ಇದೇ ಮೊದಲ ಬಾರಿಗೆ ತುಮಕೂರಿಗೆ ಸೋನಿಯಾ
ತುಮಕೂರು, ಮೇ 6: ಚುನಾವಣೆ ಪ್ರಚಾರ ಕೈಗೊಳ್ಳಲು ಇದೇ ಪ್ರಥಮ ಬಾರಿಗೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ ಮೇ 7 ರಂದು ತುಮಕೂರಿಗೆ ಆಗಮಿಸಲಿದ್ದಾರೆ. ನಂತರ ಬೆಂಗಳೂರಿನ ಕೃಷ್ಣರಾಜಪುರಂನ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಮೂರು ದಿನಗಳ ಚುನಾವಣೆ ಪ್ರಚಾರಕ್ಕಾಗಿ ಮೇ 7ರಂದು ಸೋನಿಯಾ ಅವರೊಂದಿಗೆ ಆಗಮಿಸಬೇಕಿದ್ದ ಪ್ರಧಾನಿ ಮನಮೋಹನ್ ಸಿಂಗ್ ಮೇ8 ರಂದು ಬರಲಿದ್ದಾರೆ. ಸೋನಿಯಾಗಾಂಧಿ ಅವರ ಪ್ರಚಾರ ಸಭೆಯಲ್ಲಿ ಪ್ರದೇಶ ಕಾಂಗ್ರೆಸ್ ಮುಖಂಡರು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರು ಹಾಗೂ ಮಾಜಿ ಶಾಸಕರು ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಶುರುವಾಗಿದೆ. ತುಮಕೂರು ಜಿಲ್ಲೆಯ ಎಲ್ಲ 22 ಸ್ಥಾನಗಳಲ್ಲಿ ಕಾಂಗ್ರೆ ಸ್ ಗೆಲ್ಲುವುದು ಖಚಿತ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಫಿ ಅಹಮ್ಮದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೇ 7ರಂದು ಬೆಳಗ್ಗೆ 11.45ಕ್ಕೆ ತುಮಕೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಯನ್ನು ಉದ್ದೇಶಿಸಿ ಸೋನಿಯಾಗಾಂಧಿ ಮಾತನಾಡಲಿದ್ದಾರೆ. ಸುಮಾರು 20-25 ಸಾವಿರ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಶಫಿ ಅಹಮ್ಮದ್ ತಿಳಿಸಿದರು.
(ದಟ್ಸ್ಕನ್ನಡ ವಾರ್ತೆ)