ಎರಡನೇ ಹಂತದ ಚುನಾವಣೆ ಪ್ರಚಾರ ಅಂತ್ಯ
ಬೆಂಗಳೂರು, ಮೇ 14: ಕುತೂಹಲ ಕೆರಳಿಸಿರುವ ಎರಡನೇ ಹಂತದ ಚುನಾವಣಾ ಬಹಿರಂಗ ಪ್ರಚಾರ ಇಂದು ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. 10 ಜಿಲ್ಲೆಗಳ 66 ವಿಧಾನಸಭೆ ಕ್ಷೇತ್ರಗಳು ಮೇ 16ರ ಚುನಾವಣೆ ಸಜ್ಜಾಗಿದ್ದು ಶಿಕಾರಿಪುರ ಹಾಗೂ ಬಳ್ಳಾರಿ ಕ್ಷೇತ್ರಗಳು ತೀವ್ರ ಕುತೂಹಲ ಮೂಡಿಸಿವೆ.
ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಮತದಾನಕ್ಕೆ 24 ಗಂಟೆಗಳ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಿದೆ. ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಚುನಾವಣೆ ಕ್ಷೇತ್ರಗಳನ್ನು ತೊರೆಯುವಂತೆ ಚುನಾವಣಾಧಿಕಾರಿಗಳು ಸೂಚಿಸಿದ್ದಾರೆ. ಮದ್ಯದ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಕಣದಲ್ಲಿರುವ ಅಭ್ಯರ್ಥಿಗಳು ಮಾತ್ರ ಮನೆಮನೆಗೆ ತೆರಳಿ ಪ್ರಚಾರ ಮಾಡಲು ಅವಕಾಶವಿದೆ.
ಒಟ್ಟು 12,270 ಮತಗಟ್ಟೆಗಳಲ್ಲಿ ಶೇ.60ರಷ್ಟು ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳು ಮೇ 16ರ ಎರಡನೇ ಹಂತದ ಚುನಾವಣೆಗೆ ಸಿದ್ಧವಾಗುತ್ತಿವೆ.
ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್.ಬಂಗಾರಪ್ಪ ಹಾಗೂ ಬಿ.ಎಸ್.ಯಡಿಯೂರಪ್ಪ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದರೆ, ಬಳ್ಳಾರಿಯಲ್ಲಿ ಗಣಿಧಣಿಗಳ ನಡುವೆ ತೀವ್ರ ಪೈಪೋಟಿ ಉಂಟಾಗಿದೆ. ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್, ಕರುಣಾಕರ ರೆಡ್ಡಿ, ಶ್ರೀರಾಮುಲು, ಸಂತೋಷ್ ಲಾಡ್ ಸೇರಿದಂತೆ 66 ವಿಧಾನಸಭೆ ಕ್ಷೇತ್ರಗಳಲ್ಲಿ 590 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 1.10 ಕೋಟಿ ಮತದಾರರು ತಮ್ಮ ನೆಚ್ಚಿನ ನಾಯಕರ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
(ದಟ್ಸ್ಕನ್ನಡ ವಾರ್ತೆ)