ವಲಸೆ ಕ್ರೀಡಾಪಟುಗಳ ನಿಯಂತ್ರಣಕ್ಕೆ ನೀತಿ
ದಾವಣಗೆರೆ, ಜು. 1 : ಪ್ರತಿಭಾವಂತ ಕ್ರೀಡಾಪಟುಗಳು ಅನ್ಯ ರಾಜ್ಯಗಳಿಗೆ ಪಲಾಯನಗೈಯುತ್ತಿರುವುದನ್ನು ನಿಯಂತ್ರಿಸಲು ವಿಶೇಷ ಕ್ರೀಡಾ ನೀತಿಯನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಯುವಜನ ಮತ್ತು ಕ್ರೀಡಾ ಸಚಿವ ಗೂಳಿಹಟ್ಟಿ ಶೇಖರ್ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಪ್ರೋತ್ಸಾಹ ಮತ್ತು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಪ್ರತಿಭಾವಂತರು ಆಟಗಾರರು ಬೇರೆ ರಾಜ್ಯಕ್ಕೆ ವಲಸೆ ಹೋಗುತ್ತಿದ್ದಾರೆ. ಕ್ರೀಡಾಪಟುಗಳಿಗೆ ಅಗುತ್ತಿರುವ ಅನ್ಯಾಯ ಮತ್ತು ಪಕ್ಷಪಾತ ಧೋರಣೆ ಇದಕ್ಕೆ ಮುಖ್ಯ ಕಾರಣವಾಗಿದೆ. ಆದ್ದರಿಂದ ಕ್ರೀಡೆಗಳ ಬಗ್ಗೆ ಸರ್ಕಾರ ವಿಶೇಷ ಅಸಕ್ತಿ ವಹಿಸಿದ್ದು, ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯ ನೀಡಿ ವಲಸೆಯನ್ನು ತಪ್ಪಿಸಲಾಗುವುದು ಎಂದು ಹೇಳಿದರು.
ಸಮರ್ಥ ಆಟಗಾರನ ಆಯ್ಕೆ ವಿಷಯದಲ್ಲಿ ಪಕ್ಷಪಾತ ನೀತಿ ಅನುಸರಿಸಿರುವುದು, ಅನ್ಯಾಯವಾಗಿರುವುದು ಕಂಡು ಬಂದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಕ್ರೀಡೆ ಮತ್ತು ಕ್ರೀಡಾಪಟುಗಳ ಬೆಳವಣಿಗೆ ದೃಷ್ಟಿಯಿಂದ ಸಮಗ್ರ ಅಧ್ಯಯನ ನಡೆಸಿ ಕ್ರೀಡಾ ನೀತಿಯನ್ನು ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು.
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವುದರ ಜತೆಗೆ ಕ್ರೀಡೆಗಳಿಗೆ ಬೇಕಿರುವ ಅಗತ್ಯ ಸೌಲಭ್ಯವನ್ನು ಶೀಘ್ರದಲ್ಲಿ ಒದಗಿಸಲಿದೆ ಎಂದು ಹೇಳಿದರು. ಯುವಜನ ಮತ್ತು ಕ್ರೀಡಾ ಇಲಾಖೆಗೆ ಮುಖ್ಯಮಂತ್ರಿಯವರು ಈಗಾಗಲೇ 100 ಕೋಟಿ ರುಪಾಯಿಗಳ ಅನುದಾನವನ್ನು ನೀಡಿದ್ದು, ಅಗತ್ಯ ಬಿದ್ದಲ್ಲಿ ಇನ್ನು ಹೆಚ್ಚಿನ ಅನುದಾನವನ್ನು ಕೋರಲಾಗುವುದು ಎಂದು ಸಚಿವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)