ಸೋನಿಯಾ, ಸಿಂಗ್ರಿಂದ ಕಾಂಗ್ರೆಸ್ ಪ್ರಚಾರ ಅಭಿಯಾನ
ಬೆಂಗಳೂರು, ಮೇ.03: ಬಿಜೆಪಿ ಹಿರಿಯ ನಾಯಕರೆಲ್ಲರೂ ರಾಜ್ಯದಲ್ಲಿ ಒಂದು ಸುತ್ತಿನ ಪ್ರಚಾರ ಕಾರ್ಯ ಮುಗಿಸಿದ ನಂತರ ಇದೀಗ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ಸರದಿ ಆರಂಭವಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಧಾನ ಮಂತ್ರಿ ಡಾ.ಮನಮೋಹನ್ ಸಿಂಗ್ ಮೇ 6ರಂದು ರಾಜ್ಯಕ್ಕೆ ಆಗಮಿಸಲಿದ್ದು, ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 6ರಂದು ರಾಜ್ಯಕ್ಕೆ ಆಗಮಿಸಲಿರುವ ಸೋನಿಯಾ ಗಾಂಧಿ ಮತ್ತು ಡಾ.ಮನಮೋಹನ್ ಸಿಂಗ್ ನಗರದ ಕೃಷ್ಣರಾಜಪುರಂ ಮತಕ್ಷೇತ್ರದಿಂದ ಚುನಾವಣಾ ಪ್ರಚಾರ ಕಾರ್ಯವನ್ನು ಆರಂಭಿಸಲಿದ್ದಾರೆ ಎಂದರು.
ಇದಕ್ಕೂ ಮೂದಲು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಚುನಾವಣೆ ಕಾರ್ಯತಂತ್ರದ ಕುರಿತು ಕೆಪಿಸಿಸಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ನಂತರ ಮೇ 7ರಂದು ಈ ಇಬ್ಬರು ಮುಖಂಡರು ತುಮಕೂರಿನಲ್ಲಿ ನಡೆಯಲಿರುವ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಖರ್ಗೆ ವಿವರಿಸಿದರು.
ರಾಜ್ಯದ 224 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿರುವ ಹಿನ್ನಲೆಯಲ್ಲಿ ಅಭ್ಯರ್ಥಿಗಳ ಪರ ಮತಯಾಚಿಸಲು ಮುಖಂಡರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಕಳೆದ ಕೆಲ ದಿನಗಳ ಹಿಂದೆ ಖಾಸಗಿ ವಾಹಿನಿಯೊಂದರ ಚುನಾವಣೆ ಪೂರ್ವ ಸಮೀಕ್ಷೆ ನಂತರ ಭಾರೀ ಉತ್ಸಾಹದಲ್ಲಿರುವ ಕಾಂಗ್ರೆಸ್ ಮುಖಂಡರು, ಇದೀಗ ಸೋನಿಯಾ ಗಾಂಧಿ ಮತ್ತು ಮನಮೋಹನ್ ಸಿಂಗ್ ಅವರು ಚುನಾವಣೆ ಪ್ರಚಾರದಲ್ಲಿ ಭಾಗವಹಿಸುತ್ತಿರುವುದು ಕಾಂಗ್ರೆಸ್ ಪಾಳೆಯದಲ್ಲಿ ಭಾರಿ ಹುರುಪು ತಂದಿರುವುದು ಸುಳ್ಳಲ್ಲ.
(ದಟ್ಸ್ ಕನ್ನಡ ವಾರ್ತೆ)