ಕೇಂದ್ರದ ಭರವಸೆಗೆ ಯಡಿಯೂರಪ್ಪ ಖುಶ್
ಬೆಂಗಳೂರು, ಜು. 2 : ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರ ಹಾಗೂ ಪಟ್ಟಣಗಳ ಸಮಗ್ರ ಅಭಿವೃದ್ಧಿಯ ಹಿನ್ನಲೆಯಲ್ಲಿ 8800 ಕೋಟಿ ರುಪಾಯಿಗಳ ಅನುದಾನವನ್ನು ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ ಮನವಿಗೆ ಕೇಂದ್ರದ ನಗರಾಭಿವೃದ್ಧಿ ಸಚಿವ ಜೈಪಾಲ್ ರೆಡ್ಡಿ ಅವರು ಸಹಮತ ವ್ಯಕ್ತಪಡಿಸಿದ್ದಾರೆ.
ವಿವಿಧ ವಿಷಯಗಳಿಗೆ ಸಂಬಂಧಿಸಿ ಬುಧವಾರ ನವದೆಹಲಿಗೆ ತೆರಳಿರುವ ಸರ್ಕಾರದ ನಿಯೋಗ ಇಂದು ಮಧ್ಯಾಹ್ನ ಕೇಂದ್ರದ ನಗರಾಭಿವೃದ್ಧಿ ಸಚಿವ ಜೈಪಾಲ್ ರೆಡ್ಡಿ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳನ್ನು ಕುರಿತು ಚರ್ಚಿಸಿತು. ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗೆ ಜೈಪಾಲ್ ರೆಡ್ಡಿ ಅವರು ಸಹ ಮೆಚ್ಚುಗೆ ವ್ಯಕ್ತಪಡಿಸಿ ಬೆನ್ನು ತಟ್ಟಿದ್ದಾರೆ. ಅನುದಾನ ನೀಡಲು ಒಪ್ಪಿಗೆ ಸಹ ಸೂಚಿಸಿದ್ದಾರೆ.
ಬೆಂಗಳೂರು ಸೇರಿ ರಾಜ್ಯದ ಎಲ್ಲ ಪ್ರಮುಖ ನಗರಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಯಡಿಯೂರಪ್ಪ 8800 ಕೋಟಿ ರುಪಾಯಿಗಳ ಅನುದಾನವನ್ನು ನೀಡಬೇಕೆಂದು ಬೇಡಿಕೆ ಸಲ್ಲಿಸಿದ್ದರು. ಈ ಬಗ್ಗೆ ಕೇಂದ್ರ ಸರ್ಕಾರ ಸಕಾರಾತ್ಮಕ ಧೋರಣೆ ತಳೆದಿರುವುದರಿಂದ ಮುಖ್ಯಮಂತ್ರಿ ಯಡಿಯೂರಪ್ಪ ಹರ್ಷಚಿತ್ತರಾಗಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)