲದಿಂದ ಮೆರವಣಿಗೆ ಮೂಲಕ ಮಿನಿ ವಿಧಾನಸೌಧಕ್ಕೆ ತಲುಪಿದ ಯಡಿಯೂರಪ್ಪ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಮಾಜಿ ಸಚಿವರಾದ ಡಿ.ಎಚ್.ಶಂಕರಮೂರ್ತಿ, ಕೆ.ಎಸ್.ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಮತ್ತಿತರ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು.
ನಾಮಪತ್ರ ಸಲ್ಲಿಸಿದ ನಂತರ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಈ ಸಲ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸ್ಟಷ್ಟ ಬಹುಮತ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ರಾಜ್ಯದ್ಯಂತ ಬಿಜೆಪಿಯನ್ನು ಪ್ರಚಂಡ ಬಹುಮತದಿಂದ ಆರಿಸಿ ತರಲು ಮತದಾರರ ಆಶೀರ್ವಾದ ಅವಶ್ಯ ಎಂದರು.
ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡಲು ಬಿಜೆಪಿ ಪಣ ತೊಟ್ಟಿದ್ದು, ಮತದಾರರು ನಮ್ಮ ಜತೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿಕೊಂಡರು. ಕಾಂಗ್ರೆಸ್ ಮತ್ತು ಜೆಡಿ(ಎಸ್)ನ ವಿಶ್ವಾಸ ದ್ರೋಹಕ್ಕೆ ವಿಷಾದ ವ್ಯಕ್ತಪಡಿಸಿದ ಅವರು, ಈ ಚುನಾವಣೆಯಲ್ಲಿ ಜನತೆ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಟೀಕಿಸಿದರು. ತಮ್ಮ ವಿರುದ್ಧ ಸಮಾಜವಾದಿ ಪಕ್ಷದ ರಾಜ್ಯಾದ್ಯಕ್ಷ ಎಸ್.ಬಂಗಾರಪ್ಪ ಸ್ಪರ್ಧಿಸುವ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಈ ಸಲದ ಚುನಾವಣೆಯಲ್ಲಿ ಶಿಕಾರಿಪುರದ ಜನತೆ ಇಲ್ಲಿಂದ ಮುಖ್ಯಮಂತ್ರಿಯನ್ನು ಆರಿಸಿ ಕಳುಹಿಸಲಿದ್ದಾರೆ ಎಂದಷ್ಟೆ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)