ಕಾಂಗ್ರೆಸ್ ಮಾತ್ರ ಸ್ಥಿರ ಸರ್ಕಾರ ನೀಡಲು ಸಾಧ್ಯ: ಕೃಷ್ಣ
ಬೆಂಗಳೂರು,ಏ.28: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸೋಮವಾರ ಕಾಂಗ್ರೆಸ್ ಪ್ರಚಾರಕ್ಕೆ ಪಾಂಚಜನ್ಯ ಮೊಳಗಿಸಿದರು. ಬೆಂಗಳೂರಿನ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ.
ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ಅಪಾರ ಬೆಂಬಲಿಗರೊಂದಿಗೆ ಗವಿಗಂಗಾಧರೇಶ್ವರ ದೇವಸ್ಥಾನಕ್ಕೆ ತೆರಳಿದ ಎಸ್.ಎಂ.ಕೃಷ್ಣ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಪೂಜಾ ಕೈಂಕರ್ಯ ಮುಗಿಸಿ ಪಕ್ಷದ ಪ್ರಚಾರ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಪೂಜೆಯ ನಂತರ ಬಸವನಗುಡಿ ಮತ್ತು ಚಿಕ್ಕಪೇಟೆ ಮತಕ್ಷೇತ್ರದಲ್ಲಿ ಮತಯಾಚಿಸಿದ ಕೃಷ್ಣ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.
ಮತಯಾಚನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣ, ಈ ಸಲದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಿದರು. ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ ಜನತೆಯನ್ನು ಸಂಪೂರ್ಣವಾಗಿ ವಂಚಿಸಿವೆ ಎಂದು ಟೀಕಿಸಿದ ಅವರು, ಕಾಂಗ್ರೆಸ್ ಪಕ್ಷದಿಂದ ಮಾತ್ರ ಸ್ಥಿರ ಸರ್ಕಾರ ನೀಡಲು ಸಾಧ್ಯ ಎಂದು ಹೇಳಿದರು. ಆದ್ದರಿಂದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಮತವನ್ನು ನೀಡಿ ಎಂದು ಕೋರಿದರು. ಈ ಸಂದರ್ಭದಲ್ಲಿ ಬಸವನಗುಡಿ ಕ್ಷೇತ್ರದ ಅಭ್ಯರ್ಥಿ ಚಂದ್ರಶೇಖರ್ ಮತ್ತು ಚಿಕ್ಕಪೇಟೆ ಅಭ್ಯರ್ಥಿ ಆರ್.ವಿ.ದೇವರಾಜ್ ಉಪಸ್ಥಿತರಿದ್ದರು.
ಎಸ್.ಎಂ.ಕೃಷ್ಣ ಇಂದು ರಾಮಕೃಷ್ಣ ಹೆಗಡೆ ಅವರ ಪುತ್ರಿ ಮಮತಾ ನಿಚ್ಚಾನಿ ಸ್ಪರ್ಧಿಸಿರುವ ರಾಮನಗರ ಕ್ಷೇತ್ರಕ್ಕೆ ತೆರಳಿ ಮತಯಾಚಿಸುವ ಕಾರ್ಯಕ್ರಮವಿದ್ದು ಮಧ್ಯಾಹ್ನದ ನಂತರ ಕೃಷ್ಣ ರಾಮನಗರಕ್ಕೆ ತೆರಳಲಿದ್ದಾರೆ.
(ದಟ್ಸ್ಕನ್ನಡ ವಾರ್ತೆ)