ಕೈಬೀಸಿ ಕರೆಯುತಿದೆ ಕೊಡಗು ಪ್ರವಾಸೋದ್ಯಮ
ಮಡಿಕೇರಿ, ಜೂನ್.13: ಕೊಡಗು ಜಿಲ್ಲೆಯ ಒಂಬತ್ತು ಪ್ರವಾಸಿ ಸ್ಥಳಗಳ ಅಭಿವೃದ್ಧಿಗಾಗಿ ಇತ್ತೀಚೆಗೆ ರಾಜ್ಯ ಸರ್ಕಾರ 1ಕೋಟಿ ರು.ಗಳನ್ನು ಬಿಡುಗಡೆ ಮಾಡಿತ್ತು. ಕರ್ನಾಟಕದ ಕಾಶ್ಮೀರ-ಕೊಡಗು ಪ್ರವಾಸಿಗರನ್ನು ಕೈಬೀಸಿ ಕರೆಯಲು ಪ್ರವಾಸೋದ್ಯಮ ಇಲಾಖೆ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ.
ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು 2.43 ಕೋಟಿ ರು.ಗಳ ಬೇಡಿಕೆಯನ್ನು ಜಿಲ್ಲಾಧಿಕಾರಿ ಕೆ.ಆರ್.ನಿರಂಜನ್ ಪ್ರವಾಸೋದ್ಯಮ ಇಲಾಖೆಗೆ ಸಲ್ಲಿಸಿದ್ದರು. ಕೊಡಗು ಜಿಲ್ಲೆಯಲ್ಲಿ ಹೋಂಸ್ಟೇ ಪರಿಕಲ್ಪನೆ ಯಶಸ್ವಿಯಾದ ಹಿನ್ನಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಮತ್ತಷ್ಟು ಆಸಕ್ತಿ ವಹಿಸಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕೊಡಗು ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ಅಭಿವೃದ್ಧಿಪಡಿಸಲು 1ಕೋಟಿ ರು.ಗಳನ್ನು ಬಿಡುಗಡೆ ಮಾಡಿತು. ಸೋಮವಾರಪೇಟೆ ತಾಲೂಕಿನ ಹೊನ್ನಮ್ಮನಕೆರೆ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು 30 ಲಕ್ಷ ರು.ಗಳು ಹಾಗೂ ಅಬ್ಬಿ ಜಲಪಾತವನ್ನು ಅಭಿವೃದ್ಧಿಪಡಿಸಲು 20 ಲಕ್ಷ ರು.ಗಳನ್ನು ಖರ್ಚು ಮಾಡಲಾಗಿದೆ.
ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತ ಹಾಗೂ ಮಕ್ಕಳಗುಡಿ ಗಿರಿಧಾಮದಲ್ಲಿ ಪ್ರವಾಸಿಗರಿಗೆ ಸೌಲಭ್ಯಗಳನ್ನು ಒದಗಿಸಲು ಹಾಗೂ ವಿರಾಜಪೇಟೆ ತಾಲೂಕಿನ ಇರ್ಪು ಜಲಪಾತದ ಅಭಿವೃದ್ಧಿಗೆ 10 ಲಕ್ಷ ರು.ಗಳನ್ನು ವೆಚ್ಚ ಮಾಡಲಾಗಿದೆ. ವಿರಾಜಪೇಟೆ ಯ ಕೋಟೆ ಮುಂದಿನ ಉದ್ಯಾನವನ ಅಭಿವೃದ್ಧಿಪಡಿಸಲು 7 ಲಕ್ಷ ರು.ಗಳನ್ನು ವೆಚ್ಚಿಸಲಾಗಿದೆ.
ಮಡಿಕೇರಿ ಅರಮನೆ ಬಳಿ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಹಾಗೂ ಗದ್ದಿಗೆ ವಸ್ತುಸಂಗ್ರಹಾಲಯದ ಬಳಿ ಶೌಚಾಲಯ ನಿರ್ಮಾಣಕ್ಕಾಗಿ ತಲಾ 5 ಲಕ್ಷ ರು.ಗಳನ್ನು ವೆಚ್ಚ ಮಾಡಲಾಗಿದೆ. ಮಾರ್ಚ್ ತಿಂಗಳಲ್ಲೇ ಸರ್ಕಾರ 1 ಕೋಟಿ ರು.ಗಳನ್ನು ಬಿಡುಗಡೆ ಮಾಡಿತ್ತು. ಆದರೆ ಮುಂಗಾರು ಮಳೆ ಆರಂಭವಾಗಿರುವ ಹಿನ್ನಲೆಯಲ್ಲಿ ಬಿಡುಗಡೆಯಾದ ಹಣವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.
(ದಟ್ಸ್ಕನ್ನಡ ವಾರ್ತೆ)